ಬ್ರೇಕ್​ಫಾಸ್ಟ್ ಮೀಟಿಂಗ್ ಬೆನ್ನಲ್ಲೇ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಜಂಟಿ ಸುದ್ದಿಗೋಷ್ಠಿ: ಏನೇನಂದ್ರು? ಇಲ್ಲಿದೆ ಮಾಹಿತಿ

Siddaramaiah and DK Shivakumar joint pressmeet; ಡಿಸಿಎಂ ಡಿಕೆ ಶಿವಕುಮಾರ್ ಅವರ ಸದಾಶಿವನಗರಕ್ಕೆ ತೆರಳಿ ಇಡ್ಲಿ, ನಾಟಿ ಕೋಳಿ ಸಾರು ಸವಿದ ಸಿಎಂ ಸಿದ್ದರಾಮಯ್ಯ, ಜತೆ ಜತೆಗೆ ಮಾತುಕತೆಯನ್ನೂ ನಡೆಸಿದ್ದಾರೆ. ನಂತರ ಉಭಯ ನಾಯಕರು ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಸಿಎಂ ಹಾಗೂ ಡಿಸಿಎಂ ಹೇಳಿದ್ದೇನು? ಇಲ್ಲಿದೆ ಮಾಹಿತಿ.

ಬ್ರೇಕ್​ಫಾಸ್ಟ್ ಮೀಟಿಂಗ್ ಬೆನ್ನಲ್ಲೇ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಜಂಟಿ ಸುದ್ದಿಗೋಷ್ಠಿ: ಏನೇನಂದ್ರು? ಇಲ್ಲಿದೆ ಮಾಹಿತಿ
ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಜಂಟಿ ಪತ್ರಿಕಾಗೋಷ್ಠಿ

Updated on: Dec 02, 2025 | 11:45 AM

ಬೆಂಗಳೂರು, ಡಿಸೆಂಬರ್ 2: ಕರ್ನಾಟಕ ಕಾಂಗ್ರೆಸ್​ (Congress) ಅಧಿಕಾರ ಹಂಚಿಕೆ ಬಿಕ್ಕಟ್ಟಿಗೆ ತೇಪೆ ಹಚ್ಚುವ ನಿಟ್ಟಿನಲ್ಲಿ ಹೈಕಮಾಂಡ್ ಸೂಚನೆಯಂತೆ ಶನಿವಾರ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಜತೆಗೆ ‘ಬ್ರೇಕ್​ಫಾಸ್ಟ್ ಮೀಟಿಂಗ್’ ನಡೆದಿತ್ತು. ನಂತರ ಉಭಯ ನಾಯಕರೂ ಒಗ್ಗಟ್ಟು ಪ್ರದರ್ಶಿಸಿದ್ದರು. ಆ ಬಳಿಕ ಸಿದ್ದರಾಮಯ್ಯ ಅವರನ್ನು ಉಪಾಹಾರಕ್ಕೆ ಮನೆಗೆ ಬರುವಂತೆ ಡಿಕೆ ಶಿವಕುಮಾರ್ ಆಹ್ವಾನಿಸಿದ್ದರು. ಅದರಂತೆ ಇಂದು (ಡಿಸೆಂಬರ್ 2) ಡಿಕೆ ಶಿವಕುಮಾರ್ ಅವರ ಸದಾಶಿವ ನಗರ ನಿವಾಸದಲ್ಲಿ ಉಭಯ ನಾಯಕರು ‘ಬ್ರೇಕ್​ಫಾಸ್ಟ್ ಮೀಟಿಂಗ್’ ಮಾಡಿದ್ದಾರೆ. ಡಿಕೆಶಿ ನಿವಾಸದಲ್ಲಿ ಸಿದ್ದರಾಮಯ್ಯ ನಾಟಿ ಕೋಳಿ ಸಾರು, ಇಡ್ಲಿ ಸವಿದಿದ್ದಾರೆ. ಬಳಿಕ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು.

ನಮ್ಮ ಮನೆಗೆ ಶನಿವಾರ ಉಪಾಹಾರಕ್ಕೆ ಬಂದಿದ್ದಾಗ ಡಿಕೆ ಶಿವಕುಮಾರ್ ಮಂಗಳವಾರ ಉಪಾಹಾರಕ್ಕೆ ಬನ್ನಿ ಎಂದು ಆಹ್ವಾನ ನೀಡಿದ್ದರು. ಅದರಂತೆ ಬಂದಿದ್ದೇನೆ. ಡಿಸೆಂಬರ್ 8ರಿಂದ ಬೆಳಗಾವಿ ಅಧಿವೇಶನ ಆರಂಭ ಆಗುತ್ತದೆ. ಅಧಿವೇಶನ ಹಿನ್ನೆಲೆ ನಾವು ಚರ್ಚೆ ಮಾಡಿದ್ದೇವೆ. ವಿಪಕ್ಷಗಳು ಯಾವುದೇ ವಿಚಾರ ಪ್ರಸ್ತಾಪಿಸಿದರೂ ಎದುರಿಸುತ್ತೇವೆ. ಪ್ರತಿಪಕ್ಷಗಳು ಅವಿಶ್ವಾಸ ನಿಲುವಳಿ ಮಂಡಿಸಲು ಮುಂದಾಗಿವೆ ಎಂದು ಮಾಧ್ಯಮಗಳಲ್ಲಿ ನೋಡಿದ್ದೇನೆ. ಅದನ್ನು ಸಮರ್ಥವಾಗಿ ಎದುರಿಸುತ್ತೇವೆ. ಆ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ಸಿಎಂ ತಿಳಿಸಿದರು.

