ಕನ್ನಡಿಗರಿಗೆ ಉದ್ಯೋಗ ಮೀಸಲಾತಿ: ಯು ಟರ್ನ್ ಸರ್ಕಾರ ಎಂದು ಗುಡುಗಿದ ವಿಜಯೇಂದ್ರ

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ಮಸೂದೆ ವಿಚಾರವಾಗಿ ಹಲವು ಬಾರಿ ಹಲವು ರೀತಿಯ ಸಂದೇಶ ಪ್ರಕಟಿಸಿ ಕೊನೆಗೆ ಮಸೂದೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ ಎಂದ ಸಿಎಂ ಸಿದ್ದರಾಮಯ್ಯ ಹಾಗೂ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ: ಯು ಟರ್ನ್ ಸರ್ಕಾರ ಎಂದು ಗುಡುಗಿದ ವಿಜಯೇಂದ್ರ
ವಿಜಯೇಂದ್ರ & ಸಿಎಂ ಸಿದ್ದರಾಮಯ್ಯ

Updated on: Jul 18, 2024 | 9:28 AM

ಬೆಂಗಳೂರು, ಜುಲೈ 18: ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆ ವಿಚಾರವಾಗಿ ಹಲವು ಬಾರಿ ಗೊಂದಲದ ಸಂದೇಶಗಳನ್ನು ಪ್ರಕಟಿಸಿ ಕೊನೆಗೆ ತಡೆಹಿಡಿರುವ ಬಗ್ಗೆ ಘೋಷಣೆ ಮಾಡಿರುವ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಅವರು, ಇದು ‘ಯು ಟರ್ನ್ ಸರ್ಕಾರ’ ಎಂದು ಕಿಡಿಕಾರಿದ್ದಾರೆ.

ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ? ತಡೆಹಿಡಿದಿದ್ದೇಕೆ? ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವೇಕೆ? ಅಪಮಾನಿಸಲು ನಿಮಗೆ ಕನ್ನಡಿಗರೇ ಬೇಕಿತ್ತೆ? ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ದಿಢೀರ್ ತಡೆಹಿಡಿದು ಕನ್ನಡ-ಕನ್ನಡಿಗ-ಕರ್ನಾಟಕವನ್ನು ಅಪಮಾನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರದ ರಣಹೇಡಿ ನಿರ್ಧಾರವನ್ನು ಸಮಸ್ತ ಕರುನಾಡ ಜನರ ಪರವಾಗಿ ಖಂಡಿಸುವೆ ಎಂದು ವಿಜಯೇಂದ್ರ ಉಲ್ಲೇಖಿಸಿದ್ದಾರೆ.

ವಿಜಯೇಂದ್ರ ಎಕ್ಸ್ ಸಂದೇಶ


ಈ ನೆಲದಲ್ಲಿ ಬದುಕು ಮಾಡುತ್ತ ಕನ್ನಡ ಕಲಿತವರೆಲ್ಲ ಕನ್ನಡಿಗರೇ ಎಂದು ಪರಿಗಣಿಸಿ ಈ ನೆಲದ ಮಕ್ಕಳ ಉದ್ಯೋಗದ ಹಕ್ಕನ್ನು ರಕ್ಷಿಸುವ ನಿಟ್ಟಿನಲ್ಲಿ ಕನ್ನಡಪರ ಹೋರಾಟಗಾರರ ಬಹುದಿನಗಳ ಹೋರಾಟದ ಬೇಡಿಕೆಗೆ ನಿನ್ನೆಯಷ್ಟೇ ‘ಅಸ್ತು ‘ಎಂದು ಹೆಜ್ಜೆ ಇಟ್ಟಿದ್ದ ಸರ್ಕಾರ ದಿನ ಕಳೆಯುವುದರೊಳಗೇ ‘ಸುಸ್ತು’ ಹೊಡೆದಿರುವುದೇಕೆ ಎಂದು ವಿಜಯೇಂದ್ರ ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿಗಳು ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಮೂರು ಬಾರಿ ‘ಯೂ ಟರ್ನ್ ಹೊಡೆದು’ ಕೊನೆಗೂ ವಿಧೇಯಕ ಸದ್ಯಕ್ಕೆ ಮಂಡಿಸುತ್ತಿಲ್ಲ ಎನ್ನುವ ಅಂಜುಬುರುಕ ನಿರ್ಧಾರದ ಹಿಂದೆ ನಾಡಿನ ಆತ್ಮ ಗೌರವ, ಕನ್ನಡಿಗರ ಸ್ವಾಭಿಮಾನ ಹಾಗೂ ಕನ್ನಡತನವನ್ನು ಹಿಮ್ಮೆಟ್ಟಿಸುವ ಕರ್ನಾಟಕ ವಿರೋಧಿ ಶಕ್ತಿಗಳ ಲಾಬಿ ಮೇಲುಗೈ ಸಾಧಿಸಿರುವಂತಿದೆ. ‘ಇಂಡಿ’ ಕೂಟದಲ್ಲಿ ಯಾವಾಗ ಬಿರುಕು ಮೂಡುತ್ತದೋ ಎಂಬ ಭೀತಿಯಲ್ಲಿರುವ ದೆಹಲಿಯ ದೊಡ್ಡ ‘ಕೈ’ ಮುಖ್ಯಮಂತ್ರಿಗಳ ಕೈ ಕಟ್ಟಿಹಾಕಿರಲೇಬೇಕು, ಇಲ್ಲದಿದ್ದರೇ ಕನ್ನಡಿಗರ ಬದುಕು ಹಸನಾಗಿಸುವ ವಿಧೇಯಕವನ್ನು ಬದಿಗೆ ಸರಿಸುವ ಪಲಾಯನವಾದಿ ನಿರ್ಧಾರ ಕೈಗೊಳ್ಳಲು ಹೇಗೆ ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ.

