AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್ ವಿರುದ್ಧದ ತನಿಖೆ ವಾಪಸ್: ಸಿಬಿಐ, ಯತ್ನಾಳ್​ ಸಲ್ಲಿಸಿದ್ದ ಅರ್ಜಿ ವಿಚಾರಣೆ ಫೆ.12ಕ್ಕೆ ಮುಂದೂಡಿಕೆ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ​ದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ಅಧಿಕಾರಿಗಳು ತನಿಖೆ ನಡೆಸಲು ಬಿಜೆಪಿ ಸರ್ಕಾರ ಸಮ್ಮತಿ ನೀಡಿತ್ತು. ಆದರೆ ಇದನ್ನು ಕಾಂಗ್ರೆಸ್​ ಸರ್ಕಾರ ವಾಪಸ್​ ಪಡೆದಿದ್ದು, ಇದನ್ನು ಪ್ರಶ್ನಿಸಿ ಸಿಬಿಐ ಮತ್ತು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​​ ಹೈಕೋರ್ಟ್​​ನಲ್ಲಿ ರಿಟ್​ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ವಿಭಾಗೀಯ ಪೀಠ ಅರ್ಜಿ ವಿಚಾರಣೆ ನಡೆದಿದೆ.

ಡಿಕೆ ಶಿವಕುಮಾರ್ ವಿರುದ್ಧದ ತನಿಖೆ ವಾಪಸ್: ಸಿಬಿಐ, ಯತ್ನಾಳ್​ ಸಲ್ಲಿಸಿದ್ದ ಅರ್ಜಿ ವಿಚಾರಣೆ ಫೆ.12ಕ್ಕೆ ಮುಂದೂಡಿಕೆ
ಡಿಕೆ ಶಿವಕುಮಾರ್​​
Ramesha M
| Updated By: ವಿವೇಕ ಬಿರಾದಾರ|

Updated on: Jan 31, 2024 | 1:38 PM

Share

ಬೆಂಗಳೂರು, ಜನವರಿ 31: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐಗೆ (CBI) ವಹಿಸಿದ್ದನ್ನು ಕಾಂಗ್ರೆಸ್​ ಸರ್ಕಾರ (Congress Government) ರದ್ದುಪಡಿಸಿ, ಲೋಕಾಯುಕ್ತ (Lokayukta) ತನಿಖೆಗೆ ನೀಡಿದ್ದನ್ನು ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಅವರು ಹೈಕೋರ್ಟ್​ನಲ್ಲಿ (High Court) ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾ.ಕೆ.ಸೋಮಶೇಖರ್, ನ್ಯಾ.ಉಮೇಶ್ ಎಂ.ಅಡಿಗರ ಅವರು ಇದ್ದ ವಿಭಾಗೀಯ ಪೀಠ ವಿಚಾರಣೆಯನ್ನು ಫೆಬ್ರವರಿ 12ಕ್ಕೆ ಮುಂದೂಡಿದೆ.

ಆದಯಾ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ತನಿಖೆಯ ಹೊಣೆಯನ್ನು ಲೋಕಾಯುಕ್ತ ಪೊಲೀಸರಿಗೆ ವರ್ಗಾಯಿಸಿರುವ ಹಿನ್ನೆಲೆಯಲ್ಲಿ “ಲೋಕಾಯುಕ್ತ ಪೊಲೀಸರನ್ನು ಪ್ರತಿವಾದಿಯಾಗಿಸುವಂತೆ” ಬಸನಗೌಡ ಪಾಟೀಲ್ ಯತ್ನಾಳ್​​ ಪರ ವಕೀಲರು ನ್ಯಾಯ ಪೀಠಕ್ಕೆ ಮನವಿ ಮಾಡಿದರು. ಇನ್ನು ಬಸನಗೌಡ ಪಾಟೀಲ್​ ಯತ್ನಾಳ್ ಅವರ ರಿಟ್ ಅರ್ಜಿ ಪ್ರತಿಯನ್ನು ಡಿಕೆ ಶಿವಕುಮಾರ್​​ ಅವರ ವಕೀಲರಿಗೆ ನೀಡುವಂತೆ ಪೀಠ ಯತ್ನಾಳ್​ ಪರ ವಕೀಲರಿಗೆ ಸೂಚಿಸಿದೆ.

ತನಿಖೆ ಹೊಣೆ ಲೋಕಾಯುಕ್ತ ಪೊಲೀಸರಿಗೆ ವರ್ಗಾಯಿಸಿದರೂ ಸಿಬಿಐ ನೋಟಿಸ್ ನೀಡುತ್ತಿದೆ ಎಂದು ಡಿಕೆ ಶಿವಕುಮಾರ್​ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು. ಈ ವೇಳೆ ಪೀಠ ಸಿಬಿಐ ಅರ್ಜಿಗೆ ಆಕ್ಷೇಪಣೆಗಳಿದ್ದರೆ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಿ, ವಿಚಾರಣೆಯನ್ನು ಫೆ.12ಕ್ಕೆ ಮುಂದೂಡಿದೆ.

ಸಿಬಿಐ ತನಿಖೆಗೆ ನೀಡಿದ್ದ ಸಮ್ಮತಿಯನ್ನು ಹಿಂಪಡೆದ ಸರ್ಕಾರ

ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಬಿಜೆಪಿ ಸರ್ಕಾರ‌ ನೀಡಿದ ಸಮ್ಮತಿಯನ್ನು, ಕಳೆದ ವರ್ಷ ನವೆಂಬರ್​ ತಿಂಗಳಲ್ಲಿ ಕಾಂಗ್ರೆಸ್​ ಸರ್ಕಾರ ಹಿಂಪಡೆಯಿತು. ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಕಾನೂನು ಅಭಿಪ್ರಾಯ ಆಧರಿಸಿ ಸರ್ಕಾರ ಈ ತೀರ್ಮಾನಕ್ಕೆ ಬಂದಿತ್ತು. ಅಲ್ಲದೆ ಪ್ರಕರಣದ ತನಿಖೆಯನ್ನು ಲೋಕಾಯುಕ್ತಕ್ಕೆ ನೀಡಿತ್ತು.

