
ರಾಯಚೂರು, ಮೇ 31: ರಾಜ್ಯದಲ್ಲಿ ಜಲ ದುರಂತಗಳು ಮುಂದುವರಿದಿದ್ದು, ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರುಪಾಲಾಗಿರುವ ಘಟನೆ ಮಂತ್ರಾಲಯ ಬಳಿಯ ತುಂಗಭದ್ರಾ ನದಿಯಲ್ಲಿ ನಡೆದಿದೆ. ಮೃತರನ್ನು ಹೈದರಾಬಾದ್ ಮೂಲದ ಯುವನ ಚಂದ್ರ(5), ಸತೀಶ್(35), ಮಂತ್ರಾಲಯ ಗ್ರಾಮದ ರಾಘವೇಂದ್ರ(25), ಧನುಷ್(23) ಉರವಕೊಂಡದ ಸಂಧ್ಯಾ(22) ಎಂದು ಗುರುತಿಸಲಾಗಿದೆ. ಮತ್ತೋರ್ವ ಯುವತಿ ಅಪರ್ಣಾ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಂತ್ರಾಲಯದ ಸಂಬಂಧಿಕರ ಮನೆಯಲ್ಲಿನ ಸತ್ಯನಾರಾಯಣ ಪೂಜೆಗೆಂದು ಬಂದಿದ್ದವರು, ಕಾರ್ಯಕ್ರಮದ ಬಳಿಕ ಈಜಲೆಂದು ತುಂಗಭದ್ರಾ ನದಿಗೆ ತೆರಳಿದ್ದರು. ಈ ವೇಳೆ ನದಿಯ ನೀರಿನ ಆ ತಿಳಿಯದೆ ಈಜಲು ಹೋಗಿ ಐವರು ಜಲ ಸಮಾಧಿಯಾಗಿದ್ದಾರೆ. ಮೃತದೇಹಗಳಿಗಾಗಿ ಮೀನುಗಾರರು ಹುಡುಕಾಟ ನಡೆಸುತ್ತಿದ್ದು ಎಮ್ಮಿಗನೂರು ಡಿವೈಎಸ್ಪಿ ಭಾರ್ಗವಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂತ್ರಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಧಾರವಾಡದಲ್ಲಿ ಘೋರ ದುರಂತ; ಕೆರೆಗೆ ಈಜಲು ತೆರಳಿದ್ದ ಮೂವರು ಬಾಲಕರು ಜಲಸಮಾಧಿ
ಕಪ್ಪೆ ಚಿಪ್ಪು ಹೆಕ್ಕಲು ಹೋಗಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಸಮೀಪ ಮೊನ್ನೆ ಮೊನ್ನೆಯಷ್ಟೇ 11 ಮಂದಿ ಪ್ರಾಣ ಕಳೆದುಕೊಂಡಿದ್ದರು. ಕಪ್ಪೆ ಚಿಪ್ಪು ಸಂಗ್ರಹಿಸುತ್ತಿದ್ದ ವೇಳೆ ಏಕಾಏಕಿ ನದಿಯಲ್ಲಿ ನೀರು ಹೆಚ್ಚಾದ ಪರಿಣಾಮ ಮಹಿಳೆಯರೂ ಸೇರಿ ಹಲವರು ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿ ದುರಂತ ಸಂಭವಿಸಿತ್ತು. ಧಾರವಾಡ ತಾಲೂಕಿನ ಸಿಂಗನಹಳ್ಳಿ ಗ್ರಾಮದ ಬಳಿ ಇರುವ ಕೆರೆಯಲ್ಲಿ ಈಜಲು ಹೋದ ಮೂವರು ಬಾಲಕರು ನೀರಲ್ಲಿ ಮುಳುಗಿ ನಿನ್ನೆಯಷ್ಟೇ ಪ್ರಾಣ ಬಿಟ್ಟಿದ್ದರು. ಈ ಘಟನೆಗಳು ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ದುರಂತ ಸಂಭವಿಸಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:07 am, Sun, 31 May 26