ನಮ್ಮ ಸರ್ಕಾರ ಯಾವಾಗಲೂ ರೈತರ ಪರ ಇರುತ್ತದೆ. ರಾಜ್ಯದ ಸಮಸ್ಯೆ ಬಗ್ಗೆಯೂ ನಾನು, ಡಿಸಿಎಂ ಚರ್ಚೆ ಮಾಡಿದ್ದೇವೆ. ಕಬ್ಬಿಗೆ ಬೆಲೆ ನಿಗದಿ ವಿಚಾರವಾಗಿ ಕಾರ್ಖಾನೆ ಮಾಲೀಕರ ಜತೆ, ಬೆಳೆಗಾರರ ಜತೆಗೂ ಚರ್ಚೆ ಮಾಡಿದ್ದೆ ಎಂದು ಸಿದ್ದರಾಮಯ್ಯ ಹೇಳಿದರು.

ಮೆಕ್ಕೆಜೋಳ ರೈತರ ಸಮಸ್ಯೆ ಬಗ್ಗೆಯೂ ‘ಬ್ರೇಕ್​ಫಾಸ್ಟ್ ಮೀಟಿಂಗ್’ನಲ್ಲಿ ಚರ್ಚಿಸಿದ್ದೇವೆ. ಮೆಕ್ಕೆಜೋಳಕ್ಕೆ ಎಂಎಸ್​ಪಿ ದರ 2,400 ರೂಪಾಯಿ ಇದೆ. ಮಾರುಕಟ್ಟೆಯಲ್ಲಿ ಬೇರೆ ಬೇರೆ ಬೆಲೆ ಇದೆ. ರೈತರಿಗೆ ಎಂಎಸ್​ಪಿ ದರ ಕೊಡುವುದಕ್ಕೆ ಒಪ್ಪಿಸಿದ್ದೇವೆ. ರೈತರಿಗೆ ಸಹಾಯ ಮಾಡೋಕೆನಿರ್ಮಾನಿಸಿದ್ದೇವೆ ಎಂದು ಸಿಎಂ ತಿಳಿಸಿದರು.

ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇವೆ: ಸಿದ್ದರಾಮಯ್ಯ ಪುನರುಚ್ಚಾರ

ಪಕ್ಷದ ಆಂತರಿಕ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಹೈಕಮಾಂಡ್​ ಹೇಳಿದಂತೆ ನಾನು, ಡಿಸಿಎಂ ನಡೆದುಕೊಳ್ಳುತ್ತೇವೆ ಎಂದು ಪುನರುಚ್ಚರಿಸಿದರು. ಹೈಕಮಾಂಡ್​ ಹೇಳಿದಂತೆ ಕೇಳಬೇಕೆಂದು ಮೊನ್ನೆಯೂ ಚರ್ಚೆ ಆಗಿತ್ತು. ಇಂದು ಕೂಡ ಚರ್ಚೆ ಮಾಡಿದ್ದೇವೆ. ನಾನು, ಡಿ.ಕೆ.ಶಿವಕುಮಾರ್​ ಸಹೋದರರೇ ಎಂದು ಸಿದ್ದರಾಮಯ್ಯ ಹೇಳಿದರು.

ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುತ್ತೇವೆ: ಸಿಎಂ

ಪಕ್ಷದ ಆಂತರಿಕ ವಿಚಾರದಲ್ಲಿ ಹಾಗೂ ಅಧಿಕಾರ ಹಂಚಿಕೆ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಹೈಕಮಾಂಡ್ ಹೇಳಿದಂತೆಯೇ ನಡೆದುಕೊಳ್ಳುತ್ತೇವೆ. ಯಾವುದೇ ಗೊಂದಲ ಇಲ್ಲ. ಹೈಕಮಾಂಡ್ ನಾಯಕರು ಕರೆದರೆ ದೆಹಲಿಗೆ ಹೋಗುತ್ತೇವೆ. ಬುಧವಾರ ಮಂಗಳೂರಿನಲ್ಲಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದೇನೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಸಹ ಅಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಇದನ್ನೂ ಓದಿ: ಗೊಂದಲ ತಿಳಿಗೊಳಿಸಲು ಕರೆದ ಪತ್ರಿಕಾಗೋಷ್ಠಿಯಲ್ಲೇ ಹಲವು ಅನುಮಾನಗಳ ಉಳಿಸಿಹೋದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್!

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:29 am, Tue, 2 December 25

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Follow Us