ಸರ್ಕಾರಿ ಶಾಲೆಗಳಲ್ಲಿ 50 ಸಾವಿರಕ್ಕೂ ಹೆಚ್ಚು ಶಿಕ್ಷಕರ ಕೊರತೆ: ಬೀಗ ಹಾಕಲು ಮುಂದಾದ ಸರ್ಕಾರದ ವಿರುದ್ಧ ಆಕ್ರೋಶ

ಸರ್ಕಾರಿ ಶಾಲೆಗಳು ಎಂದರೆ ಮುಗೂ ಮುರಿಯುವವರೇ ಹೆಚ್ಚು. ಪೋಷಕರು ಕೂಡಾ ಸರ್ಕಾರಿ ಶಾಲೆಗಳೂ ಯಾವುವೂ ನೆಟ್ಟಗಿಲ್ಲ ಎಂದು ಖಾಸಗಿ ಶಾಲೆಗಳ ಕಡೆ ಮುಖ ಮಾಡುತ್ತಿದ್ದಾರೆ. ಆದರೆ, ಇಂತಹ ಸಮಯದಲ್ಲಿಯೇ ಶಿಕ್ಷಣ ಇಲಾಖೆ ಎಡವಟ್ಟು ನಿರ್ಧಾರಕ್ಕೆ ಮುಂದಾಗಿದ್ದು ವಿದ್ಯಾರ್ಥಿ ಸಂಘಟನೆಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ 50 ಸಾವಿರಕ್ಕೂ ಹೆಚ್ಚು ಶಿಕ್ಷಕರ ಕೊರತೆ: ಬೀಗ ಹಾಕಲು ಮುಂದಾದ ಸರ್ಕಾರದ ವಿರುದ್ಧ ಆಕ್ರೋಶ
ವಿಲೀನದ ಹೆಸರಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವುದರ ವಿರುದ್ಧ ಎಐಡಿಎಸ್​ಒ ಪ್ರತಿಭಟನೆ
Follow us
Vinay Kashappanavar
| Updated By: Ganapathi Sharma

Updated on: Feb 05, 2025 | 8:02 AM

ಬೆಂಗಳೂರು, ಫೆಬ್ರವರಿ 5: ಕರ್ನಾಟಕದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಬರೊಬ್ಬರಿ 50 ಸಾವಿರಕ್ಕೂ ಹೆಚ್ಚು ಶಿಕ್ಷಕರ ಕೊರತೆ ಇದೆ. ಈ ಶಿಕ್ಷಕರ ಕೊರತೆ ಸರಿಪಡಿಸಲು ಶಿಕ್ಷಣ ಇಲಾಖೆ ಎಡವಟ್ಟು ಚಿತಂನೆಗೆ ಮುಂದಾಗಿರುವ ಅನುಮಾನ ವ್ಯಕ್ತವಾಗಿದೆ. ಶಿಕ್ಷಕರ ನೇಮಕ ಮಾಡಿಕೊಳ್ಳುವ ಬದಲಿಗೆ ಕಡಿಮೆ ಹಾಜರಾತಿ ನೆಪದಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ಮುಂದಾಗಿದೆ ಎಂಬ ಆರೋಪ ಕೇಳಿಬಂದಿದೆ.

ಕಾಂಗ್ರೆಸ್‌ ಸರ್ಕಾರ ‘ಹಬ್ ಅಂಡ್ ಸ್ಪೋಕ್’ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿದೆ. ಸಂಯೋಜನೆ ಹೆಸರಿನಲ್ಲಿ ರಾಜ್ಯದ 4200 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿದೆ ಎಂದು ವಿದ್ಯಾರ್ಥಿ ಸಂಘಟನೆಗಳು ಆರೋಪಿಸಿದ್ದು, ಪ್ರತಿಭಟನೆ ಮೂಲಕ ಆಕ್ರೋಶ ವ್ಯಕ್ತಪಡಿಸಿವೆ.

ಪ್ರತಿಭಟನೆಗೆ ಮುಂದಾದ ವಿದ್ಯಾರ್ಥಿ ಸಂಘಟನೆಗಳು

ಈ ಹಿಂದೆ ಬಿಜೆಪಿ ರಾಜ್ಯ ಸರ್ಕಾರ ಕೂಡ ಇದೇ ನೆಪವೊಡ್ಡಿ NEP-2020ರ ಅಡಿಯಲ್ಲಿ 13,800 ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿತ್ತು. ಆಗ ವ್ಯಾಪಕ ಆಕ್ರೋಶ ವ್ಯಕ್ತವಾದ ನಂತರ ಯೋಜನೆ ಕೈಬಿಟ್ಟಿತ್ತು. ಆದರೆ ಈಗ ಮತ್ತೆ ಸರ್ಕಾರಿ ಶಾಲೆಗ ವಿಲೀನಕ್ಕೆ ಮುಂದಾಗಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಎಐಡಿಎಸ್​ಒ ರಾಜ್ಯ ಸಮಿತಿ ಹಾಗೂ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿರುವುದಾಗಿ ಎಐಡಿಎಸ್​ಒ ಅಧ್ಯಕ್ಷರಾದ ಅಭಯಾ ದಿವಾಕರ್ ತಿಳಿಸಿದ್ದಾರೆ.

