ಬೆಂಗಳೂರು, ಜುಲೈ 12: ಕರ್ನಾಟಕದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 16 ಸಾವಿರ ವೈದ್ಯಕೀಯ ಸಿಬ್ಬಂದಿ ಕೊರತೆ ಸಂಬಂಧ ಹೈಕೋರ್ಟ್ (High court) ವಿಭಾಗೀಯ ಪೀಠಕ್ಕೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ (PIL) ಅರ್ಜಿ ವಿಚಾರಣೆ ಮಾಡಲಾಗಿದೆ. ಜು.26ರೊಳಗೆ ಪ್ರತಿಕ್ರಿಯೆ ಸಲ್ಲಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ರಾಜ್ಯದಲ್ಲಿ ಡೆಂಗ್ಯೂಯಿಂದ ಜನರಿಗೆ ಸಮಸ್ಯೆಯಾಗುತ್ತಿದೆ. ಕೇಂದ್ರ ಸರ್ಕಾರದ ಹಣಕಾಸಿನ ನೆರವನ್ನು ರಾಜ್ಯ ಬಳಸಿಲ್ಲ. ವೈದ್ಯರ ಕಡ್ಡಾಯ ಗ್ರಾಮೀಣ ಸೇವೆಯನ್ನೂ ಸ್ಥಗಿತಗೊಳಿಸಿದೆ. ಹೀಗಾಗಿ ನಗರ, ಹಳ್ಳಿಗಳಲ್ಲಿ ಸಮಸ್ಯೆಯಾಗಿದೆ ಎಂದು ಹೈಕೋರ್ಟ್ಗೆ ಅಮೈಕಸ್ ಕ್ಯೂರಿ ಶ್ರೀಧರ ಪ್ರಭು ಮಾಹಿತಿ ನೀಡಿದ್ದಾರೆ.
ಇದೇ ವಿಚಾರವಾಗಿ ಇತ್ತೀಚೆಗೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿತ್ತು. ಅಷ್ಟೇ ಅಲ್ಲದೇ ಸ್ವಯಂ ಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿಕೊಂಡಿತ್ತು. ಅಲ್ಲದೇ ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಕೂಡ ಜಾರಿ ಮಾಡಿತ್ತು.
ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ (ಎಫ್ಐಸಿಸಿಐ) ನಡೆಸಿದ ಅಧ್ಯಯನದ ಆಧಾರದ ಮೇಲೆ ಪತ್ರಿಕೆಯ ವರದಿಯನ್ನು ಹೈಕೋರ್ಟ್ ಗಮನಕ್ಕೆ ತರಲಾಗಿದ್ದು, ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಸಲ್ಲಿಸುವಂತೆ ರಿಜಿಸ್ಟ್ರಾರ್ ಜನರಲ್ಗೆ ನಿರ್ದೇಶನ ನೀಡಿತು. ಬಳಿಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರ ಪೀಠವು ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಿತು.
ಇದನ್ನೂ ಓದಿ: ಗದಗ: ಅನೈತಿಕ ಚಟುವಟಿಕೆಗಳ ತಾಣವಾದ ನರೇಗಲ್ ಹೈಟೆಕ್ ಆಸ್ಪತ್ರೆ ತುಂಬೆಲ್ಲಾ ಕಾಂಡೋಮ್ ರಾಶಿ
ಕರ್ನಾಟಕದಲ್ಲಿ ಆರೋಗ್ಯ ಸೇವೆಗಳು ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ ತೀವ್ರ ಸಂಕಷ್ಟದಲ್ಲಿವೆ. ಸಾಂಕ್ರಾಮಿಕ ರೋಗಗಳ ಹೆಚ್ಚಳವಾಗುತ್ತಿದ್ದು, ಕಡಿಮೆ ಸಿಬ್ಬಂದಿಗಳಿಂದ ಹೆಚ್ಚಿನ ರೋಗಿಗಳನ್ನು ನಿಭಾಯಿಸಲು ಕಷ್ಟಸಾಧ್ಯವಾಗಿದೆ. ಇದರಿಂದ ರಾಜ್ಯ ಆರೋಗ್ಯ ಸೇವೆಗಳು ಕುಸಿಯುತ್ತವೆ ಎಂದು ಪಿಐಎಲ್ ಇಲ್ಲಿ ಉಲ್ಲೇಖಿಸಲಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.