ಒಡಿಶಾ ಶಾಸಕರ ಖರೀದಿಗೆ ಬಂದ್ರು ಈ ಅಪರಿಚಿತ ವ್ಯಕ್ತಿಗಳು! ಇಬ್ಬರು ಪೊಲೀಸ್ ವಶಕ್ಕೆ
ಒಡಿಶಾ ರಾಜ್ಯಸಭಾ ಚುನಾವಣೆ ಹಿನ್ನೆಲೆ ಅಡ್ಡಮತದಾನ ತಡೆಯಲು ಕಾಂಗ್ರೆಸ್ ಶಾಸಕರನ್ನು ರಾಮನಗರದ ಬಿಡದಿ ರೆಸಾರ್ಟ್ಗೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ಶಾಸಕರನ್ನು ಖರೀದಿಸಲು ಯತ್ನಿಸಿದ ನಾಲ್ವರಲ್ಲಿ ಇಬ್ಬರನ್ನು ಹಿಡಿದು ಪೋಲೀಸರಿಗೆ ಒಪ್ಪಿಸಲಾಗಿದೆ. ಖಾಲಿ ಚೆಕ್ಗಳು ಪತ್ತೆಯಾಗಿವೆ. ಈ ಕುದುರೆ ವ್ಯಾಪಾರ ಆರೋಪ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬಿಡದಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಾಮನಗರ, ಮಾರ್ಚ್ 15: ಒಡಿಶಾದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಯ ಹಿನ್ನೆಲೆ ಅಡ್ಡಮತದಾನ ಭೀತಿ ನಡುವೆ ರಾಮನಗರ (Ramnagar) ಜಿಲ್ಲೆಯ ಬಿಡದಿ ಬಳಿಯ ರೆಸಾರ್ಟ್ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಒಡಿಶಾ ಕಾಂಗ್ರೆಸ್ ಶಾಸಕರನ್ನು ಸುರಕ್ಷಿತವಾಗಿ ಇರಿಸಲು ಪಕ್ಷದ ನಾಯಕರು ಬೆಂಗಳೂರಿಗೆ ಕರೆತರಿದ್ದು, ಬಿಡದಿ ಸಮೀಪದ ವಂಡರ್ ಲಾ ರೆಸಾರ್ಟ್ನಲ್ಲಿ ವಾಸ್ತವ್ಯ ಕಲ್ಪಿಸಲಾಗಿದೆ. ಇದೇ ವೇಳೆ ಶಾಸಕರನ್ನು ಖರೀದಿಸಲು ಅಪರಿಚಿತ ವ್ಯಕ್ತಿಗಳು ರೆಸಾರ್ಟ್ಗೆ ಬಂದಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಹಿಡಿದಿಟ್ಟಿರುವ ವ್ಯಕ್ತಿಗಳ ಬಳಿ ಕೆಲವು ಬ್ಲಾಂಕ್ ಚೆಕ್ಗಳು ಪತ್ತೆ
ಬೆಳಗ್ಗೆ ವೇಳೆ ನಾಲ್ವರು ವ್ಯಕ್ತಿಗಳು ರೆಸಾರ್ಟ್ಗೆ ಬಂದು ಒಡಿಶಾದ ಒಬ್ಬ ಕಾಂಗ್ರೆಸ್ ಶಾಸಕರನ್ನು ಭೇಟಿಯಾಗಿದ್ದಾರೆ ಎನ್ನಲಾಗುತ್ತಿದೆ. ಈ ವಿಷಯ ತಿಳಿದ ಕಾಂಗ್ರೆಸ್ ಮುಖಂಡರು ತಕ್ಷಣ ಕ್ರಮ ಕೈಗೊಂಡು ಇಬ್ಬರನ್ನು ಹಿಡಿದು ಇಟ್ಟಿದ್ದಾರೆ. ಇನ್ನಿಬ್ಬರು ವ್ಯಕ್ತಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಹಿಡಿದಿಟ್ಟಿರುವ ವ್ಯಕ್ತಿಗಳ ಬಳಿ ಕೆಲವು ಬ್ಲಾಂಕ್ ಚೆಕ್ಗಳು ಪತ್ತೆಯಾಗಿದ್ದು, ಅವುಗಳಲ್ಲಿ ಬಿರೇಂದ್ರ ಪ್ರಸಾದ್ ಎಂಬುವವರ ಹೆಸರಿರುವ ಚೆಕ್ ಕೂಡ ಸೇರಿದೆ ಎಂದು ಮೂಲಗಳು ತಿಳಿಸಿವೆ. ಆರೋಪಿಗಳಾಗಿ ಬಿರೇಂದ್ರ ಪ್ರಸಾದ್, ಅಜಿತ್ ಕುಮಾರ್ ಸಾಹು ಮತ್ತು ಸುಮಾಚಲ್ ಮಹಾಕೂದ ಎಂಬ ಹೆಸರುಗಳು ಕೇಳಿಬಂದಿವೆ.
ಘಟನೆಯ ಮಾಹಿತಿ ತಿಳಿದು ಬಿಡದಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಒಡಿಶಾದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಸಂಬಂಧಿಸಿದಂತೆ ಕುದುರೆ ವ್ಯಾಪಾರದ ಆರೋಪ ಕೇಳಿಬಂದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.