ಕಡಿಮೆ ಹಾಜರಾತಿ ಇರುವ ಶಾಲೆಗಳನ್ನು ಇತರ ಶಾಲೆಗಳೊಂದಿಗೆ ಸಂಯೋಜನೆಗೊಳಿಸುವ ಹುನ್ನಾರಕ್ಕೆ ಮುಂದಾಗಿರುವುದಕ್ಕೆ ಪೋಷಕರ ವಲಯದಲ್ಲಿ ವಿರೋಧ ಕೇಳಿ ಬಂದಿದೆ. ಇತ್ತೀಚೆಗೆ ಸರ್ಕಾರ ತಾಲೂಕು ಮಟ್ಟದಲ್ಲಿ ಸುಧಾರಣ ಸಮಿತಿ ರಚನೆಗೆ ಒಂದು ಸುತ್ತೋಲೆ ನೀಡಿದ್ದು ಆ ಸುತ್ತೋಲೆಯಲ್ಲಿ ‘ಹಬ್ ಆ್ಯಂಡ್ ಸ್ಪಕ್’ ಮಾಡೆಲ್ ಮೂಲಕ ಕಡಿಮೆ ಹಾಜರಾತಿ ಶಾಲೆಗಳ ಗುರುತಿಸಿ ಸಂಯೋಜನೆ ಬಗ್ಗೆ ಸೂಚನೆ ನೀಡಿದೆ.

ಶಾಲೆಗಳ ವಿಲೀನ ಹೇಗೆ?

10 ಕ್ಕಿಂತ ಕಡಿಮೆ ಮಕ್ಕಳಿರುವ ಶಾಲೆಯನ್ನು ಹಾಗೂ ಆ ಶಾಲೆಯ ಮಕ್ಕಳನ್ನು ಹೆಚ್ಚಿರುವ ಶಾಲೆಯ ಜೊತೆ ವಿಲೀನಗೊಳಿಸಲಾಗುತ್ತದೆ. ರಾಜ್ಯದಲ್ಲಿ ಸದ್ಯ 4 ಸಾವಿರಕ್ಕೂ ಹೆಚ್ಚು ಶಾಲೆಗಳಲ್ಲಿ ಕಡಿಮೆ ಹಾಜರಾತಿ ಇದೆ. ಈ ನೆಪದಡಿ ಸಂಯೋಜನೆ ಮಾಡಿ ಮುಚ್ಚುವ ಪ್ರಯತ್ನಕ್ಕೆ ಮುಂದಾಗಿರುವುದಕ್ಕೆ ವಿರೋಧ ಕೇಳಿ ಬರ್ತಿದೆ.

ಬಡವರ ಮಕ್ಕಳ ಶಿಕ್ಷಣ ಹಕ್ಕು ಕಿತ್ತುಕೊಳ್ಳುವ ಹುನ್ನಾರ

ಬಡವರ ಮಕ್ಕಳಿಂದ ಶಾಶ್ವತವಾಗಿ ಶಿಕ್ಷಣವನ್ನು ಕಿತ್ತುಕೊಳ್ಳುವ ಹುನ್ನಾರ ಇದಾಗಿದೆ. ಹಾಜರಾತಿ ಕಡಿಮೆಯಿರುವ ಶಾಲೆಗಳನ್ನು ಮುಚ್ಚುವುದು, ನೆಗಡಿ ಬಂದರೆ ಮೂಗು ಕತ್ತರಿಸಿದಂತೆ. ಸರ್ಕಾರವು ತನ್ನ ಈ ಅವೈಜ್ಞಾನಿಕ ಮತ್ತು ಅಪ್ರಜಾತಾಂತ್ರಿಕ ಜನವಿರೋಧಿ ನಿರ್ಧಾರವನ್ನು ಕೈಬಿಡುವಂತೆ ಹಾಗೂ ಕೂಡಲೇ ಹಾಜರಾತಿ ಕಡಿಮೆಯಿರುವ ಶಾಲೆಗಳನ್ನು ಅವಶ್ಯಕ ಸೌಲಭ್ಯಗಳನ್ನು ನೀಡಿ ರಕ್ಷಿಸವಂತೆ ವಿದ್ಯಾರ್ಥಿ ಸಂಘಟನೆಗಳು ಆಗ್ರಹಿಸಿವೆ.

ಇದನ್ನೂ ಓದಿ: ವಿದ್ಯಾರ್ಥಿಗಳೇ ಪರೀಕ್ಷಾ ತಯಾರಿ ಹೇಗಿರಬೇಕು? ಹೆಚ್ಚು ಅಂಕಗಳಿಸಲು ಇಲ್ಲಿದೆ ಸಿಂಪಲ್ ಟಿಪ್ಸ್

ಒಟ್ಟಿನಲ್ಲಿ ಸರ್ಕಾರಿ ಶಾಲೆ ಹಾಗೂ ಕಾಲೇಜುಗಳಲ್ಲಿ ಶೇ 90 ರಷ್ಟು ಬಡ ಮಕ್ಕಳು ಓದುತ್ತಿದ್ದಾರೆ. ಹೀಗಾಗಿ ಸರ್ಕಾರ ಮೊದಲು ಸರ್ಕಾರಿ ಶಾಲೆಗಳತ್ತ ಹೆಚ್ಚು ಗಮನಹರಿಸಬೇಕಿದೆ. ಈ ಸಂಯೋಜನೆ ಪ್ರಕ್ರಿಯೆ ಬಿಟ್ಟು, ಮಕ್ಕಳ ಭವಿಷ್ಯಕ್ಕಾಗಿ ಶಿಕ್ಷಕರ ನೇಮಕಾತಿ ಮಾಡಬೇಕಿದೆ. ಜೊತೆಗೆ ಸರ್ಕಾರಿ ಶಾಲಾ ಕಾಲೇಜುಗಳನ್ನು ಅಭಿವೃದ್ಧಿ ಮಾಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