ಕಾಂಗ್ರೆಸ್ ಭ್ರಷ್ಟರೆಲ್ಲರೂ ಸತೀಶ್ ಸೈಲ್ ಹಾದಿ ಹಿಂಬಾಲಿಸಬೇಕಾದ ಸ್ಥಿತಿ ಎದುರಾಗಲಿದೆ: ವಿಜಯೇಂದ್ರ

ಕಾಂಗ್ರೆಸ್ ಶಾಸಕ ಸತೀಶ್ ಶೈಲ್ ಅವರು ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ತಪ್ಪಿತಸ್ಥರೆಂದು ನ್ಯಾಯಾಲಯ ತೀರ್ಪು ನೀಡಿದ ಬೆನ್ನಲ್ಲೇ ಕಾಂಗ್ರೆಸ್‌ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. ಮುಡಾ ಮತ್ತು ಇತರ ಹಗರಣಗಳನ್ನು ಉಲ್ಲೇಖಿಸಿ, ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರವನ್ನು ಬಿಜೆಪಿ ಖಂಡಿಸಿದೆ. ಈ ತೀರ್ಪು ರಾಜ್ಯದಲ್ಲಿನ ಭ್ರಷ್ಟಾಚಾರ ವಿರುದ್ಧದ ಹೋರಾಟಕ್ಕೆ ಹೊಸ ತಿರುವು ನೀಡಿದೆ ಎಂದು ಬಿಜೆಪಿ ಪ್ರತಿಪಾದಿಸಿದೆ.

ಕಾಂಗ್ರೆಸ್ ಭ್ರಷ್ಟರೆಲ್ಲರೂ ಸತೀಶ್ ಸೈಲ್ ಹಾದಿ ಹಿಂಬಾಲಿಸಬೇಕಾದ ಸ್ಥಿತಿ ಎದುರಾಗಲಿದೆ: ವಿಜಯೇಂದ್ರ
ಬಿವೈ ವಿಜಯೇಂದ್ರ

Updated on: Oct 25, 2024 | 12:09 PM

ಬೆಂಗಳೂರು, ಅಕ್ಟೋಬರ್ 25: ಅಕ್ರಮವಾಗಿ ಅದಿರು ಸಾಗಾಟ ಮಾಡಿದ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ತಪ್ಪಿತಸ್ಥ ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪಿತ್ತ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ‘ಕೈ’ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್​​ ಮೂಲಕ ಕಾಂಗ್ರೆಸ್ ವಿರುದ್ಧ ಗುಡುಗಿರುವ ಅವರು, ಸತೀಶ್ ಸೈಲ್ ವಿರುದ್ಧದ ತೀರ್ಪು ಕಾಂಗ್ರೆಸ್ ಸರ್ಕಾರದ ಭ್ರಷ್ಟರೆಲ್ಲರೂ ಅವರ ಹಾದಿಯನ್ನು ಹಿಂಬಾಲಿಸಬೇಕಾದ ಸ್ಥಿತಿ ಎದುರಾಗಲಿದೆ ಎಂಬುದರ ಸ್ಪಷ್ಟ ಸೂಚನೆಯಾಗಿದೆ ಎಂದಿದ್ದಾರೆ.

ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ತಪ್ಪಿತಸ್ಥರೆಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪು ಈ ನೆಲದ ಕಾನೂನು ಅದೆಷ್ಟು ಗಟ್ಟಿಯಾಗಿದೆ ಎನ್ನುವುದನ್ನು ನಿರೂಪಿಸಿದೆ. ಈ ತೀರ್ಪು ಮುಡಾ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಗಳಂತಹ ಲೂಟಿಕೋರತನ ಹಾಗೂ ಭ್ರಷ್ಟತೆಯ ಆರೋಪ ಎದುರಿಸುತ್ತಿರುವವರ ಮುಖಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ವಿಜಯೇಂದ್ರ ಉಲ್ಲೇಖಿಸಿದ್ದಾರೆ.

