ರಾಮನಗರ ಕಂದಾಯ ಕಚೇರಿಗೆ ಹಾನಿ, ಜೆಡಿಎಸ್ ಕಾರ್ಯಕರ್ತರ ವಿರುದ್ಧ ಎಫ್ಐಆರ್
ರಾಮನಗರ ಹಳ್ಳಿಮಾಳದ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯನ್ನು ಮುಂದೂಡಿದ್ದನ್ನು ಖಂಡಿಸಿ ಕಂದಾಯ ಭವನದ ಬಳಿ ನಡೆಸಿದ ಪ್ರತಿಭಟನೆ ವೇಳೆ ಕಚೇರಿಗೆ ಹಾನಿ ಮಾಡಲಾಗಿದೆ ಎಂದು ಜೆಡಿಎಸ್ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ರಾಮನಗರ, ಜುಲೈ 10: ಪ್ರತಿಭಟನೆ ವೇಳೆ ಕಂದಾಯ ಭವನಕ್ಕೆ ಹಾನಿ ಮಾಡಿದ ಹಿನ್ನೆಲೆಯಲ್ಲಿ ಜೆಡಿಎಸ್ (JDS) ಕಾರ್ಯಕರ್ತರ ವಿರುದ್ಧ ರಾಮನಗರದ (Ramnagar) ಟೌನ್ ಪೊಲೀಸ್ ಠಾಣೆಯಲ್ಲಿ (Police Station) ಎಫ್ಐಆರ್ ದಾಖಲಾಗಿದೆ. ಹಳ್ಳಿಮಾಳದ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯನ್ನು ಮುಂದೂಡಿದ್ದನ್ನು ಖಂಡಿಸಿ ಜೆಡಿಎಸ್ ಕಾರ್ಯಕರ್ತರು ರಾಮನಗರ ಕಂದಾಯ ಭವನದ ಬಳಿ ಪ್ರತಿಭಟನೆ ನಡೆಸಿದರು.
ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯನ್ನು ರಾಜಕೀಯ ಕಾರಣಕ್ಕಾಗಿ ಮುಂದೂಡಲಾಗಿದೆ ಎಂದು ಆರೋಪಿಸಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ವೇಳೆ ಕಂದಾಯ ಭವನದಲ್ಲಿ ಇರುವ ಸಹಾಕರ ಇಲಾಖೆಯ ನಿರ್ಬಂಧಕರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾನಿರತರ ನಡುವೆ ವಾಗ್ವಾದ ನಡೆಯಿತು.
ಇದನ್ನೂ ಓದಿ: ಶಿವಕುಮಾರ್ಗೆ ಬುದ್ಧಿ ಇದ್ದಿದ್ದರೆ ರಾಮನಗರ-ಚನ್ನಪಟ್ಟಣ ಅವಳಿ ನಗರ ಮಾಡುವ ಬಗ್ಗೆ ಯೋಚಿಸುತ್ತಿದ್ದರು: ಹೆಚ್ ಡಿ ಕುಮಾರಸ್ವಾಮಿ
ಈ ಸಂದರ್ಭದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿತು. ಪ್ರತಿಭಟನಾನಿರತರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದರು. ತಳ್ಳಾಟ-ನೂಕಾಟ ಸಂಭವಿಸಿತು. ಮುತ್ತಿಗೆ ಹಾಕಿದ ವೇಳೆ ಕಚೇರಿಗೆ ಹಾನಿ ಮಾಡಲಾಗಿದೆ ಎಂದು ಜೆಡಿಎಸ್ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯನ್ನು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡು ಮುಂದೂಡಿಕೆ ಮಾಡಿದ್ದಾರೆ. ಎರಡು ಬಾರಿ ಚುನಾವಣೆ ನಿಗಧಿಯಾಗಿದ್ದರೂ ಅಧಿಕಾರಿಗಳು ಚುನಾವಣೆ ನಡೆಸಿಲ್ಲ ಎಂದು ಬಿಜೆಪಿ ಹಾಗೂ ಜೆಡಿಎಸ್ ಆರೋಪಿಸಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:03 am, Wed, 10 July 24