ಕರ್ನಾಟಕದಲ್ಲಿ ಮಳೆ ಅಬ್ಬರ: ನಾಳೆ ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನಾಳೆ(ಜೂನ್ 26) ಸಹ ರಾಜ್ಯ ಹಲವು ಕಡೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಇದರಿಂದ ಮುಂಜಾಗ್ರತಾ ಕ್ರಮವಾಗಿ ಕೆಲ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಾಗಾದ್ರೆ, ಗುರುವಾರ ಯಾವೆಲ್ಲಾ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ ಎನ್ನುವ ವಿವರ ಈ ಕೆಳಗಿನಂತಿದೆ ನೋಡಿ.

ಬೆಂಗಳೂರು, (ಜೂನ್ 25): ಕರ್ನಾಟಕದ (Karnataka) ಹಲವೆಡೆ ವರುಣ (Rain) ಅಬ್ಬರ ಮುಂದುವರಿದಿದ್ದು ಜನರ ಹೈರಾಣಾಗಿದ್ದಾರೆ. ಕೆಲ ಮೂರ್ನಾಲ್ಕು ದಿನಗಳಿಂದ ತಗ್ಗಿದ್ದ ಮಳೆ ಮತ್ತೆ ನಿನ್ನೆಯಿಂದ (ಜೂನ್ 24) ಅಬ್ಬರಿನಸಲು ಶುರುವಾಗಿದೆ. ನಾಳೆಯೂ(ಜೂನ್ 26) ಸಹ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಐದು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೊಡಗು, ಚಿಕ್ಕಮಗಳೂರು, ಉತ್ತರ ಕನ್ನಡ, ಹಾಸನ, ಬೆಳಗಾವಿ ಜಿಲ್ಲೆಗಳಲ್ಲಿ ನಾಳೆ ಅಂದರೆ ಗುರುವಾರ ರಜೆ ಘೋಷಿಸಲಾಗಿದೆ. ಕೆಲ ಜಿಲ್ಲೆಗಳಲ್ಲಿ ಕೇವಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದ್ದರೆ, ಕೆಲವು ಕಡೆ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಬೆಳಗಾವಿಯ 3 ತಾಲೂಕಿನಲ್ಲಿ ರಜೆ
ಬೆಳಗಾವಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದ, ಮುನ್ನೆಚ್ಚರಿಕೆ ಕ್ರಮವಾಗಿ ನಾಳೆಯೂ ಸಹ ಜಿಲ್ಲೆಯ ಮೂರು ತಾಲುಕಿನ ಅಂಗನವಾಡಿ, ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿ, ಖಾನಾಪುರ, ಕಿತ್ತೂರು ತಾಲೂಕಿನಲ್ಲಿ ಮಾತ್ರ ಜೂನ್ 26ರಂದು ಸರ್ಕಾರಿ, ಅನುದಾನ ರಹಿತ, ಅನುದಾನ ಸಹಿತ ಮತ್ತು ಪಿಯುಸಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಮುಕ್ತಾಯ ಹಂತಕ್ಕೆ ಸಿಗಂದೂರು ಸೇತುವೆ ಕಾಮಗಾರಿ: ಡ್ರೋನ್ ಕಣ್ಣಲ್ಲಿ ಸೆರೆಯಾಯ್ತು ಲೋಡ್ ಟೆಸ್ಟಿಂಗ್ ದೃಶ್ಯ
ಕೊಡಗು ಜಿಲ್ಲೆಯಾದ್ಯಂತ ನಾಳೆ ರಜೆ
ಇನ್ನು ಕೊಡು ಜಿಲ್ಲೆಯಲ್ಲೂ ಸಹ ನಾಳೆಯೂ ಮಳೆ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಕೊಡಗು ಜಿಲ್ಲೆಯಾದ್ಯಂತ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜೂನ್ 26ರಂದು ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪಿಯು ಕಾಲೇಜಿಗೆ ರಜೆ ನೀಡಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶಿಸಿದ್ದಾರೆ.
ಹಾಸನ ಜಿಲ್ಲೆಯ ಐದು ತಾಲೂಕಿನಲ್ಲಿ ರಜೆ
ಹಾಸನದಲ್ಲೂ ಕೂಡ ವರುಣ ಅಬ್ಬರ ಮುಂದುವರಿದಿದ್ದು, ಜಿಲ್ಲೆಯ 3 ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಹಾಸನ, ಸಕಲೇಶಪುರ , ಆಲೂರು, ಹೊಳೆನರಸೀಪುರ, ಅರಕಲಗೂಡು ತಾಲೂಕಿನಲ್ಲಿ ಅಂಗನವಾಡಿ, ಪ್ರಾಥಮಿಕ & ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ. ನಿರಂತರ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಡಿಸಿ ಲತಾ ಕುಮಾರಿ ಆದೇಶಿಸಿದ್ದಾರೆ.
ಜೋಯಿಡಾ, ದಾಂಡೇಲಿಯಲ್ಲಿ ರಜೆ
ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿರುವ ಹಿನ್ನೆಲೆಯಲ್ಲಿ ಗುರುವಾರ ಎರಡು ತಾಲೂಕಿನಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಜೋಯಿಡಾ, ದಾಂಡೇಲಿ ತಾಲೂಕಿನಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ 5 ತಾಲೂಕಿನಲ್ಲಿ ರಜೆ ಘೋಷಣೆ
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಐದು ತಾಲೂಕಿನ ಶಾಲೆಗಳಿ ಮಾತ್ರ ರಜೆ ನೀಡಲಾಗಿದೆ. ಕಳಸ ,ಮೂಡಿಗೆರೆ, ಶೃಂಗೇರಿ ,ಕೊಪ್ಪ,NR ಪುರ ತಾಲೂಕಿನಲ್ಲಿ ನಾಳೆ ಗುರುವಾರ ಅಂಗನವಾಡಿ ,ಪ್ರಾಥಮಿಕ ,ಪ್ರೌಢ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ನಾಳೆ ರಜೆ
ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ಭಾಗ ಹಾಗೂ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಿ ತಹಶಿಲ್ದಾರ್ ಆದೇಶಿಸಿದ್ದಾರೆ. ಅಂಗನವಾಡಿಯಿಂದ ಪ್ರೌಢಶಾಲೆಯವರೆಗೆ ಮಾತ್ರ ರಜೆ ಘೋಷಣೆ ಮಾಡಲಾಗಿದ್ದು, ಎಂದಿನಂತೆ ಕಾಲೇಜುಗಳು ಓಪನ್ ಆಗಿರುತ್ತವೆ.
Published On - 9:20 pm, Wed, 25 June 25