
ಬೆಂಗಳೂರು, ಆಗಸ್ಟ್ 4: ಒಂದೆಡೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಶಾಸಕರು ಹಾಗೂ ಅವರ ಬೆಂಬಲಿಗರ ಅಸಮಾಧಾನ ಸ್ಫೋಟಗೊಂಡಿರುವ ಬೆನ್ನಲ್ಲೇ, ಮತ್ತೊಂದೆಡೆ ನೂತನ ಸಚಿವರ ಪಟ್ಟಿಯ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೂ ಅಸಮಾಧಾನ ಉಂಟಾಗಿದೆ ಎಂಬ ಚರ್ಚೆ ಕಾಂಗ್ರೆಸ್ ಪಾಳಯದಲ್ಲಿ ತೀವ್ರವಾಗಿದೆ. ತಮ್ಮ ಶಿಫಾರಸುಗಳಿಗೆ ಹೈಕಮಾಂಡ್ ಸೂಕ್ತ ಮನ್ನಣೆ ನೀಡಿಲ್ಲ ಎಂಬ ಬೇಸರ ಸಿದ್ದರಾಮಯ್ಯ ಅವರಿಗೆ ಇದೆ ಎನ್ನಲಾಗುತ್ತಿದ್ದು, ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಅವರು ಗೈರಾಗಿರುವುದು ಈ ಚರ್ಚೆಗೆ ಮತ್ತಷ್ಟು ಪುಷ್ಟಿ ನೀಡಿದೆ.
ಕಾಂಗ್ರೆಸ್ನ ಆಂತರಿಕ ವಲಯದಲ್ಲಿ ಚರ್ಚೆಯಾಗುತ್ತಿರುವಂತೆ, ಸಿದ್ದರಾಮಯ್ಯ ಅಸಮಾಧಾನಕ್ಕೆ ಕಾರಣವಾಗಿರುವ ಅಂಶಗಳು ಇಲ್ಲಿವೆ;
ನೂತನ ಸಚಿವರ ಪಟ್ಟಿ ಅಂತಿಮಗೊಂಡ ಬಳಿಕ ಸಿದ್ದರಾಮಯ್ಯ ಅವರು ಬೇಸರಗೊಂಡಿದ್ದಾರೆ ಎಂಬ ಚರ್ಚೆ ಕಾಂಗ್ರೆಸ್ ಪಾಳಯದಲ್ಲಿ ನಡೆಯುತ್ತಿದೆ. ತಮ್ಮ ಶಿಫಾರಸಿಗೆ ಹೈಕಮಾಂಡ್ ಕವಡೆ ಕಾಸಿನ ಕಿಮ್ಮತ್ತು ನೀಡಿಲ್ಲ ಎಂಬ ಅಸಮಾಧಾನ ಅವರಲ್ಲಿದೆ ಎನ್ನಲಾಗಿದೆ. ಸೋಮವಾರ ಇಡೀ ದಿನ ಸಿದ್ದರಾಮಯ್ಯ ಗರಂ ಆಗಿದ್ದರು ಎನ್ನಲಾಗಿದ್ದು, ತಮ್ಮ ಭೇಟಿಗೆ ಬಂದ ನಾಯಕರ ವಿರುದ್ಧವೂ ಸಿಟ್ಟು ಹೊರಹಾಕಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.
ಇದರ ಬೆನ್ನಲ್ಲೇ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮಕ್ಕೂ ಸಿದ್ದರಾಮಯ್ಯ ಗೈರಾಗಿದ್ದರು. ಹೀಗಾಗಿ ಅವರ ಗೈರುಹಾಜರಿ ಹಲವು ರೀತಿಯ ಚರ್ಚೆಗಳಿಗೆ ಕಾರಣವಾಗಿದೆ.
ಈ ನಡುವೆ ಸಿದ್ದರಾಮಯ್ಯ ಅವರ ಅಸಮಾಧಾನದ ಕುರಿತು ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ಪುತ್ರ ರಾಜೇಂದ್ರ ಹಾಗೂ ಬ್ಯಾಡಗಿ ಶಾಸಕ ಶಿವಣ್ಣನವರ್ ಕೂಡ ಪ್ರತಿಕ್ರಿಯಿಸಿದ್ದಾರೆ. ಸಿದ್ದರಾಮಯ್ಯ ಅವರಿಗೆ ಬೇಸರವಾಗಿರುವ ಸಾಧ್ಯತೆಯ ಬಗ್ಗೆ ಇಬ್ಬರೂ ಮಾತನಾಡಿದ್ದಾರೆ. ಇದೇ ಬೆಳವಣಿಗೆಗಳ ನಡುವೆ ಮಧುಗಿರಿ ಶಾಸಕ ಕೆ.ಎನ್. ರಾಜಣ್ಣ ಅವರು ಕಾಂಗ್ರೆಸ್ ವರಿಷ್ಠರಿಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆದಿದ್ದು ಪಕ್ಷಕ್ಕೆ ದೊಡ್ಡ ಡ್ಯಾಮೇಜ್ ಆಗಬಹುದು ಎಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ನಲ್ಲಿನ ಈ ಬೆಳವಣಿಗೆಗಳನ್ನು ಬಿಜೆಪಿ ಕೂಡ ರಾಜಕೀಯವಾಗಿ ಬಳಸಿಕೊಳ್ಳಲು ಮುಂದಾಗಿದೆ. ಸಿದ್ದರಾಮಯ್ಯ ಅವರ ಸ್ವಾಭಿಮಾನವನ್ನು ಉಲ್ಲೇಖಿಸಿ ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ಪ್ರಶ್ನೆ ಎತ್ತಿದ್ದಾರೆ.
ಆದರೆ, ಸಿದ್ದರಾಮಯ್ಯ ಅವರ ಅಸಮಾಧಾನದ ಕುರಿತ ಚರ್ಚೆಯ ನಡುವೆಯೇ ಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದು, ಸಿದ್ದರಾಮಯ್ಯ ಅವರಿಗೆ ಯಾವುದೇ ಅಸಮಾಧಾನ ಇಲ್ಲ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಕೂಡ ತಮ್ಮ ತಂದೆಗೆ ಯಾವುದೇ ಬೇಸರ ಅಥವಾ ಅಸಮಾಧಾನ ಇಲ್ಲ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ‘ಸಿಎಂ ಬದಲಿಸಿದಾಗಲೆಲ್ಲ ಪಕ್ಷಕ್ಕೆ ಡ್ಯಾಮೇಜ್ ಆಗಿದೆ’: ಸಂಪುಟ ವಿಸ್ತರಣೆ ಬೆನ್ನಲ್ಲೇ ಮಾಜಿ ಸಚಿವ ಕೆಎನ್ ರಾಜಣ್ಣ ಅಚ್ಚರಿಯ ಮಾತು
ಹೀಗಾಗಿ ಹೊರಗಡೆ ಕಾಂಗ್ರೆಸ್ನಲ್ಲಿ ಒಗ್ಗಟ್ಟು ಪ್ರದರ್ಶನವಾಗುತ್ತಿದ್ದರೂ, ಪಕ್ಷದೊಳಗೆ ಆಂತರಿಕ ಬೇಗುದಿ ಇದೆಯೇ ಎಂಬ ಪ್ರಶ್ನೆ ಇದೀಗ ಮೂಡಿದೆ. ಈ ಅಸಮಾಧಾನದ ಚರ್ಚೆ ಮುಂದಿನ ದಿನಗಳಲ್ಲಿ ಯಾವ ಸ್ವರೂಪ ಪಡೆದುಕೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