ಹಗರಣಗಳ ಮುಚ್ಚಿ ಹಾಕಲು ತಂತ್ರ: ವಿಜಯೇಂದ್ರ

ಸದ್ಯ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿಗಳನ್ನು ಮುತ್ತಿರುವ ಮಹರ್ಷಿ ವಾಲ್ಮೀಕಿ ನಿಗಮ ಹಾಗೂ ಮುಡಾ ಹಗರಣಗಳಿಂದ ತತ್ತರಿಸಿರುವ ಕಾಂಗ್ರೆಸ್ ತನ್ನ ಮುಖ ಮುಚ್ಚಿಕೊಳ್ಳಲು ಹಗರಣದ ಚರ್ಚೆ ಹಾಗೂ ತನಿಖೆಯನ್ನು ದಿಕ್ಕು ತಪ್ಪಿಸಲು ಹಾಗೂ ಜನರ ಗಮನ ವಿಚಲಿತಗೊಳಿಸುವ ಕುತಂತ್ರದಿಂದ ಕನ್ನಡ ಪರ ವಿಧೇಯಕವನ್ನು ತಡೆಹಿಡಿದು ಗುರಾಣಿ ಮಾಡಿಕೊಳ್ಳುವ ಹುನ್ನಾರ ನಡೆಸಿದ್ದರೆ ರಾಜ್ಯದ ಜನತೆ ಕಾಂಗ್ರೆಸ್ಸಿಗರನ್ನು ಎಂದಿಗೂ ಕ್ಷಮಿಸರು. ವಿಧೇಯಕದ ಕುರಿತು ಮಾಧ್ಯಮಗಳಲ್ಲಿ ಹೆಮ್ಮೆಯಿಂದ ಬೀಗಿದ್ದ ಸಚಿವರುಗಳು ಹಾಗೂ ಕಾಂಗ್ರೆಸ್ ಮುಖಂಡರು ಕೆಲವೇ ಸಮಯದ ಅಂತರದಲ್ಲಿ ನಾಡ ಜನರ ಬಗೆಗಿನ ಐತಿಹಾಸಿಕ ವಿಧೇಯಕ ಹಿಂತೆಗೆದುಕೊಂಡ ಬಗ್ಗೆ ಸಮಸ್ತ ಕನ್ನಡ ಜನತೆಯ ಮುಂದೆ ತಲೆ ಎತ್ತಿ ಮಾತನಾಡುವ ನೈತಿಕತೆ ಕಳೆದುಕೊಂಡಿದ್ದಾರೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: ಕನ್ನಡಿಗರಿಗೆ ಮೀಸಲಾತಿ: ವ್ಯಾಪಕ ವಿರೋಧ ವ್ಯಕ್ತವಾದ ಬೆನ್ನಲ್ಲೇ ಮಸೂದೆಯನ್ನು ತಡೆಹಿಡಿದ ಸರ್ಕಾರ

ಅರ್ಹತೆ ಇದ್ದರೂ ಉದ್ಯೋಗಾವಕಾಶಗಳಿಂದ ವಂಚಿತರಾಗಿ ಹತಾಶೆಗೊಳಗಾಗಿದ್ದ ಗ್ರಾಮೀಣ ಭಾಗದ ಲಕ್ಷಾಂತರ ನಿರುದ್ಯೋಗಿಗಳಿಗೆ ಭರವಸೆಯ ಬೆಳಕು ಮೂಡಿಸಿದ್ದ ಕನ್ನಡಿಗರ ಉದ್ಯೋಗ ಮೀಸಲಾತಿಯ ವಿಧೇಯಕ ಪ್ರಸಕ್ತ ಅಧಿವೇಶನದಲ್ಲೇ ಸರ್ಕಾರ ಮಂಡಿಸಲಿ, ಇಲ್ಲವೇ ಕನ್ನಡಿಗರ ಆಕ್ರೋಶ ಎದುರಿಸಲು ಸಿದ್ಧವಾಗಲಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us