ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿವಮೊಗ್ಗದಲ್ಲಿ ಭುಗಿಲೆದ್ದ ಆಕ್ರೋಶ: ಈಸೂರಿನಿಂದ ಬೃಹತ್ ಪಾದಯಾತ್ರೆ
ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿವಮೊಗ್ಗ ಜಿಲ್ಲೆಯಲ್ಲಿ ಆಕ್ರೋಶ ಭುಗಿಲೆದ್ದಿದೆ. ಸಾವಿರಾರು ರೈತರು ಬೃಹತ್ ಪಾದಯಾತ್ರೆ ನಡೆಸಿದರು. ರೈತರ ಈ ಬೃಹತ್ ಪಾದಯಾತ್ರೆಯಲ್ಲಿ ಸಚಿವ ಮಧು ಬಂಗಾರಪ್ಪ ಭಾಗವಹಿಸಿ, ವರದಿ ಜಾರಿಗೊಳಿಸದಂತೆ ಒತ್ತಾಯಿಸಿದರು.

ಶಿವಮೊಗ್ಗ, ಸೆಪ್ಟೆಂಬರ್ 11: ಬರಗಾಲದ ಜೊತೆಗೆ ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚಿಸಲು ಸೆ.21ರಿಂದ 3 ದಿನದ ವಿಶೇಷ ಅಧಿವೇಶನ ನಡೆಯಲಿದೆ. ಈ ಮೂರು ದಿನದ ವಿಶೇಷ ಅಧಿವೇಶನದಲ್ಲಿ ಕಸ್ತೂರಿ ರಂಗನ್ ವರದಿಯ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಯಲಿದೆ. ಈ ಮಧ್ಯೆ ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ ವ್ಯಕ್ತಪಡಿಸಿ ಮಲೆನಾಡಿನಲ್ಲಿ ಆಕ್ರೋಶ ಭುಗಿಲೆದ್ದಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದಿಂದ ಶಿಕಾರಿಪುರದವರೆಗೆ ಬೃಹತ್ ಪಾದಯಾತ್ರೆ ನಡೆಯಿತು.
ಕಸ್ತೂರಿ ರಂಗನ್ ವರದಿ ಜಾರಿಯಾದರೆ ಮಲೆನಾಡಿಗರ ಜೀವನೋಪಾಯಕ್ಕೆ ಕಂಟಕ
ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಸ್ವಾತಂತ್ರ್ಯ ಹೋರಾಟದ ವೀರಭೂಮಿ ಈಸೂರು ಗ್ರಾಮದಿಂದ ಶಿಕಾರಿಪುರದವರೆಗೆ ಬೃಹತ್ ಪಾದಯಾತ್ರೆ ನಡೆಯಿತು. ಈ ಪಾದಯಾತ್ರೆಯಲ್ಲಿ ಸಾವಿರಾರು ರೈತರು, ಗ್ರಾಮಸ್ಥರು ಹಾಗೂ ಮುಖಂಡರು ಭಾಗವಹಿಸಿ ಆಕ್ರೋಶ ಹೊರಹಾಕಿದರು. ವರದಿ ಜಾರಿಯಾದರೆ ಮಲೆನಾಡಿಗರ ಜೀವನೋಪಾಯಕ್ಕೆ ಕಂಟಕವಾಗಲಿದ್ದು, ಈ ಭಾಗದ ಜನರಿಗೆ ಹಾಗೂ ರೈತರಿಗೆ ತೀವ್ರ ಅನ್ಯಾಯವಾಗಲಿದೆ ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು.
ಹೋರಾಟಕ್ಕೆ ಧುಮುಕಿದ ಸಚಿವ ಮಧು ಬಂಗಾರಪ್ಪ
ಇನ್ನು ಈಸೂರಿನಿಂದ ಆರಂಭವಾದ ಪಾದಯಾತ್ರೆಯಲ್ಲಿ ಸಚಿವ ಮಧು ಬಂಗಾರಪ್ಪ ಹೆಜ್ಜೆ ಹಾಕುವ ಮೂಲಕ ಪ್ರತಿಭಟನೆಗೆ ಬೆಂಬಲ ಸೂಚಿಸಿದರು. ‘ಯಾವುದೇ ಕಾರಣಕ್ಕೂ ಕಸ್ತೂರಿ ರಂಗನ್ ವರದಿಯನ್ನು ಜಾರಿಗೊಳಿಸಬಾರದು’ ಎಂದು ಒತ್ತಾಯಿಸಿದ ಅವರು, ‘ಮಲೆನಾಡಿನ ಜನರ ಹಿತಕಾಪಾಡಲು ಸರ್ಕಾರದ ಮಟ್ಟದಲ್ಲಿ ಸಂಪೂರ್ಣ ಹೋರಾಟ ನಡೆಸುವುದಾಗಿ ರೈತರಿಗೆ ಹಾಗೂ ಗ್ರಾಮಸ್ಥರಿಗೆ ಅಭಯ’ ನೀಡಿದರು.
ಕಸ್ತೂರಿ ರಂಗನ್ ವರದಿ ಸಂಬಂಧ ರೈತರನ್ನು ಭೇಟಿ ಮಾಡುವೆ ಎಂದ ಸಿಎಂ
ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಕುರಿತಾಗಿ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ‘ದಕ್ಷಿಣ ಕನ್ನಡ ಜಿಲ್ಲಾ ಭೇಟಿಯ ನಂತರ ಮೂರ್ನಾಲ್ಕು ಜಿಲ್ಲೆಗಳಿಗೆ ಭೇಟಿ ನೀಡುವೆ. ಅಲ್ಲಿ ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ರೈತರನ್ನು ಖುದ್ದು ಭೇಟಿ ಮಾಡಿ ಸಮಸ್ಯೆ ಆಲಿಸುವುದಾಗಿ’ ಹೇಳಿದರು.
ಇದನ್ನೂ ಓದಿ: ಕಸ್ತೂರಿ ರಂಗನ್ ವರದಿ ವಿರುದ್ಧ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ, ಇದಕ್ಕಾಗಿಯೇ 1 ದಿನ ವಿಶೇಷ ಅಧಿವೇಶನ
ಇನ್ನು ‘ರಾಜ್ಯದ ಬರ ಪರಿಸ್ಥಿತಿ, ರೈತರ ಸಂಕಷ್ಟಗಳು ಹಾಗೂ ಕಸ್ತೂರಿ ರಂಗನ್ ವರದಿಯ ಕುರಿತಾಗಿ ಚರ್ಚಿಸಲೆಂದೇ ಸೆಪ್ಟೆಂಬರ್ 21 ರಿಂದ ಮೂರು ದಿನಗಳ ವಿಶೇಷ ಅಧಿವೇಶನ ನಡೆಸಲಾಗುವುದು’ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



