ಭೇಟಿಗೆ ಅವಕಾಶ ನೀಡುತ್ತಿಲ್ಲ; ಕೇಂದ್ರ ಸಚಿವ ಪಿಯೂಷ್ ಗೋಯಲ್ ವಿರುದ್ಧ ಮುನಿಯಪ್ಪ ಆರೋಪ

ಕಳೆದ 3 ದಿನಗಳಿಂದ ಗೋಯಲ್ ಅವರು ಭೇಟಿಗೆ ಕಾಲಾವಕಾಶ‌ ನೀಡುತ್ತಿಲ್ಲ. ಕೇಂದ್ರ ಆಹಾರ ಇಲಾಖೆಯು ಭೇಟಿಗೆ ಸಮಯ ನೀಡಿತ್ತು. ಹೀಗಾಗಿ ದೆಹಲಿಗೆ ಬಂದಿದ್ದೇನೆ ಎಂದು ಕೆಹೆಚ್ ಮುನಿಯಪ್ಪ ತಿಳಿಸಿದ್ದಾರೆ.

ಭೇಟಿಗೆ ಅವಕಾಶ ನೀಡುತ್ತಿಲ್ಲ; ಕೇಂದ್ರ ಸಚಿವ ಪಿಯೂಷ್ ಗೋಯಲ್ ವಿರುದ್ಧ ಮುನಿಯಪ್ಪ ಆರೋಪ
ಕೆಹೆಚ್ ಮುನಿಯಪ್ಪ

Updated on: Jun 21, 2023 | 9:12 PM

ನವದೆಹಲಿ: ಕೇಂದ್ರ ವಾಣಿಜ್ಯ ಮತ್ತು ಆಹಾರ ಸಚಿವ ಪಿಯೂಷ್ ಗೋಯಲ್ (Piyush Goyal) ಅವರು ಭೇಟಿಗೆ ಅವಕಾಶ ನೀಡುತ್ತಿಲ್ಲ ಎಂದು ಕರ್ನಾಟಕ ಆಹಾರ ಇಲಾಖೆ ಸಚಿವ ಕೆಹೆಚ್ ಮುನಿಯಪ್ಪ (KH Muniyappa) ಆರೋಪಿಸಿದ್ದಾರೆ. ದೆಹಲಿಗೆ ತೆರಳಿರುವ ಅವರು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ಕಳೆದ 3 ದಿನಗಳಿಂದ ಗೋಯಲ್ ಅವರು ಭೇಟಿಗೆ ಕಾಲಾವಕಾಶ‌ ನೀಡುತ್ತಿಲ್ಲ. ಕೇಂದ್ರ ಆಹಾರ ಇಲಾಖೆಯು ಭೇಟಿಗೆ ಸಮಯ ನೀಡಿತ್ತು. ಹೀಗಾಗಿ ದೆಹಲಿಗೆ ಬಂದಿದ್ದೇನೆ ಎಂದು ತಿಳಿಸಿದ್ದಾರೆ.

ಗುರುವಾರ ಬೆಳಗ್ಗೆ 10 ಗಂಟೆಗೆ ಭೇಟಿಗೆ ಅವಕಾಶ ನೀಡಲಾಗಿತ್ತು. ಇದೀಗ ಆ ಅವಕಾಶ‌ವನ್ನೂ ನಿರಾಕರಿಸಿದ್ದಾರೆ. ರಾಜ್ಯಕ್ಕೆ ಅಕ್ಕಿ ನೀಡುವ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಆದರೆ ನಾವು ಜನರಿಗೆ ನೀಡಿರುವ ಭರವಸೆಯಂತೆ ಅಕ್ಕಿ ನೀಡುತ್ತೇವೆ. ರಾಜ್ಯದ ಜನರಿಗೆ ಅಕ್ಕಿ ನೀಡಲು ಪರ್ಯಾಯ ವ್ಯವಸ್ಥೆ ಮಾಡ್ತಿದ್ದೇವೆ. ಛತ್ತೀಸ್​ಗಢ, ಪಂಜಾಬ್ ಸರ್ಕಾರ ಅಕ್ಕಿ ನೀಡಲು ಮುಂದೆ ಬಂದಿವೆ. ಅಕ್ಕಿ ದರ ಹೆಚ್ಚಳವಾಗುತ್ತಿದೆ, ಅದಕ್ಕೆ ಹಣದ ವ್ಯವಸ್ಥೆ ಮಾಡಿಕೊಂಡಿದ್ದೇವೆ ಎಂದು ಮುನಿಯಪ್ಪ ಹೇಳಿದ್ದಾರೆ.

ಜನರ ಬೇಡಿಕೆಯಂತೆ 8 ಕೆಜಿ ಅಕ್ಕಿ, 2 ಕೆಜಿ ರಾಗಿ ಅಥವಾ ಜೋಳ ನೀಡಲಿದ್ದೇವೆ. ಜುಲೈ 1ರಿಂದ ಆರಂಭವಾಗಬೇಕಿದ್ದ ಅಕ್ಕಿ ವಿತರಣೆಯಲ್ಲಿ ವಿಳಂಬವಾಗಲಿದೆ. ಆಗಸ್ಟ್ ಒಳಗಾಗಿ ಜನರಿಗೆ 10 ಕೆಜಿ ಆಹಾರ ಧಾನ್ಯ ನೀಡುತ್ತೇವೆ ಎಂದು ಮುನಿಯಪ್ಪ ಹೇಳಿದ್ದಾರೆ.

ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ಖರೀದಿ ವಿಚಾರವಾಗಿ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಮಧ್ಯೆ ಜಟಾಪಟಿ ನಡೆಯುತ್ತಿದೆ. ಕರ್ನಾಟಕಕ್ಕೆ ಹೆಚ್ಚುವರಿ ಅಕ್ಕಿ ಪೂರೈಸಲು ಭಾರತೀಯ ಆಹಾರ ನಿಗಮ (ಎಫ್​ಸಿಐ) ನಿರಾಕರಿಸಿದೆ. ಕೇಂದ್ರದ ಬಿಜೆಪಿ ಸರ್ಕಾರದ ಸೂಚನೆ ಮೇರೆಗೆ ಎಫ್​ಸಿಐ ಈ ಕ್ರಮ ಕೈಗೊಂಡಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಆದರೆ, ಬಿಜೆಪಿ ಈ ಆರೋಪವನ್ನು ನಿರಾಕರಿಸಿದೆ.

ಇದನ್ನೂ ಓದಿ: ಬಿಜೆಪಿ ಆಡಳಿತವಿರುವ ರಾಜ್ಯಗಳಿಗೂ ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿದ್ದೇವೆ; ಕೇಂದ್ರ ಸಚಿವ ಪೀಯೂಷ್ ಗೋಯಲ್

ಬಿಜೆಪಿ ಆಡಳಿತ ಇರುವ ರಾಜ್ಯಗಳೂ ಸೇರಿದಂತೆ ಹೆಚ್ಚುವರಿ ಅಕ್ಕಿಗೆ ಇತರ ರಾಜ್ಯಗಳು ಮಾಡಿರುವ ಬೇಡಿಕೆಯನ್ನು ತಿರಸ್ಕರಿಸಲಾಗಿದೆ. ಮುಕ್ತ ಮಾರುಕಟ್ಟೆಯಿಂದ ಅಕ್ಕಿ ಖರೀದಿಸಲು ಕರ್ನಾಟಕ ಮುಕ್ತವಾಗಿದೆ ಎಂದು ಪಿಯೂಷ್ ಗೋಯಲ್ ಮಂಗಳವಾರ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:10 pm, Wed, 21 June 23

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us