
ಸಂಗಾರೆಡ್ಡಿ, ಆ.11: ನೆರೆಯ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಭೀಕರ ರಸ್ತೆ ಅಪಘಾತಗಳು ಸಂಭವಿಸಿದ್ದು, ಒಟ್ಟು 9 ಜನರು ದುರ್ಮರಣಕ್ಕೀಡಾಗಿದ್ದಾರೆ. ಮೊಗದಂಪಲ್ಲಿ ಮಂಡಲದ ಸತ್ವಾರ್ ಬಳಿ ನಡೆದ ಭೀಕರ ಅಪಘಾತದಲ್ಲಿ ಇ-ಆಟೋಗೆ (e-Auto) ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಕರ್ನಾಟಕ ಮೂಲದ 7 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೊಗದಂಪಲ್ಲಿ ಮಂಡಲದ ಸತ್ವಾರ್ ಬಳಿ ಈ ಭೀಕರ ದುರಂತ ಸಂಭವಿಸಿದೆ. ಮೃತಪಟ್ಟವರೆಲ್ಲರೂ ಕರ್ನಾಟಕದ ಬೀದರ್ ಮೂಲದ ರಾಜಗಿರಿ ಗ್ರಾಮದ ಕೂಲಿ ಕಾರ್ಮಿಕರು ಎಂದು ಪೊಲೀಸರು ಗುರುತಿಸಿದ್ದಾರೆ. ಅಪಘಾತ ಸಂಭವಿಸಿದ ಸಮಯದಲ್ಲಿ ಇ-ಆಟೋದಲ್ಲಿ ಒಟ್ಟು 14 ಜನ ಕೂಲಿ ಕಾರ್ಮಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಅಪಘಾತದಲ್ಲಿ ಏಳು ಜನರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರ ಸ್ಥಿತಿ ಅತ್ಯಂತ ಗಂಭೀರವಾಗಿದೆ. ಗಾಯಾಳುಗಳನ್ನು ತಕ್ಷಣವೇ ಜಹೀರಾಬಾದ್ ಏರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಹಾರ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಸಂಗಾರೆಡ್ಡಿ ಜಿಲ್ಲೆಯ ಕೊಹೀರ್ ಮಂಡಲದ ಕವೇಲಿ ಬಳಿ ಮತ್ತೊಂದು ಭೀಕರ ಅಪಘಾತ ನಡೆದಿದೆ. ಬೀದರ್ನಿಂದ ಹೈದರಾಬಾದ್ಗೆ ವೇಗವಾಗಿ ತೆರಳುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಇತರೆ ವಾಹನಗಳಿಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿ: ಸಾರ್ವಜನಿಕರ ಆರೋಗ್ಯದೊಂದಿಗೆ ಚೆಲ್ಲಾಟ: ಎಫ್ಎಸ್ಎಸ್ಎಐ ನಿಯಮ ಮೀರಿದ ಇಂದಿರಾ ಕ್ಯಾಂಟೀನ್ ಘಟಕಗಳಿಗೆ ನೋಟಿಸ್
ಒಂದೇ ದಿನ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದ ಈ ಎರಡು ಭೀಕರ ಅಪಘಾತಗಳಲ್ಲಿ ಒಟ್ಟು 9 ಜನರು ಜೀವ ಕಳೆದುಕೊಂಡಿದ್ದು, ಹೆದ್ದಾರಿಗಳು ರಕ್ತಸಿಕ್ತವಾಗಿವೆ. ಅತಿವೇಗ, ಓವರ್ಟೇಕ್ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಇಂತಹ ಸರಣಿ ಅಪಘಾತಗಳಿಗೆ ಕಾರಣವಾಗುತ್ತಿದ್ದು, ಅಮಾಯಕ ಜೀವಗಳು ಬಲಿಯಾಗುತ್ತಿವೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:31 pm, Tue, 11 August 26