
ಶಿವಮೊಗ್ಗ, ಮಾರ್ಚ್ 2: ಶಿವಮೊಗ್ಗ (Shivamogga) ಜಿಲ್ಲೆಯ ಶಿಕಾರಿಪುರ ಪಟ್ಟಣದಲ್ಲಿ ರಂಜಾನ್ (Ramzan) ಹಬ್ಬದ ದೇಣಿಗೆ ಸಂಗ್ರಹ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ಉಂಟಾಗಿ, ಕಲ್ಲು ತೂರಾಟ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎರಡೂ ಕಡೆಯ ಒಟ್ಟು 10 ಜನರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ರಂಜಾನ್ ಹಬ್ಬದ ಹಿನ್ನೆಲೆ ಪಟ್ಟಣದ ಮಸೀದಿಯಲ್ಲಿ ಮುಖಂಡರು ಭಾನುವಾರ ಸಭೆ ನಡೆಸಿದ್ದರು. ಈ ವೇಳೆ ಪ್ರತಿ ಕುಟುಂಬದಿಂದ ತಲಾ 1,000 ರೂಪಾಯಿ ದೇಣಿಗೆ ಸಂಗ್ರಹಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಆದರೆ ಸಭೆಯಲ್ಲಿದ್ದ ಮತ್ತೊಂದು ಗುಂಪು ಈ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಇದರಿಂದಾಗಿ ಮಾತಿಗೆ ಮಾತು ಬೆಳೆದಿದೆ. ಮಾತಿನ ಚಕಮಕಿ ಕೆಲವೇ ಕ್ಷಣಗಳಲ್ಲಿ ತೀವ್ರಗೊಂಡು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ನಂತರ ಗಲಾಟೆ ವಿಕೋಪಕ್ಕೆ ತಿರುಗಿ, ಶಿಕಾರಿಪುರ–ಶಿರಾಳಕೊಪ್ಪ ಮುಖ್ಯರಸ್ತೆಯಲ್ಲೇ ಎರಡೂ ಗುಂಪುಗಳು ಪರಸ್ಪರ ಕಲ್ಲು ತೂರಾಟ ಮಾಡಿದ್ದಲ್ಲದೆ, ಬಡಿಗೆಗಳಿಂದ ಹೊಡೆದಾಡಿಕೊಂಡಿವೆ.
ಗಗ್ರಿ ಪ್ರದೇಶದಲ್ಲಿ ನಡೆದ ಈ ಘಟನೆಯ ವೇಳೆ ರಸ್ತೆಯುದ್ದಕ್ಕೂ ಕಲ್ಲುಗಳು ಬಿದ್ದಿದ್ದರಿಂದ ವಾಹನ ಸವಾರರು ಆತಂಕಕ್ಕೀಡಾದರು. ಪರಿಣಾಮವಾಗಿ ಕೆಲಕಾಲ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಮಾಹಿತಿ ತಿಳಿದ ತಕ್ಷಣ ಶಿಕಾರಿಪುರ ಪಟ್ಟಣ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ, ಲಾಠಿ ಚಾರ್ಜ್ ನಡೆಸಿ ಗುಂಪನ್ನು ಚದುರಿಸಿದರು. ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.
ಇದನ್ನೂ ಓದಿ: ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ ಸಿದ್ದರಾಮಯ್ಯ
ಸಾರ್ವಜನಿಕ ಶಾಂತಿಗೆ ಭಂಗ ತಂದ ಆರೋಪದಡಿ 10 ಮಂದಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇಬ್ಬರೂ ಗುಂಪುಗಳ ನಡುವೆ ಪರಸ್ಪರ ದೂರು ಹಾಗೂ ಪ್ರತಿದೂರು ದಾಖಲಾಗಿವೆ. ಹಿಂಸಾಚಾರ ತಪ್ಪಿಸಲು ಪಟ್ಟಣದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.