ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ತೀರ್ಥಹಳ್ಳಿ ಬಿಜೆಪಿ ಕಾರ್ಯದರ್ಶಿ ಎನ್​ಐಎ ವಶಕ್ಕೆ

| Updated By: ರಮೇಶ್ ಬಿ. ಜವಳಗೇರಾ

Updated on: Apr 05, 2024 | 5:29 PM

Bengaluru Rameshwaram cafe blast Case: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ಎನ್​ಐಎ ಅಧಿಕಾರಿಗಳು ತೀವ್ರಗೊಳಿಸಿದ್ದು, ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ ಅಧಿಕಾರಿಗಳು ಇಂದು(ಏಪ್ರಿಲ್ 05) ತೀರ್ಥಹಳ್ಳಿ ಬಿಜೆಪಿ ಕಾರ್ಯದರ್ಶಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ತೀರ್ಥಹಳ್ಳಿ ಬಿಜೆಪಿ ಕಾರ್ಯದರ್ಶಿ ಎನ್​ಐಎ ವಶಕ್ಕೆ
ಸಾಯಿಪ್ರಸಾದ್, ತೀರ್ಥಹಳ್ಳಿ ಬಿಜೆಪಿ ಕಾರ್ಯದರ್ಶಿ
Follow us on

ಶಿವಮೊಗ್ಗ/ಬೆಂಗಳೂರು, (ಏಪ್ರಿಲ್ 05): ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣದ(Bengaluru Rameshwaram café blast Case)  ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್​ಐಎ) ತೀವ್ರಗೊಳಿಸಿದ್ದು, ಇದೀಗ ಮತ್ತೋರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದೆ. ಶಿವಮೊಗ್ಗ(Shivamogga)  ಜಿಲ್ಲೆ ತೀರ್ಥಹಳ್ಳಿಯಲ್ಲಿ ಸಾಯಿಪ್ರಸಾದ್ ಎನ್ನುವಾತನನ್ನು ಇಂದು (ಏಪ್ರಿಲ್ 05) ಎನ್​ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮೊಬೈಲ್ ಮಾರಾಟ ಮಳಿಗೆ ಮೇಲೆ ದಾಳಿ ಮಾಡಿದ್ದ NIA ಅಧಿಕಾರಿಗಳು, ಇದೀಗ ತೀರ್ಥಹಳ್ಳಿ ಬಿಜೆಪಿ ಘಟಕದ ಕಾರ್ಯದರ್ಶಿಯಾಗಿರುವ (thirthahalli bjp secretary) ಸಾಯಿಪ್ರಸಾದ್ ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.

ಮಾರ್ಚ್ 27ರಂದು ಇಂಬ್ರೇಜ್ ಮಾಲೀಕತ್ವದ ಡಿಜಿಟಲ್ ಜೋನ್ ಮೊಬೈಲ್ ಮಳಿಗೆ ಮೇಲೆ ಎನ್​ಐಎ ದಾಳಿ ಮಾಡಿತ್ತು. ದಾಳಿ ವೇಳೆ ಸಾಯಿಪ್ರಸಾದ್ ಸಂಬಂಧದ ಬಗ್ಗೆ ಎನ್​ಐಎಗೆ ಮಾಹಿತಿ ಸಿಕ್ಕಿದೆ. ಹಾಗೇ ಮೊಬೈಲ್ ಅಂಗಡಿ ಮಾಲೀಕನಿಗೆ ಸಾಯಿಪ್ರಸಾದ್ ಸ್ನೇಹಿತ. ಇದೇ ಆಧಾರದ ಮೇಲೆ ಎನ್​ಐಎ ಅಧಿಕಾರಿಗಳು ಸಾಯಿಪ್ರಸಾದ್ ನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ ಕೇಸ್​ಗೂ ಕಾಫಿನಾಡಿಗೂ ನಂಟು: ಬಂಧಿತ ಬ್ಲಾಸ್ಟ್​ನ ಮಾಸ್ಟರ್ ಮೈಂಡ್ ಕಳಸ ಮೂಲದವನು

