ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಬಗ್ಗೆ ಹೊಸ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ, ಈ ವಿಧೇಯಕ ಬೇಡ ಎಂದ ಪೈ

ಕರ್ನಾಟಕದಲ್ಲಿ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ ʼಸಿʼ ಮತ್ತು ʼಡಿʼ ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕಾತಿಯನ್ನು ಕಡ್ಡಾಯಗೊಳಿಸುವ ವಿಧೇಯಕಕ್ಕೆ (Bill) ನಿನ್ನೆ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ ಎಂದು ಟ್ವೀಟ್ ಮಾಡಿ ಬಳಿಕ ಡಿಲೀಟ್ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಹೊಸ ಟ್ವೀಟ್ ಮಾಡಿದ್ದಾರೆ. ಸಿಎಂ ಮಾಡಿದ ಹೊಸ ಟ್ವೀಟ್​ನಲ್ಲಿದೆ ಎನ್ನುವುದು ಇಲ್ಲಿದೆ.

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಬಗ್ಗೆ ಹೊಸ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ, ಈ ವಿಧೇಯಕ ಬೇಡ ಎಂದ ಪೈ
ಸಿದ್ದರಾಮಯ್ಯ
Follow us
|

Updated on: Jul 17, 2024 | 4:27 PM

ಬೆಂಗಳೂರು, (ಜುಲೈ 17): ಕರ್ನಾಟಕದ ಖಾಸಗಿ ವಲಯದಲ್ಲಿ ಕನ್ನಡಗಿರಿಗೆ ಉದ್ಯೋಗ ನೀಡುವ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಮಾಡಿದ್ದ ಟ್ವೀಟ್​ ಗೊಂದಲ ಮೂಡಿಸಿದ್ದು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹಳೇ ಟ್ವೀಟ್ ಡಿಲೀಟ್ ಮಾಡಿ ಮಾಡಿ ಹೊಸದೊಂದು ಪೋಸ್ಟ್ ಹಾಕಿದ್ದಾರೆ. ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ ಎಂದು ಸಿಎಂ ಮಾಹಿತಿ ಹಂಚಿಕೊಂಡಿದ್ದಾರೆ. ಈ ಮೂಲಕ  ಕರ್ನಾಟಕದ ಖಾಸಗಿ ಉದ್ಯಮಗಳಲ್ಲಿ ಕನ್ನಡಗರಿಗೆ ಹೆಚ್ಚಿನ ಉದ್ಯೋಗ ನೀಡುವ ಮಸೂದೆ ವಿಚಾರವಾಗಿ ಉಂಟಾಗಿದ್ದ ಗೊಂದಲಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಎಷ್ಟು ಪ್ರಮಾಣದಲ್ಲಿ ಮೀಸಲು ನೀಡಬೇಕು ಎನ್ನುವ ವಿಚಾರದಲ್ಲಿ ಗೊಂದಲವಾಗಿತ್ತು. ಸಚಿವ ಸಂತೋಷ್‌ ಲಾಡ್‌ ಅವರು ಶೇ.75 ರವರೆಗೆ ಮೀಸಲು ಎಂದು ಹೇಳಿದ್ದರೆ, ಸಿಎಂ ಸಿದ್ದರಾಮಯ್ಯ ಶೇ. 100 ರಷ್ಟು ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ನೀಡಲಾಗುವುದು ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದರು. ಇದಕ್ಕೆ ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದರು. ಗೊಂದಲ ಕೂಡ ಉಂಟಾಗಿತ್ತು. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಹಳೆ ಟ್ವೀಟ್ ಡಿಲೀಟ್ ಮಾಡಿ ಹೊಸ ಪೋಸ್ಟ್​ ಹಾಕಿಕೊಂಡಿದ್ದಾರೆ. ಈ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ.

ಇದನ್ನೂ ಓದಿ: ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಟ್ವೀಟ್​ ಡಿಲೀಟ್ ಮಾಡಿದ ಸಿಎಂ ಸಿದ್ದರಾಮಯ್ಯ, ಉದ್ಯಮಿಗಳ ವಿರೋಧಕ್ಕೆ ಮಣಿದ್ರಾ?

