
ಬೆಂಗಳೂರು, (ಆಗಸ್ಟ್ 29): ಕಾರವಾರ ಮೆಡಿಕಲ್ ಕಾಲೇಜು (Karwar Medical College), ಶಿವರಾಮ ಕಾರಂತ ಬಡಾವಣೆಯ ಪ್ರಮುಖ ರಸ್ತೆಗೆ ರಾಮಕೃಷ್ಣ ಹೆಗಡೆ (ramakrishna hegde) ಹೆಸರು ನಾಮಕರಣ ಮಾಡಲಾಗುವುದು ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಘೋಷಣೆ ಮಾಡಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಇಂದು (ಆಗಸ್ಟ್ 29) ನಡೆದ ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿ ಸಿಎಂ, ಉತ್ತರ ಕನ್ನಡ ಜಿಲ್ಲೆಯ ಮೆಡಿಕಲ್ ಕಾಲೇಜಿಗೆ ರಾಮಕೃಷ್ಣ ಹೆಗಡೆ ಅವರ ಹೆಸರಿಡುವ ನಿರ್ಧಾರವನ್ನು ಪ್ರಕಟಿಸಿರು.
ಗ್ರಾಮೀಣ ಆಡಳಿತಕ್ಕೆ ಹೆಗಡೆ ನೀಡಿದ ಕೊಡುಗೆಯನ್ನು ಸ್ಮರಿಸುವ ಸಲುವಾಗಿ ಪ್ರತಿ ವರ್ಷ ಅವರ ಜನ್ಮದಿನದಂದು ‘ರಾಮಕೃಷ್ಣ ಹೆಗಡೆ ಶ್ರೇಷ್ಠ ಪಂಚಾಯಿತಿ ಪ್ರಶಸ್ತಿ’ ನೀಡುವ ಕಾರ್ಯಕ್ರಮ ರೂಪಿಸುವಂತೆ ಆರ್ಡಿಪಿಆರ್ ಸಚಿವರೊಂದಿಗೆ ಚರ್ಚಿಸಿರುವುದಾಗಿ ಹಾಗೂ ಬೆಂಗಳೂರಿನ ಶಿವರಾಮ ಕಾರಂತ ಬಡಾವಣೆಯ ಪ್ರಮುಖ ರಸ್ತೆಯೊಂದಕ್ಕೆ ರಾಮಕೃಷ್ಣ ಹೆಗಡೆ ಅವರ ಹೆಸರಿಡಲು ತೀರ್ಮಾನಿಸಿರುವುದಾಗಿಯೂ” ಹೇಳಿದರು.
“ರಾಮಕೃಷ್ಣ ಹೆಗಡೆ ಅವರು ಕೇವಲ ಅಧಿಕಾರ ನಡೆಸಿದ ನಾಯಕನಲ್ಲ; ಪಂಚಾಯತ್ನಿಂದ ಸಂಸತ್ತಿನವರೆಗೆ ಹೊಸ ನಾಯಕತ್ವವನ್ನು ಸೃಷ್ಟಿಸಿದ ನಾಯಕ ಎಂದು” ಅವರು ಬಣ್ಣಿಸಿದರು. ಒಬ್ಬ ನಾಯಕನ ಕೆಲಸ ಕೇವಲ ಹಿಂಬಾಲಕರನ್ನು ಸೃಷ್ಟಿಸುವುದಲ್ಲ. ನಾಯಕರನ್ನು ಸೃಷ್ಟಿಸುವುದೇ ನಿಜವಾದ ನಾಯಕತ್ವ. ರಾಮಕೃಷ್ಣ ಹೆಗಡೆ ಅವರ ಮೂಲ ತತ್ವ ಇದೇ ಆಗಿತ್ತು. ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಕರ್ನಾಟಕದ ಪ್ರಯೋಗಗಳು ದೇಶಕ್ಕೆ ಮಾದರಿಯಾಗಿದ್ದವು. ನಂತರ ರಾಜೀವ್ ಗಾಂಧಿ ಸರ್ಕಾರದ ಅವಧಿಯಲ್ಲಿ 73 ಮತ್ತು 74ನೇ ಸಂವಿಧಾನ ತಿದ್ದುಪಡಿಗಳಿಗೆ ಈ ಚಿಂತನೆ ಪ್ರೇರಣೆಯಾಯಿತು” ಎಂದು ಅವರು ಸ್ಮರಿಸಿದರು.
