ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ: ತನಿಖೆಗೆ SIT ರಚಿಸಲು ಸಂಪುಟ ತೀರ್ಮಾನ

40% commission: ಕರ್ನಾಟಕದ ಬಿಜೆಪಿ ಸರ್ಕಾರದ ವಿರುದ್ಧದ 40% ಕಮಿಷನ್ಆ ರೋಪಗಳ ತನಿಖೆಗೆ ರಾಜ್ಯ ಸಚಿವ ಸಂಪುಟವು SIT ರಚಿಸಲು ನಿರ್ಧರಿಸಿದೆ. ನಾಗಮೋಹನ್ ದಾಸ್ ನೇತೃತ್ವದ ವಿಚಾರಣಾ ಆಯೋಗದ ವರದಿಯನ್ನು ಪರಿಶೀಲಿಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. ಎಸ್‌ಐಟಿ ಎರಡು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು. ಸಚಿವ ಸಂಪುಟ ಸಭೆಯಲ್ಲಿ ಇತರ ಅನೇಕ ವಿಷಯಗಳಿಗೂ ಅನುಮೋದನೆ ನೀಡಲಾಗಿದೆ.

ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ: ತನಿಖೆಗೆ SIT ರಚಿಸಲು ಸಂಪುಟ ತೀರ್ಮಾನ
ಹೆಚ್​ಕೆ ಪಾಟೀಲ್​
Updated By: ವಿವೇಕ ಬಿರಾದಾರ

Updated on: Apr 11, 2025 | 5:14 PM

ಬೆಂಗಳೂರು, ಏಪ್ರಿಲ್​ 11: ಬಿಜೆಪಿ ಸರ್ಕಾರದ (BJP Government) ವಿರುದ್ಧ ಕೇಳಿಬಂದಿದ್ದ 40% ಕಮಿಷನ್ ಆರೋಪಕ್ಕೆ (40% commission) ಸಂಬಂಧಿಸಿದ ತನಿಖೆಗೆ ಎಸ್​ಐಟಿ (SIT) ರಚಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ (Cabinet Meeting) ನಿರ್ಧರಿಸಲಾಗಿದೆ ಎಂದು ಕಾನೂನು ಸಚಿವ ಹೆಚ್​. ಕೆ. ಪಾಟೀಲ್ (HK Patil) ಅವರು ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗುತ್ತಿಗೆದಾರರ ಸಂಘದ ಆರೋಪ ಬಗ್ಗೆ ನಾಗಮೋಹನ್ ದಾಸ್​ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಲಾಗಿತ್ತು. ನಾಗಮೋಹನ್​ ದಾಸ್ ಅವರು ವಿಚಾರಣಾ ವರದಿ ಸಲ್ಲಿಸಿದ ಬಳಿಕ ಸಂಪುಟದಲ್ಲಿ ಮಂಡಿಸಲಾಗಿದೆ. ಕೆಲವು ವಿವರಗಳನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಯಿತು. ಇನ್ನಷ್ಟು ವಿವರವಾಗಿ ಚರ್ಚೆಯ ಅಗತ್ಯವಿದೆ ಎಂದು ಹೇಳಿದರು.