ಇದನ್ನೂ ಓದಿ: ಎಚ್ಚರಿಕೆಯಿಂದಿರಿ ಎಂದಷ್ಟೇ ಬಾಲಕೃಷ್ಣ ಹೇಳಿದ್ದಾರೆ, ಗ್ಯಾರಂಟಿ 5 ವರ್ಷ ಇರಲಿದೆ: ಡಿಕೆ ಶಿವಕುಮಾರ್ ಸ್ಪಷ್ಟನೆ

ಪ್ರಕರಣದ ಹಿನ್ನೋಟ

2018ರಲ್ಲಿ ಡಿಕೆ ಶಿವಕುಮಾರ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ‌ ನಡೆಸಿ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿತ್ತು. ಬಳಿಕ ಭ್ರಷ್ಟಾಚಾರ ತಡೆ ಕಾಯ್ದೆಯಡಿ ತನಿಖೆ ಅಗತ್ಯವಿದೆ ಎಂಬ ಕಾರಣಕ್ಕೆ ಸಿಬಿಐ ತನಿಖೆ ನಡೆಸಲು ರಾಜ್ಯ ಸರ್ಕಾರ ಅನುಮತಿ ನೀಡಿತ್ತು. ಅಂದಿನ ಸರ್ಕಾರದ ಸಮ್ಮತಿ ಪಡೆದು ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿತ್ತು.

ಆದಾಯ ಮೀರಿ ಆಸ್ತಿ ಗಳಿಕೆ ಆರೋಪದಡಿ ಕೇಸ್ ದಾಖಲಿಸಿದ್ದ ಸಿಬಿಐ, 2013 ರಿಂದ 2018ರ ಅವಧಿಯಲ್ಲಿ ಗಳಿಸಿದ ಆದಾಯ, ಹಾಗೂ ವೆಚ್ಚದ ಮಾಹಿತಿ ಆಧರಿಸಿ 74.93 ಕೋಟಿ ರೂ. ಆದಾಯ ಮೀರಿ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಸಿಬಿಐ ಎಫ್‌ಐಆರ್ ದಾಖಲಿಸಿದೆ. ಈ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತದಲ್ಲಿದೆ.

ಈ ಹಂತದಲ್ಲಿ ಸರ್ಕಾರದ ಸಮ್ಮತಿ ಪ್ರಶ್ನಿಸಿ ಡಿಕೆ ಶಿವಕುಮಾರ್ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಏಕಸದಸ್ಯ ಪೀಠ ರಿಟ್ ಅರ್ಜಿ ವಜಾಗೊಳಿಸಿತ್ತು. ನಂತರ ಡಿಕೆ ಶಿವಕುಮಾರ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ವಿಭಾಗೀಯ ಪೀಠ ಸಿಬಿಐ ತನಿಖೆಗೆ ಸರ್ಕಾರದ ಸಮ್ಮತಿ ನೀಡಿದ ಕ್ರಮಕ್ಕೆ ತಡೆ ನೀಡಿದೆ. ಇದೀಗ ಸುಪ್ರೀಂ ಕೋರ್ಟ್ ಸೂಚನೆ ಮೇರೆಗೆ ಹೈಕೋರ್ಟ್ ಪ್ರಕರಣದ ವಿಚಾರಣೆಯನ್ನು ಕಳೆದ ವರ್ಷ ನವೆಂಬರ್​ 29 ರಂದು ನಡೆಸಿತ್ತು. ಈ ಮಧ್ಯೆ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಸರ್ಕಾರ‌ ನೀಡಿದ ಸಮ್ಮತಿಯನ್ನು ಹಿಂಪಡೆಯಲು ಸಚಿವ ಸಂಪುಟದ ಒಪ್ಪಿಗೆ ಮೇರೆಗೆ ಹಿಂಪಡೆಯಲಾಗಿದೆ. ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಕಾನೂನು ಅಭಿಪ್ರಾಯ ಆಧರಿಸಿ ಸರ್ಕಾರ ಈ ತೀರ್ಮಾನಕ್ಕೆ ಬಂದಿದೆ.

ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಸಿಬಿಐ ಮತ್ತು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ ಹೈಕೋರ್ಟ್​​ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಏಕಸದಸ್ಯ ಪೀಠ ಜನವರಿ 5 ರಂದು ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿತ್ತು. ನ್ಯಾ.ಕೃಷ್ಣ ಎಸ್.ದೀಕ್ಷಿತ್ ಅವರು ಆದೇಶ ಹೊರಡಿಸಿದ್ದರು. ಹಾಗೆ ಸಿಬಿಐ ಅರ್ಜಿ ಸಂಬಂಧ ಡಿಕೆ ಶಿವಕುಮಾರ್ ಅವರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿತ್ತು. ಸಿಬಿಐ ಮತ್ತು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಸಲ್ಲಿಸಿರುವ ರಿಟ್​ ಅರ್ಜಿಯನ್ನು ಇದೀಗ ನ್ಯಾ.ಕೆ.ಸೋಮಶೇಖರ್, ನ್ಯಾ. ಉಮೇಶ್ ಎಂ.ಅಡಿಗರ ಅವರಿರುವ ವಿಭಾಗೀಯ ಪೀಠ ವಿಚಾರಣೆ ನಡೆಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