ಸಿದ್ದರಾಮಯ್ಯನವರ ಹೊಸ ಟ್ವೀಟ್​ನಲ್ಲೇನಿದೆ?

ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ. ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ ಎನ್ನುವುದು ಸಿದ್ದರಾಮಯ್ಯ ಅವರು ಎಕ್ಸ್‌ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಸಿಎಂ ಹಳೇ ಟ್ವೀಟ್​ನಲ್ಲೇನಿತ್ತು?

ರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ “ಸಿ ಮತ್ತು ಡಿ” ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕಾತಿಯನ್ನು ಕಡ್ಡಾಯಗೊಳಿಸುವ ವಿಧೇಯಕಕ್ಕೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ. ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ ಎಂದು ಸಿಎಂ ಟ್ವೀಟ್ ಮಾಡಿದ್ದರು.

ಗೊಂದಲ ಸೃಷ್ಟಿಸಿದ್ದ ಸಿಎಂ ಟ್ವೀಟ್

ಹೌದು… ಖಾಸಗಿ ಕೈಗಾರಿಕೆಗಳಲ್ಲಿ ಕನ್ನಡಿಗೆ ಶೇ.75 ರವರೆಗೆ ಮೀಸಲು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್, ಎಂಬಿ ಪಾಟೀಲ್​ ಹೇಳಿದ್ದರೆ, ಸಿಎಂ ಸಿದ್ದರಾಮಯ್ಯ ಶೇ. 100 ರಷ್ಟು ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ನೀಡಲಾಗುವುದು ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದರು. ಇದು ಭಾರೀ ಗೊಂದಲಕ್ಕೆ ಕಾರಣವಾಗಿತ್ತು. ಅಲ್ಲದೇ ಸಿಎಂ ಅವರ ಮೊದಲಿನ ಟ್ವೀಟ್​ಗೆ ಮೋಹನ್ ದಾಸ್​ ಪೈ ಸೇರಿದಂತೆ ಹಲವು ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದರು.

ವಿಧೇಯಕ ಹಿಂಪಡೆಯಬೇಕೆಂದ ಮೋಹನ್ ದಾಸ್​ ಪೈ

ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಚಾರವಾಗಿ ಒಂದು ಕಾಯ್ದೆ ಜಾರಿಗೆ ತರಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ. ಆದ್ರೆಮ ಇದಕ್ಕೆ ಉದ್ಯಮಿ ಮೋಹನ್​ದಾಸ್​ ಪೈ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾವುದೇ ಇಂಡಸ್ಟ್ರಿಗೂ ಈಗ ಜನರು ಬರುತ್ತಿಲ್ಲ. ಇದನ್ನು ನಮ್ಮ ರಾಜಕಾರಣಿಗಳು ಅರ್ಥ ಮಾಡಿಕೊಳ್ಳಲಿ. ನಾನು ಹುಟ್ಟಿದ್ದು, ಕೆಲಸ ಮಾಡುತ್ತಿರುವುದು ಕರ್ನಾಟಕದಲ್ಲೇ. ಸರ್ಕಾರ ಮೊದಲು ಒಳ್ಳೆಯ ಶಿಕ್ಷಣ ಕೊಡಬೇಕು. ಯಾರಿಗೆ ಶಿಕ್ಷಣ ಸಿಗುತ್ತೋ ಅವರಿಗೆ ಉದ್ಯೋಗ ಸಿಗುತ್ತೆ. ಈ ನಿರ್ಧಾರದಿಂದ ಕರ್ನಾಟಕದ ಹೆಸರು ಕೆಡಿಸುತ್ತಿದ್ದಾರೆ. ನೀವು ಯಾವ ರೀತಿಯ ತರಬೇತಿ ಕೊಡ್ತೀರಿ ಎಂದು ಸಿಎಂಗೆ ಪ್ರಶ್ನಿಸಿದ ಮೋಹನ್​ದಾಸ್​ ಪೈ, ಈ ವಿಧೇಯಕವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