“ಹೆಗಡೆ ಅವರು ಜಾತಿ ಆಧಾರಿತ ರಾಜಕಾರಣಕ್ಕೆ ಸೀಮಿತವಾಗದೆ ಮೌಲ್ಯಾಧಾರಿತ ರಾಜಕಾರಣ ಮತ್ತು ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡಿದ್ದರು. ಅವರ ನಾಯಕತ್ವವನ್ನು ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧ ಭಾಗಗಳ ಜನರು ಒಪ್ಪಿಕೊಂಡಿದ್ದರು. ಅಧಿಕಾರದಲ್ಲಿದ್ದಾಗಲೂ ಜನಸೇವೆ ಮತ್ತು ಅಭಿವೃದ್ಧಿಯನ್ನು ಕೇಂದ್ರವಾಗಿಟ್ಟುಕೊಂಡು ಕೆಲಸ ಮಾಡಿದ್ದರು” ಎಂದು ಹೇಳಿದರು.
“ರಾಮಕೃಷ್ಣ ಹೆಗಡೆ ಅವರ ಬದುಕು ಒಂದು ಡಿಕ್ಷನರಿಯಿದ್ದಂತೆ. ಅವರ ಆಚಾರ-ವಿಚಾರಗಳನ್ನು ನೋಡಿಕೊಂಡು ನಾವು ಅನೇಕ ವಿಚಾರಗಳನ್ನು ಕಲಿಯಬಹುದು. ಅಧಿಕಾರವನ್ನು ಶಕ್ತಿಯ ಸಂಕೇತವಾಗಿ ಅಲ್ಲ, ಜನಸೇವೆಗೆ ದೊರೆತ ಅವಕಾಶವಾಗಿ ನೋಡಬೇಕು ಎಂಬ ಸಂದೇಶವನ್ನು ಅವರು ನೀಡಿದ್ದರು” ಎಂದು ಹೇಳಿದರು.
ಹೆಗಡೆ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯ ರಾಜ್ಯದ ಬಜೆಟ್ ಗಾತ್ರ ಮತ್ತು ಇಂದಿನ ಬಜೆಟ್ ಗಾತ್ರವನ್ನು ಹೋಲಿಸಿದ ಶಿವಕುಮಾರ್, 1982–87ರ ಅವಧಿಯಲ್ಲಿ ರಾಜ್ಯದ ಬಜೆಟ್ ಗಾತ್ರ ಸುಮಾರು ₹3,687 ಕೋಟಿ ಇದ್ದರೆ, ಸಿದ್ದರಾಮಯ್ಯ ಸರ್ಕಾರದಲ್ಲಿ ಅಂದಾಜು ₹4.50 ಲಕ್ಷ ಕೋಟಿಯ ಮಟ್ಟಕ್ಕೆ ಏರಿದೆ. ಆ ಅವಧಿಯಲ್ಲಿ ರಾಜ್ಯದ ಆದಾಯ ಸಂಗ್ರಹವೂ ಇಂದಿನ ಪ್ರಮಾಣಕ್ಕೆ ಹೋಲಿಸಿದರೆ ಬಹಳ ಕಡಿಮೆ ಇತ್ತು. ಸಣ್ಣ ಯೋಜನೆಗಳೇ ಈಗ ಸಾವಿರಾರು ಕೋಟಿ ರೂಪಾಯಿಗಳ ಯೋಜನೆಗಳಾಗಿ ರೂಪುಗೊಳ್ಳುತ್ತಿವೆ ಎಂದು ಅವರು ಹೇಳಿದರು.
ಕರ್ನಾಟಕದಲ್ಲಿ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಶಿಕ್ಷಣದ ವಿಸ್ತರಣೆಗೆ ಹೆಗಡೆ ಅವರ ನೀತಿಗಳು ಸಹಕಾರಿಯಾದವು. ಇಂದು ಕರ್ನಾಟಕದಲ್ಲಿ ವರ್ಷಕ್ಕೆ ಸುಮಾರು 13,940 ವೈದ್ಯರು ಹಾಗೂ 1.25 ಲಕ್ಷಕ್ಕೂ ಹೆಚ್ಚು ಎಂಜಿನಿಯರ್ಗಳು ರೂಪುಗೊಳ್ಳುತ್ತಿದ್ದಾರೆ ಎಂದು ಅವರು ಉಲ್ಲೇಖಿಸಿದರು. ಶಿಕ್ಷಣ ಮತ್ತು ಮಾನವ ಸಂಪನ್ಮೂಲ ಕರ್ನಾಟಕದ ಪ್ರಮುಖ ಆಸ್ತಿ. ಖಾಸಗಿ ಶಿಕ್ಷಣ ಸಂಸ್ಥೆಗಳ ಬೆಳವಣಿಗೆಗೂ ಹೆಗಡೆ ಕಾಲದ ನೀತಿಗಳು ದಾರಿ ಮಾಡಿಕೊಟ್ಟವು. ಅದರ ಪರಿಣಾಮವಾಗಿ ಇಂದು ಕರ್ನಾಟಕ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಶಿಕ್ಷಣದಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದೆ” ಎಂದರು.
