ಗಣರಾಜ್ಯೋತ್ಸವ: ಜಲಜೀವನ್ ಮಿಷನ್ಗೆ ಕೊಡುಗೆ ನೀಡಿದ ಕರ್ನಾಟಕದ ಐವರು ಜಲ ಯೋಧರು ವಿಶೇಷ ಅತಿಥಿಗಳು
ಕರ್ನಾಟಕದಲ್ಲಿ ಪ್ರತಿ ಮನೆಗೆ ಕುಡಿಯುವ ನೀರು ಒದಗಿಸುವ ದೃಷ್ಟಿಯಿಂದ ಅತ್ಯುತ್ತಮವಾಗಿ ಕೆಲಸ ಮಾಡಿದ ಐವರನ್ನು ಈ ಬಾರಿಯ ಗಣರಾಜ್ಯೋತ್ಸವ ಸಮಾರಂಭಕ್ಕೆ ವಿಶೇಷ ಅತಿಥಿಗಳನ್ನಾಗಿ ಆಹ್ವಾನಿಸಲಾಗಿತ್ತು. ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಅಡಿಯಲ್ಲಿ ಅಸಾಧಾರಣವಾಗಿ ಕರ್ತವ್ಯ ನಿರ್ವಹಿಸಿದ್ದಕ್ಕೆ ಗೌರವಕ್ಕೆ ಪಾತ್ರರಾದವರ ವಿವರ ಇಲ್ಲಿದೆ.

ಈ ಬಾರಿ ದೆಹಲಿಯಲ್ಲಿ 76ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗಿದ್ದು, ಕರ್ನಾಟಕದ ಐವರು ಜಲ ಯೋಧರು ವಿಶೇಷ ಅತಿಥಿಗಳಾಗಿ ಭಾಗವಹಿಸಿದ್ದರು. ಗ್ರಾಮೀಣ ಸಮುದಾಯಗಳಿಗೆ ಜಲಜೀವನ್ ಮಿಷನ್ ಅಡಿಯಲ್ಲಿ ನೀರಿನ ಸಂಪರ್ಕ ಕಲ್ಪಿಸುವ ದೃಷ್ಟಿಯಿಂದ ನೀಡಿದ ಅಸಾಧಾರಣ ಕೊಡುಗೆಗಾಗಿ ಅವರನ್ನು ವಿಶೇಷ ಅತಿಥಿಗಳನ್ನಾಗಿ ಆಯ್ಕೆ ಮಾಡಲಾಗಿತ್ತು. ಜಲಜೀವನ್ ಮಿಷನ್ ಎಂಬುದು ದೇಶದಾದ್ಯಂತ ಎಲ್ಲ ಮನೆಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಗುರಿಯನ್ನು ಹೊಂದಿರುವ ಯೋಜನೆಯಾಗಿದೆ.
ಕರ್ನಾಟಕದ ವಿಶೇಷ ಅತಿಥಿಗಳು ಯಾರೆಲ್ಲ?
ಕರ್ನಾಟಕದ ವಿಶೇಷ ಅತಿಥಿಗಳು ಕೇಂದ್ರ ಜಲಶಕ್ತಿ ಸಚಿವ ಸಿಆರ್ ಪಾಟೀಲ್ ಅವರನ್ನೂ ಭೇಟಿಯಾದರು. ಉಡುಪಿ ಜಿಲ್ಲೆಯ ಬಡಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಕೋಟ್ಯಾನ್, ಕಲಬುರಗಿಯ ಗಣಜಲಖೇಡ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಧರ್ ಪಾಟೀಲ್, ಚಿತ್ರದುರ್ಗದ ಕೆರೆಕೊಂಡಾಪುರ ಗ್ರಾಮದ ನೀರು ನೈರ್ಮಲ್ಯ ಸಮಿತಿ ಅಧ್ಯಕ್ಷೆ ಅನಂತಮ್ಮ, ಕೊಪ್ಪಳ ತಾಲೂಕಿನ ಕೋಳೂರು ಗ್ರಾಮದ ಶಿವಮ್ಮ, ಬಾಗಲಕೋಟೆಯ ಹಲಗಲಿಯ ನೀರು ನೈರ್ಮಲ್ಯ ಸಮಿತಿ ಅಧ್ಯಕ್ಷ ವೀರಪ್ಪ ರಾಮಪ್ಪ ಚಿಕ್ಕೂರು ಇವರು ಕರ್ನಾಟಕದಿಂದ ದೆಹಲಿ ಗಣರಾಜ್ಯೋತ್ಸವ ಸಮಾರಂಭದಲ್ಲಿ ವಿಶೇಷ ಅತಿಥಿಗಳಾಗಿ ಭಾಗವಹಿಸಿದವರಾಗಿದ್ದಾರೆ.
1947ರಲ್ಲೇ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದರೂ 1950 ರ ಜನವರಿ 26 ರಂದು ಸಂವಿಧಾನವು ಅಸ್ತಿತ್ವಕ್ಕೆ ಬಂದಿತು. ದೇಶವು ಅಧಿಕೃತವಾಗಿ ಗಣರಾಜ್ಯವಾದ ದಿನವನ್ನು ಗಣತಂತ್ರ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ಬಾರಿ 76ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಈ ದಿನವು ಭಾರತದ ಪ್ರಜಾಸತ್ತಾತ್ಮಕ ಮೌಲ್ಯಗಳು, ಸಾಂಸ್ಕೃತಿಕ ಶ್ರೀಮಂತಿಕೆ ಮತ್ತು ಏಕತೆಯನ್ನು ಪ್ರತಿಬಿಂಬಿಸುತ್ತದೆ.
ಗಣರಾಜ್ಯೋತ್ಸವದ ಮುಖ್ಯ ಕಾರ್ಯಕ್ರಮ ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯಿತು. ಅಲ್ಲಿ ಭವ್ಯವಾದ ಗಣರಾಜ್ಯೋತ್ಸವ ಪರೇಡ್ ನಡೆಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಸಮಾರಂಭಕ್ಕೆ ಚಾಲನೆ ನೀಡಿದ್ದರು. ಪರೇಡ್ನಲ್ಲಿ ಭಾರತದ ಸಾಧನೆಗಳು ಮತ್ತು ಪ್ರಗತಿಯನ್ನು ಪ್ರದರ್ಶಿಸಲಾಯಿತು. ದೇಶದ ಮಿಲಿಟರಿ ಶಕ್ತಿ, ಸಾಂಸ್ಕೃತಿಕ ವೈವಿಧ್ಯತೆ ಮತ್ತು ತಾಂತ್ರಿಕ ಪ್ರಗತಿಯನ್ನು ಪ್ರದರ್ಶನದಲ್ಲಿ ತೋರಿಸಲಾಯಿತು.
ಮತ್ತಷ್ಟು ಓದಿ: Republic Day 2025: ದೆಹಲಿಯ ಗಣರಾಜ್ಯೋತ್ಸವ ಪರೇಡ್ ನೋಡಲು ಟಿಕೆಟ್ ಬುಕ್ ಮಾಡುವುದು ಹೇಗೆ?
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:33 am, Thu, 23 January 25