2024, ಮಾ.1ರಂದು ಬೆಂಗಳೂರಿನ ವೈಟ್‌ಫೀಲ್ಡ್‌ ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಒಂಬತ್ತು ಜನರು ಗಾಯಗೊಂಡಿದ್ದರು. ಘಟನೆ ಬೆಂಗಳೂರು ನಗರವನ್ನು ಬೆಚ್ಚಿ ಬೀಳಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ ಅಧಿಕಾರಿಗಳು ಹಲವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದು, ಮಾಹಿತಿಯನ್ನು ಕಲೆಹಾಕಿದೆ. ಅಲ್ಲದೇ ಓರ್ವನನ್ನು ಬಂಧಿಸಿದೆ. ಆದ್ರೆ, ಘಟನೆ ನಡೆದು ತಿಂಗಳು ಕಳೆದರೂ ಸಹ ಬಾಂಬರ್​ನ ಸುಳಿವು ಮಾತ್ರ ಇನ್ನೂ ಸಿಕ್ಕಿಲ್ಲ.

ಶುರುವಾಯ್ತು ಆರೋಪ-ಪ್ರತ್ಯಾರೋಪ

ತೀರ್ಥಹಳ್ಳಿ ಬಿಜೆಪಿ ಮುಖಂಡನನ್ನು ಎನ್​ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಳ್ಳುತ್ತಿದ್ದಂತೆಯೇ ಇತ್ತ ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್​ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದೆ. ಈ ಬಗ್ಗೆ ಸಚಿವ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದು, ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಮುಖಂಡ ಸಾಯಿಪ್ರಸಾದ್‌ನನ್ನು ರಾಷ್ಟ್ರೀಯ ತನಿಖಾ ದಳದವರು ವಶಕ್ಕೆ ಪಡೆದಿದ್ದಾರೆ. ಸ್ಫೋಟಕ್ಕೆ ನಮ್ಮ ಸರ್ಕಾರವೇ ಕಾರಣ ಅನ್ನೋವಂತೆ ಮಾತಾನಾಡುತ್ತಿದ್ದ ರಾಜ್ಯದ ಕೇಸರಿ ಕಲಿಗಳು ಈಗ ಏನು ಹೇಳುತ್ತಾರೆ? ಬಿಜೆಪಿ ಮುಖಂಡನನ್ನು NIA ವಶಕ್ಕೆ ಪಡೆದಿದೆ ಎಂದ ಮೇಲೆ ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಬಿಜೆಪಿ ಕೈವಾಡ ಇದೆ ಎಂದು ಅರ್ಥಅಲ್ಲವೇ? ಧರ್ಮ ರಕ್ಷಣೆ ಹೆಸರಲ್ಲಿ ರಾಜ್ಯದಲ್ಲಿ ಬಿಜೆಪಿ ನಡೆಸುತ್ತೀರೋ ಕೇಸರಿ ಭಯೋತ್ಪಾದನೆ ಎಷ್ಟು ಗಂಭೀರ ಸಮಸ್ಯೆಗಳನ್ನು ಹುಟ್ಟು ಹಾಕುತ್ತಿದೆ ಅನ್ನೋದಕ್ಕೆ ಇದಕ್ಕಿಂತಾ ಸಾಕ್ಷಿ ಬೇಕಾ? ಆರ್‌ಎಸ್‌ಎಸ್‌ ಸಿದ್ಧಾಂತಗಳನ್ನು ದೇಶದ ಮೇಲೆ ಹೇರುತ್ತಿರುವ ಕೇಂದ್ರ ಬಿಜೆಪಿಯು ಇದಕ್ಕೇನು ಹೇಳುತ್ತದೆ? ಎಂದು ಪ್ರಶ್ನಿಸಿದ್ದಾರೆ.

ಅಲ್ಲದೇ ರಾಷ್ಟ್ರದ ಭದ್ರತೆ ವಿಚಾರವನ್ನೂ ಲೆಕ್ಕಿಸದೇ ರಾಮೇಶ್ವರಂ ಬಾಂಬ್‌ ಸ್ಫೋಟ ಪ್ರಕರಣವನ್ನು ಕಾಂಗ್ರೆಸ್‌ ಸರ್ಕಾರದ ಮೇಲೆ ಹೊರೆಸಿದ ರಾಜ್ಯ ಬಿಜೆಪಿ ನಾಯಕರು ಈಗ ಉತ್ತರ ನೀಡಲೇಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:09 pm, Fri, 5 April 24