AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆ

ಕರ್ನಾಟಕ ಮೂಲದ ಸಾಕೇತ್ ಶ್ರೀನಿವಾಸಯ್ಯ ಎಂಬ ವಿದ್ಯಾರ್ಥಿ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದ್ದು, ಭಾರತೀಯ ಸಮುದಾಯದವರಲ್ಲಿ ಹಾಗೂ ಆತನ ಕುಟುಂಬದವರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸದ್ಯ, ಆತನ ಪತ್ತೆಗೆ ಸ್ಥಳೀಯ ಪೊಲೀಸರ ಜತೆಗೂಡಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಲ್ಲಿನ ಭಾರತೀಯ ದೂತಾವಾಸ ಕಚೇರಿ ತಿಳಿಸಿದೆ.

ಕರ್ನಾಟಕ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆ
ಸಾಕೇತ್ ಶ್ರೀನಿವಾಸಯ್ಯImage Credit source: LinkedIn/Saketh Sreenivasaiah
ಗಣಪತಿ ಶರ್ಮಾ
|

Updated on: Feb 14, 2026 | 10:36 AM

Share

ನವದೆಹಲಿ, ಫೆಬ್ರವರಿ 14: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಕರ್ನಾಟಕ (Karnataka)ಮೂಲದ ವಿದ್ಯಾರ್ಥಿ ಕಾಣೆಯಾಗಿರುವ ಬಗ್ಗೆ ವರದಿಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. 22 ವರ್ಷದ ಸಾಕೇತ್ ಶ್ರೀನಿವಾಸಯ್ಯ ಕಾಣೆಯಾಗಿದ್ದು, ಅವರನ್ನು ಪತ್ತೆಹಚ್ಚಲು ಸ್ಥಳೀಯ ಪೊಲೀಸರು ಮತ್ತು ಭಾರತೀಯ ದೂತಾವಾಸ ಕಚೇರಿ ತುರ್ತು ಕ್ರಮ ಕೈಗೊಂಡಿವೆ. ಮಾಸ್ಟರ್ಸ್ ವಿದ್ಯಾರ್ಥಿಯಾಗಿರುವ ಸಾಕೇತ್ ಶ್ರೀನಿವಾಸಯ್ಯ (Saketh Sreenivasaiah) ಅಮೆರಿಕದ ಯೂನಿವರ್ಸಿಟಿ ಆಫ್ ಕ್ಯಾಲಿಫೋರ್ನಿಯಾ, ಬರ್ಕ್ಲೇ (University of California, Berkeley) ಯಲ್ಲಿ ಪಿಜಿ ವ್ಯಾಸಂಗ ಮಾಡುತ್ತಿದ್ದಾರೆ. ಅವರು ಫೆಬ್ರವರಿ 10ರಂದು ಕ್ಯಾಲಿಫೋರ್ನಿಯಾದ ಬರ್ಕ್ಲೇ ನಗರದ ಡ್ವೈಟ್ ವೇ ಪ್ರದೇಶದಲ್ಲಿ ಕೊನೆಯಾಗಿ ಕಾಣಿಸಿಕೊಂಡಿದ್ದರು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.

ಸಾಕೇತ್ ಕಾಣೆಯಾಗಿರುವ ಬಗ್ಗೆ ಸ್ಯಾನ್ ಫ್ರಾನ್ಸಿಸ್ಕೋದಲ್ಲಿನ ಭಾರತೀಯ ದೂತಾವಾಸ ಕಚೇರಿ ಆತಂಕ ವ್ಯಕ್ತಪಡಿಸಿದೆ. ಸಾಕೇತ್​ನ ಕುಟುಂಬದವರೊಂದಿಗೆ ಸಂಪರ್ಕದಲ್ಲಿದ್ದು, ಸ್ಥಳೀಯ ಅಧಿಕಾರಿಗಳ ಸಹಕಾರದಿಂದ ವಿದ್ಯಾರ್ಥಿಯನ್ನು ಪತ್ತೆಹಚ್ಚಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ದೂತಾವಾಸ ಕಚೇರಿ ಹೇಳಿದೆ.

ಪೊಲೀಸರ ಮಾಹಿತಿ ಪ್ರಕಾರ, ಸಾಕೇತ್ ಸುಮಾರು 6 ಅಡಿ 1 ಇಂಚು ಎತ್ತರ ಹೊಂದಿದ್ದು, ಕಪ್ಪು ಕೂದಲು ಮತ್ತು ಕಂದು ಬಣ್ಣದ ಕಣ್ಣುಗಳನ್ನು ಹೊಂದಿದ್ದಾರೆ. ಸಾಕೇತ್ ಅಪಾಯದ ಸ್ಥಿತಿಯಲ್ಲಿ ಇರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಯಾರಿಗಾದರೂ ಮಾಹಿತಿ ದೊರೆತರೆ ತಕ್ಷಣ ತಿಳಿಸಲು ಬರ್ಕ್ಲೇ ನಗರದ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಸಾಕೇತ್ ಕೆಮಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಪೂರ್ಣಗೊಳಿಸಿದ್ದು, ಚೆನ್ನೈನ ಮದ್ರಾಸ್ ಐಐಟಿಯಲ್ಲಿ ಬಿ.ಟೆಕ್ ಮಾಡಿದ್ದರು. ಪ್ರಸ್ತುತ ಅವರು ಪ್ರಾಡಕ್ಟ್ ಡೆವಲಪ್‌ಮೆಂಟ್ ಕಾರ್ಯಕ್ರಮದಡಿ ಯುನಿವರ್ಸಿಟಿ ಆಫ್ ಕ್ಯಾಲಿಫೋರ್ನಿಯಾ, ಬರ್ಕ್ಲೇಯಲ್ಲಿ ಮಾಸ್ಟರ್ ಆಫ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದರು.

ಇದನ್ನೂ ಓದಿ: ಕೆನಡಾದಲ್ಲಿ ಕನ್ನಡಿಗನ ಕಗ್ಗೊಲೆ! ಹತ್ತಾರು ಬಾರಿ ಗುಂಡು ಹಾರಿಸಿ ಕ್ರೌರ್ಯ

ಸಾಕೇತ್ ಡೀಪ್-ಟೆಕ್, ಸೆಮಿಕಂಡಕ್ಟರ್ ಹಾಗೂ ಅಡ್ವಾನ್ಸ್ಡ್ ಮೆಟೀರಿಯಲ್ಸ್ ಕ್ಷೇತ್ರಗಳ ಬಗ್ಗೆ ಆಸಕ್ತಿ ಹೊಂದಿರುವುದಾಗಿ ಹೇಳಿಕೊಂಡಿದ್ದರು. ಸದ್ಯ, ಸಾಕೇತ್ ಕಾಣೆಯಾಗಿರುವುದು ಭಾರತೀಯ ಸಮುದಾಯದ ಜನರಲ್ಲೂ ಆತಂಕ ಮೂಡಿಸಿದೆ. ವಿದ್ಯಾರ್ಥಿಯನ್ನು ಶೀಘ್ರ ಪತ್ತೆಹಚ್ಚುವಂತೆ ಕುಟುಂಬದವರು ಹಾಗೂ ಭಾರತೀಯ ಸಮುದಾಯದವರು ಮನವಿ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