ತಮ್ಮ ರಾಜಕೀಯ ಜೀವನದ ಆರಂಭದ ದಿನಗಳನ್ನು ನೆನಪಿಸಿಕೊಂಡ ಶಿವಕುಮಾರ್, ಕನಕಪುರದಲ್ಲಿ ರಾಮಕೃಷ್ಣ ಹೆಗಡೆ ಮತ್ತು ಪಿಜಿಆರ್ ಸಿಂಧ್ಯಾ ಅವರ ಪ್ರಭಾವದ ನಡುವೆಯೇ ನಾನು ರಾಜಕೀಯಕ್ಕೆ ಬಂದೇ. ಹೆಗಡೆ ಅವರ ಪ್ರಭಾವದ ಕಾಲದಲ್ಲೇ ರಾಜಕೀಯ ಜೀವನ ಆರಂಭಿಸಿದೆ. ಒಂದು ಚುನಾವಣೆಯಲ್ಲಿ ಸೋತಿದ್ದೇನೆ. ಇಲ್ಲದಿದ್ದರೆ ಇಂದು ಒಂಬತ್ತನೇ ಬಾರಿ ಶಾಸಕನಾಗಿರುತ್ತಿದ್ದೆ. ಕನಕಪುರದಿಂದ ನಿರಂತರವಾಗಿ ಜನರ ಆಶೀರ್ವಾದ ಪಡೆಯುತ್ತಿರುವುದು ನನ್ನ ಸೌಭಾಗ್ಯ” ಎಂದು ಹೇಳಿದರು.
ಪ್ರತಿ ವರ್ಷ ರಾಮಕೃಷ್ಣ ಹೆಗಡೆ ಅವರ ಜನ್ಮದಿನದ ಸಂದರ್ಭದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವ ಪಂಚಾಯತ್ ಗೆ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡುವ ಯೋಜನೆ ರೂಪಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸೂಚಿಸಲಾಗಿದೆ. ಇದರ ಮೂಲಕ ಹೆಗಡೆ ಅವರ ಪಂಚಾಯತ್ ರಾಜ್ ಪರಿಕಲ್ಪನೆ ಹಾಗೂ ಗ್ರಾಮೀಣಾಭಿವೃದ್ಧಿಯ ಚಿಂತನೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶವಿದೆ” ಎಂದರು.
“ಮನುಷ್ಯನ ಹುಟ್ಟು ಆಕಸ್ಮಿಕ, ಸಾವು ಅನಿವಾರ್ಯ. ಹುಟ್ಟು ಉಚಿತ, ಮರಣ ಖಚಿತ. ಆದರೆ ಈ ಹುಟ್ಟು-ಸಾವಿನ ನಡುವಿನ ಅವಧಿಯಲ್ಲಿ ನಾವು ಏನು ಮಾಡುತ್ತೇವೆ ಎಂಬುದೇ ಮುಖ್ಯ. ಹೆಗಡೆ ಅವರು ಮಾಡಿದ ಕೆಲಸ, ಸೇವೆ ಮತ್ತು ನಾಯಕತ್ವ ಶಾಶ್ವತವಾಗಿ ನೆನಪಿನಲ್ಲಿ ಉಳಿಯಬೇಕು,” ಎಂದು ಹೇಳಿದರು.
“ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಹೆಗಡೆ ಅವರಲ್ಲಿ ರಾಮನ ಆದರ್ಶ ಮತ್ತು ಕೃಷ್ಣನ ರಾಜತಂತ್ರ—ಎರಡೂ ಗುಣಗಳಿದ್ದವು ಎಂದು ಹೇಳಿದ್ದನ್ನು ಅವರು ಉಲ್ಲೇಖಿಸಿದರು. ಹೆಗಡೆ ಅವರ ರಾಜಕೀಯ ಜೀವನದಿಂದ ಇಂದಿನ ನಾಯಕರು ಕಲಿಯಬೇಕಾದದ್ದು ಬಹಳಷ್ಟಿದೆ. ಅಧಿಕಾರವನ್ನು ಜನಸೇವೆಗೆ ದೊರೆತ ಅವಕಾಶವೆಂದು ಪರಿಗಣಿಸಬೇಕು ಎಂಬ ಅವರ ಸಂದೇಶ ಇಂದಿಗೂ ಪ್ರಸ್ತುತವಾಗಿದೆ” ಎಂದರು.
