
ಬೆಂಗಳೂರು, ಜುಲೈ 8: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ (RCB) ಐಪಿಎಲ್ (IPL) ಟ್ರೋಫಿ ಗೆದ್ದ ಸಂಭ್ರಮಾಚರಣೆ ವೇಳೆ ಜೂನ್ 4 ರಂದು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ತನಿಖೆ ನಡೆಸಿರುವ ಸಿಐಡಿ ಪೊಲೀಸರು ಹಲವು ವಿಚಾರಗಳನ್ನು ದಾಖಲಿಸಿಕೊಂಡಿದ್ದಾರೆ. ಸದ್ಯ ತನಿಖೆಯಲ್ಲಿ ಕಂಡುಬಂದ ಎಲ್ಲಾ ಅಂಶಗಳನ್ನು ಸಿಐಡಿ ವರದಿಯಲ್ಲಿ ದಾಖಲಿಸಿಕೊಳ್ಳಲಾಗಿದೆ. ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಗಾಗಿ (Virat Kohli) ತರಾತುರಿಯಲ್ಲಿ ಕಾರ್ಯಕ್ರಮ ಆಯೋಜಿಸಿದ್ದೇ ಘಟನೆಗೆ ಮುಖ್ಯ ಕಾರಣ ಎಂದು ಸಿಐಡಿ ತನಿಖೆಯಲ್ಲಿ ತಿಳಿದು ಬಂದಿರುವುದಾಗಿ ಮೂಲಗಳು ತಿಳಿಸಿವೆ.
ಆರ್ಸಿಬಿ ಗೆಲುವಿನ ಮರುದಿನವೇ ಕಾರ್ಯಕ್ರಮ ಆಯೋಜಿಸಲು ಆರ್ಸಿಬಿ ಸಿಇಓ ರಾಜೇಶ್ ಮೆನನ್, ಮಾರ್ಕೆಟಿಂಗ್ ಹೆಡ್ ನಿಖಿಲ್ ಸೋಸಲೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಮಿತಿ (ಕೆಎಸ್ಸಿಎ) ಮೇಲೆ ಒತ್ತಡ ಹೇರಿದ್ದರು. ಈ ಇಬ್ಬರು ವ್ಯಕ್ತಿಗಳಿಂದಾಗಿಯೇ ತರಾತುರಿಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಯಿತು ಎಂಬ ಮಾಹಿತಿಯನ್ನು ಸಿಐಡಿ ಕಲೆಹಾಕಿದೆ.
ಕಾರ್ಯಕ್ರಮ ತಡಮಾಡಿದರೆ ವಿರಾಟ್ ಕೊಹ್ಲಿ ಬರಲ್ಲ. ಹಾಗಾಗಿ ಜೂನ್ 4ರಂದೇ ಕಾರ್ಯಕ್ರಮ ಆಯೋಜಿಸಬೇಕು ಎಂದು ಕೊಹ್ಲಿ ಆಪ್ತರೂ ಆಗಿರುವ ಸೋಸಲೆ ಕೆಎಸ್ಸಿಎಗೆ ಒತ್ತಡ ಹಾಕಿದ್ದರು ಎನ್ನಲಾಗಿದೆ. ಆರ್ಸಿಬಿ ವಿಜಯೋತ್ಸವ ಕಾರ್ಯಕ್ರಮವನ್ನು ಮುಂದೂಡಿಕೆ ಮಾಡುವಂತೆ ಕರ್ನಾಟಕ ಪೊಲೀಸ್ ಇಲಾಖೆ ಹಾಗೂ ಕೆಎಸ್ಸಿಎ ಸಲಹೆ ನೀಡಿದ್ದವು. ಆದರೆ, ಕಾರ್ಯಕ್ರಮ ಮುಂದೂಡಿದರೆ ಕೊಹ್ಲಿ ಬರಲ್ಲ. ಅವರು ಬ್ರಿಟನ್ಗೆ ಹೋಗಬೇಕು ಎಂದು ಸೋಸಲೆ ಒತ್ತಡ ಹೇರಿದ್ದರು.
ಆರ್ಸಿಬಿ ವಿಜಯೋತ್ಸವಕ್ಕೆ ಬರುವವರಿಗೆ ಚಿನ್ನಸ್ವಾಮಿ ಸ್ಟೇಡಿಂಗೆ ಉಚಿತ ಟಿಕೆಟ್ ಘೋಷಣೆ, ಟಿಕೆಟ್ ಗೊಂದಲದ ಬಗ್ಗೆಯೂ ಸಿಐಡಿ ಮಾಹಿತಿ ಕಲೆಹಾಕಿದೆ. ಹೀಗಾಗಿ ಕಾರ್ಯಕ್ರಮದ ಟೈಮ್ಲೈನ್ ಪ್ರಕಾರ ಮಾಹಿತಿ ಕಲೆ ಹಾಕಿ ಸಿಐಡಿ ತಂಡ ವರದಿ ಸಿದ್ಧಪಡಿಸುತ್ತಿದೆ.
ಸಾವಿರಾರು ವಿಡಿಯೊಗಳ ವೀಕ್ಷಣೆ, ಸಿಸಿಟಿವಿ ದೃಶ್ಯಗಳ ಪರಿಶೀಲನೆ ಹಾಗೂ ಬಂಧಿತ ಆರೋಪಿಗಳ ವಿಚಾರಣೆ ನಡೆಸಿ ಮಾಹಿತಿ ಕಲೆಹಾಕಿರುವ ಸಿಐಡಿ ತಂಡ ವರದಿ ಸಿದ್ಧಪಡಿಸುತ್ತಿದೆ. ತನಿಖೆ ವೇಳೆ ಸಿಐಡಿ ಕಂಡುಕೊಂಡ ಕೆಲವು ಅಂಶಗಳು ಇಲ್ಲಿವೆ;
ಇದನ್ನೂ ಓದಿ: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ: ಬಂಧಿತರ ವಿಚಾರಣೆ ವೇಳೆ ಗೊತ್ತಾಗಿದ್ದೇನು? ಸಿಐಡಿ ಮುಂದಿನ ನಡೆಯೇನು? ಇಲ್ಲಿದೆ ವಿವರ
ಸದ್ಯ ಈ ಎಲ್ಲ ವಿಚಾರಗಳನ್ನು ಸಿಐಡಿ ತನಿಖಾ ವರದಿಯಲ್ಲಿ ಸೇರಿಸಲಾಗುತ್ತಿದ್ದು, ಶೀಘ್ರದಲ್ಲೇ ತನಿಖೆ ಪೂರ್ಣಗೊಳಿಸಿ ವರದು ಸಲ್ಲಿಸುವ ನಿರೀಕ್ಷೆ ಇದೆ.
ವರದಿ: ವಿಕಾಸ್, ಟಿವಿ9
Published On - 1:10 pm, Tue, 8 July 25