ಅಕ್ರಮ ಅದಿರು ಸಾಗಣೆ ಮಾಡಿ ರಾಜ್ಯದ ಬೊಕ್ಕಸಕ್ಕೆ 200 ಕೋಟಿ ರೂಪಾಯಿಗೂ ಹೆಚ್ಚಿನ ನಷ್ಟ ಉಂಟು ಮಾಡಿದ, ಆರು ಕ್ರಿಮಿನಲ್ ಆರೋಪಗಳಲ್ಲಿ ದೋಷಿಯಾಗಿ ಜೈಲು ಸೇರಿರುವ ಸತೀಶ್ ಸೈಲ್ ಅವರ ವಿರುದ್ಧ ಬಂದಿರುವ ತೀರ್ಪು ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಆರೋಪಿತರಾಗಿರುವ ಕಾಂಗ್ರೆಸ್ ಸರ್ಕಾರದ ಭ್ರಷ್ಟರೆಲ್ಲರೂ ಸತೀಶ್ ಸೈಲ್ ರವರ ಹಾದಿಯನ್ನು ಹಿಂಬಾಲಿಸಬೇಕಾದ ಸ್ಥಿತಿ ಎದುರಾಗಲಿದೆ ಎಂಬುದರ ಸ್ಪಷ್ಟ ಸೂಚನೆಯಾಗಿದೆ. ಮುಡಾ ಹಗರಣದ ಕುರಿತು ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿಯನ್ನು ಎತ್ತಿ ಹಿಡಿದಿರುವ ಉಚ್ಛ ನ್ಯಾಯಾಲಯದ ಸುದೀರ್ಘ ತೀರ್ಪಿನಲ್ಲಿ ಹಗರಣದ ಕುರಿತಾದ ಉಲ್ಲೇಖಗಳು ಸ್ಪಷ್ಟವಾಗಿ ನಮೂದಾಗಿವೆ. ಈ ನಿಟ್ಟಿನಲ್ಲಿ ಇಡಿ ಹಾಗೂ ಲೋಕಾಯುಕ್ತದಲ್ಲಿ ತನಿಖೆಯೂ ಸಾಗಿದೆ, ಹೀಗಾಗಿಯೂ ಭಂಡತನ ಮೆರೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕ ಸತೀಶ್ ಸೈಲ್ ವಿರುದ್ಧದ ತೀರ್ಪಿನಿಂದಾದರೂ ಎಚ್ಚೆತ್ತುಕೊಂಡು ನೈತಿಕತೆ ಮೆರೆದರೆ ಭವಿಷ್ಯತ್ತಿನಲ್ಲಿ ಅವರು ಕಿಂಚಿತ್ತಾದರೂ ಗೌರವ ಉಳಿಸಿಕೊಳ್ಳಬಹುದು. ಇಲ್ಲದಿದ್ದರೆ ನ್ಯಾಯಾಲಯವೇ ಅವರಿಗೆ ಹಾದಿ ತೋರುವ ಪರಿಸ್ಥಿತಿ ಉದ್ಭವಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂಬುದು ಸತೀಶ್ ಸೈಲ್ ಪ್ರಕರಣದ ತೀರ್ಪು ತಿಳಿಸಿಕೊಟ್ಟಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್‌ ಶಾಸಕ ಸತೀಶ್ ಸೈಲ್ ಇನ್​ ಜೈಲ್: ಶಾಸಕ ಸ್ಥಾನ ಅನರ್ಹ ಭೀತಿ!

ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಾಟ ಮಾಡಿದ ಪ್ರಕರಣದಲ್ಲಿ ಸುಮಾರು 14 ವರ್ಷಗಳ ನಂತರ ತೀರ್ಪು ಪ್ರಕಟವಾಗಿದೆ. ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ತಪ್ಪಿತಸ್ಥರು ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ಗುರುವಾರ ಆದೇಶ ಪ್ರಕಟಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us