ಬೆಂಗಳೂರು, (ಮಾರ್ಚ್ 14): ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಬಂಧನವಾಗಿರುವ ಸ್ಯಾಂಡಲ್ವುಡ್ ನಟಿ ರನ್ಯಾ ರಾವ್ (Ranya Rao) ಜಾಮೀನು ಅರ್ಜಿ ವಜಾಗೊಂಡಿದೆ. ಆರ್ಥಿಕ ಅಪರಾಧಗಳ ನ್ಯಾಯಾಲಯವು ರನ್ಯಾ ರಾವ್ ಅವರ ಜಾಮೀನು ಅರ್ಜಿಯನ್ನು ತಿರಸ್ಕೃತ ಮಾಡಿ (ಮಾರ್ಚ್ 14) ಆದೇಶ ಹೊರಡಿಸಿದೆ. ದುಬೈನಿಂದ ಚಿನ್ನ ಕಳ್ಳ ಸಾಗಣೆ ಆರೋಪದ ಮೇಲೆ ನಟಿ ರನ್ಯಾ ರಾವ್ ಬೆಂಗಳೂರು ವಿಮಾನ ನಿಲ್ದಾಣ ಸಿಕ್ಕಿಬಿದ್ದಿದ್ದು, ಡಿಆರ್ಐ ಅಧಿಕಾರಿಗಳು ಬಂಧಿಸಿ ತನಿಖೆ ನಡೆಸಿದ್ದಾರೆ. ಮತ್ತೊಂದೆಡೆ ನಟಿ ರನ್ಯಾ ರಾವ್ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ಈ ಪ್ರಕರಣದಲ್ಲಿ ವಾದ-ಪ್ರತಿವಾದಗಳನ್ನು ಆಲಿಸಿ ಇಂದು ನಟಿ ಜಾಮೀನು ಅರ್ಜಿಯನ್ನು ವಜಾ ಮಾಡಿದೆ. ಇದರಿಂದ ಚಿನ್ನದ ರಾಣಿಗೆ ಜೈಲೇ ಗತಿ.
ರನ್ಯಾ ರಾವ್ ಪರವಾಗಿ ಹಿರಿಯ ವಕೀಲ ಕಿರಣ್ ಜವಳಿ ವಾದ ಮಂಡಿಸಿದರೆ, ಡಿಆರ್ಐ ಪರವಾಗಿ ಮಧು ರಾವ್ ವಾದ ಮಂಡಿಸಿದ್ದರು. ಆದ್ರೆ, ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ಈ ಪ್ರಕರಣದಲ್ಲಿ ವಾದ-ಪ್ರತಿವಾದಗಳನ್ನು ಆಲಿಸಿ, ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು. ಅದರಂತೆ ಕೋರ್ಟ್ ರನ್ಯಾ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದ್ದು, ರನ್ಯಾ ಜೈಲಿನಲ್ಲೇ ಉಳಿಯಬೇಕಿದೆ. ಇನ್ನು ಜಾಮೀನಿಗಾಗಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಇದೆ.
ಇಷ್ಟು ದಿನ ರನ್ಯಾ ರಾವ್ ಕೇಸ್ನಲ್ಲಿ ಸಿಬಿಐ ಅಧಿಕಾರಿಗಳು ಹಾಗೂ ಡಿಆರ್ಐ ಅಧಿಕಾರಿಗಳು ಮಾತ್ರ ವಿಚಾರಣೆ ನಡೆಸುತ್ತಾ ಇದ್ದರು. ಈಗ ಕೇಸ್ನಲ್ಲಿ ಇಡಿಯಿಂದ ಇಸಿಐಆರ್ ದಾಖಲಾಗಿದೆ. ಇಸಿಐಆರ್ ಎಂದರೆ ಎನ್ಫೋರ್ಸ್ಮೆಂಟ್ ಕೇಸ್ ಇನ್ಫಾರ್ಮೇಷನ್ ರಿಪೋರ್ಟ್. ಅಕ್ರಮ ಹಣ ವರ್ಗಾವಣೆ ವಿಚಾರ ತಿಳಿದಿರುವುದರಿಂದ ಈ ಕೇಸ್ ದಾಖಲಾಗಿದೆ. ಇದರ ಬೆನ್ನಲ್ಲೇ ಇಡಿ ರನ್ಯಾ ರಾವ್ ಹಾಗೂ ಎರಡನೇ ಆರೋಪಿ ತರುಣ್ ಕೊಂಡೂರು ರಾಜು ನಿವಾಸದ ಮೇಲೂ ದಾಳಿ ಮಾಡಿ ಮಹತ್ವದ ದಾಖಲೆ ಕಲೆಹಾಕಿದೆ.
ಇನ್ನು ಗೋಲ್ಡ್ ಸ್ಮಗ್ಲಿಂಗ್ ವಿಚಾರದಲ್ಲಿ ಅಕ್ರಮ ಹಣ ವರ್ಗಾವಣೆ ಆಗಿರೋದು ಮೇಲ್ನೋಟಕ್ಕೆ ದೃಢಪಟ್ಟಿದೆ. ಹಾವಾಲಾ ದಂಧೆ ಮೂಲಕ ಭಾರತದಿಂದ ಹಣ ದುಬೈಗೆ ಹೋಗುತ್ತಿತ್ತು. ಬಳಿಕ ಚಿನ್ನದ ಗಟ್ಟಿ ರೂಪದಲ್ಲಿ ಬೆಂಗಳೂರಿಗೆ ವಾಪಸ್ ಬರುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 5:50 pm, Fri, 14 March 25