“ತಮ್ಮ ರಾಜಕೀಯ ಬದುಕಿನ ಆರಂಭದ ದಿನಗಳನ್ನು ಸ್ಮರಿಸಿದ ಅವರು, ರಾಮಕೃಷ್ಣ ಹೆಗಡೆ ಅವರ ರಾಜಕೀಯ ಪ್ರಭಾವವನ್ನು ನೆನಪಿಸಿಕೊಂಡರು. ಅವರಿಂದ ರೂಪುಗೊಂಡ ನಾಯಕರು ಇಂದು ವಿವಿಧ ರಾಜಕೀಯ ಪಕ್ಷಗಳಲ್ಲಿ ಕಾಣಸಿಗುತ್ತಾರೆ. ಸಿದ್ದರಾಮಯ್ಯ, ಆರ್.ವಿ. ದೇಶಪಾಂಡೆ, ಬಸವರಾಜ ರಾಯರೆಡ್ಡಿ, ಬಿ.ಎಲ್. ಶಂಕರ್ ಸೇರಿದಂತೆ ಅನೇಕ ನಾಯಕರು ಹೆಗಡೆ ಅವರ ರಾಜಕೀಯ ಶಾಲೆಯೊಂದಿಗೆ ಬೆಳೆದವರು ಎಂದು ಅವರು ಉಲ್ಲೇಖಿಸಿದ ಅವರು, ಹೆಗಡೆ ಅವರು ಹಿಂಬಾಲಕರನ್ನು ಮಾತ್ರ ಸೃಷ್ಟಿಸಲಿಲ್ಲ; ನಾಯಕರನ್ನು ಸೃಷ್ಟಿಸಿದರು. ಇಲ್ಲಿ ಕುಳಿತಿರುವ ನೂರಾರು ನಾಯಕರು ಅದಕ್ಕೆ ಸಾಕ್ಷಿ,” ಎಂದು ಹೇಳಿದರು.
ರಾಮಕೃಷ್ಣ ಹೆಗಡೆ ಅವರಿಗೆ ದೇಶದ ಪ್ರಧಾನಿಯಾಗುವ ಯೋಗ್ಯತೆ ಮತ್ತು ಅವಕಾಶ ಎರಡೂ ಇತ್ತು. ಆದರೆ ಕೆಲವು ಕಾರಣಗಳಿಂದ ಅದು ಸಾಧ್ಯವಾಗಲಿಲ್ಲ ಎಂದ ಅವರು, ಆ ವಿಚಾರದ ಕುರಿತು ಹೆಚ್ಚು ಚರ್ಚಿಸುವುದಿಲ್ಲ” ಎಂದು ಸ್ಪಷ್ಟಪಡಿಸಿದರು. “ಅಧಿಕಾರದಲ್ಲಿದ್ದಾಗ ಹೃದಯ ಶ್ರೀಮಂತಿಕೆ ಇರಬೇಕು. ಗೆದ್ದಾಗಲೂ ದೊಡ್ಡ ಮನಸ್ಸು ಇರಬೇಕು ಎಂಬ ಸ್ವಾಮಿ ವಿವೇಕಾನಂದರ ಸಂದೇಶ ನಮಗೆ ಮಾರ್ಗದರ್ಶಿಯಾಗಬೇಕು. ನಮ್ಮ ಸರ್ಕಾರ ರಾಮಕೃಷ್ಣ ಹೆಗಡೆ ಅವರ ಆಚಾರ–ವಿಚಾರ, ಮೌಲ್ಯಾಧಾರಿತ ರಾಜಕಾರಣ, ಪಂಚಾಯತ್ ರಾಜ್ ಮತ್ತು ಅಭಿವೃದ್ಧಿ ಚಿಂತನೆಗಳನ್ನು ಮುಂದುವರಿಸಿಕೊಂಡು ಹೋಗಲಿದೆ” ಎಂದರು.
“ಸಿದ್ದರಾಮಯ್ಯ, ದೇಶಪಾಂಡೆ, ರಾಯರೆಡ್ಡಿ, ಬಿ.ಎಲ್. ಶಂಕರ್ ಸೇರಿದಂತೆ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಮುಂದೆಯೂ ಹೆಗಡೆ ಅವರ ಆದರ್ಶ ಬದುಕಿನ ಆಚಾರ– ವಿಚಾರಗಳನ್ನು ಪಾಲಿಸಿಕೊಂಡು ಸಾಗುತ್ತೇವೆ” ಎಂದು ಹೇಳಿದರು.
Published On - 10:51 pm, Sat, 29 August 26