ದೂರುಗಳ ಮಾಹಿತಿ ಕಲೆ ಹಾಕಿ ವರದಿಯನ್ನು ನೀಡಲಾಗಿದೆ. 3 ಲಕ್ಷ ಕಾಮಗಾರಿಗಳ ಪೈಕಿ 1729 ಕಾಮಗಾರಿಗಳ ಬಗ್ಗೆ ಆಪಾದನೆಗಳಿವೆ. ಯೋಜನೆ, ಹಣ ಬಿಡುಗಡೆ, ಎಲ್​ಒಸಿ ಬಿಡುಗಡೆ ಸರಿಯಾದ ರೀತಿಯಲ್ಲಿ ಇಲ್ಲ. ಯಾವ ಪ್ರಮಾಣದಲ್ಲಿ ವ್ಯತ್ಯಾಸಗಳಾಗಿವೆ ಎಂಬುದನ್ನು ಚರ್ಚೆ ನಡೆಸಿದ್ದೇವೆ. ಅನುದಾನಕ್ಕಿಂತ ಹೆಚ್ಚು ಬಿಲ್ ಆಗಿದೆ, ಕಾಮಗಾರಿಗಳ ಬಗ್ಗೆ ಸಂಶಯಗಳಿವೆ. ಕೆಲವು ಕಡೆ ಟೆಂಡರ್ ಹಂಚಿಕೆ ವೇಳೆಯೇ ಮಧ್ಯವರ್ತಿಗಳ ಕೆಲಸ ಆಗಿದೆ. ಗಂಭೀರವಾದ ವರದಿಯಾದ ಹಿನ್ನೆಲೆಯಲ್ಲಿ ಎಸ್​ಐಟಿ ರಚನೆ ಮಾಡಲು ತೀರ್ಮಾನಿಸಿದ್ದೇವೆ. ಎರಡು ತಿಂಗಳಲ್ಲಿ ಕ್ರಮ ಕೈಗೊಳ್ಳಲು ಎಸ್ಐಟಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ನೈಸ್ ರಸ್ತೆ ಯೋಜನೆ ಬಗ್ಗೆ ಸಂಪುಟ ಸಭೆಯಲ್ಲಿ ವಿಷಯ ಪ್ರಸ್ತಾಪವಾಗಿದೆ. ನೈಸ್ ರಸ್ತೆ ವಿಚಾರಕ್ಕೆ ಸುಪ್ರೀಂ ಮತ್ತು ಹೈಕೋರ್ಟ್‌ನಲ್ಲಿ ವಿಚಾರಣೆ ನಡೆದಿದೆ. ನೈಸ್‌ ರಸ್ತೆ ನಿರ್ಮಾಣ ಮುಂದೆ ಆಗಬೇಕಾ?, ಬೇಡ್ವಾ ಎಂಬ ಬಗ್ಗೆ ಸಂಪೂರ್ಣವಾಗಿ ಚರ್ಚೆ ಮಾಡುವುದು ಒಂದು ಸಭೆಯಲ್ಲಿ ಸಾಧ್ಯವಿಲ್ಲ. ಕಾನೂನಾತ್ಮಕ ಅಂಶಗಳನ್ನು ಪರಿಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ. ಸಂಪುಟ ಉಪ ಸಮಿತಿ ನೇಮಕ ಮಾಡಿ ಮುಂದಿನ ತೀರ್ಮಾನ ಮಾಡುತ್ತೇವೆ. 1699 ಎಕರೆಯನ್ನು ನೈಸ್ ಸಂಸ್ಥೆಯವರು ಬೇರೆಯವರಿಗೆ ಶುದ್ಧ ಕ್ರಯ ಮಾಡಿಕೊಡಲು‌ ಮುಂದಾಗಿದ್ದಾರೆ. ಈ ಬಗ್ಗೆಯೂ ಕ್ಯಾಬಿನೆಟ್ ಸಬ್ ಕಮಿಟಿ ತೀರ್ಮಾನ ಕೈಗೊಳ್ಳುತ್ತೆ. ಕ್ಯಾಬಿನೆಟ್ ಸಬ್ ಕಮಿಟಿ ರಚನೆಯನ್ನು ಸಿಎಂ ಸಿದ್ದರಾಮಯ್ಯ ಮಾಡಲಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ
ಜಾತಿ ಗಣತಿ ವರದಿ ಅನುಷ್ಠಾನ ಶತಸಿದ್ಧ: ಸಿದ್ದರಾಮಯ್ಯ ಗ್ಯಾರಂಟಿ ಮಾತು!
ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ,ರಾಜ್ಯದ 7 ಕೋಟಿ ಕನ್ನಡಿಗರ ಸಮೀಕ್ಷೆ
ಸರ್ಕಾರ ಬಿದ್ದರೆ ಬೀಳಲಿ ಜಾತಿಗಣತಿ ಜಾರಿ ಮಾಡಲೇಬೇಕು: ಬಿಕೆ ಹರಿಪ್ರಸಾದ್
ಅಹಿಂದ ಟ್ರಂಪ್ ಕಾರ್ಡ್ ಬಳಸಿ ಮುಡಾ ಕಷ್ಟದಿಂದ ಹೊರಬರಲು ಸಿಎಂ ಪ್ರತ್ಯಸ್ತ್ರ

ಕ್ಯಾಬಿನೆಟ್​ನಲ್ಲಿ ಹಲವು ವಿಷಯಗಳಿಗೆ ಅನುಮೋದನೆ

ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರಿಗೆ 7ನೇ ಕೇಂದ್ರ ವೇತನ ಆಯೋಗದ ಶಿಫಾರಸ್ಸುಗಳನ್ನು 2019ರ ಸೆಪ್ಟೆಂಬರ್​ 9ರ ಬದಲಾಗಿ 2016ರ ಜನವರಿ 1 ರಿಂದ ಅನ್ವಯಿಸಲು ಕರ್ನಾಟಕ ಲೋಕಸೇವಾ ಆಯೋಗ (ಸೇವಾ ಷರತ್ತುಗಳು) ವಿನಿಯಮಗಳು, 19576 ತಿದ್ದುಪಡಿ ಮಾಡುವ ಬಗ್ಗೆ ಅನುಮೋದನೆ ದೊರೆತಿದೆ.

ಸರ್ಕಾರದ ವಿವಿಧ ಇಲಾಖೆಗಳಲ್ಲಿ/ ಸಕ್ಷಮ ಪ್ರಾಧಿಕಾರಗಳಲ್ಲಿ ಬಾಕಿ ಇರುವ ಲೋಕಾಯುಕ್ತ ಅಭಿಯೋಜನಾ ಮಂಜೂರಾತಿ ಪ್ರಕರಣಗಳ ಬಗ್ಗೆ ಅನುಮೋದನೆ ನೀಡಲಾಗಿದೆ.

ಲೋಕೋಪಯೋಗಿ ಇಲಾಖೆಯ ಚಿಕ್ಕಬಳ್ಳಾಪುರ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಂ. ಮುರಳೀಧರ್. ಕಾರ್ಯನಿರ್ವಾಹಕ ಇಂಜಿನಿಯರ್ ಮತ್ತು ಪಿ.ವಿ. ಶ್ರೀನಿವಾಸುಲು, ಗ್ರೂಪ್-ಡಿ ಇವರ ವಿರುದ್ಧ ಉಪ ಲೋಕಾಯುಕ್ತರು ಮಾಡಿರುವ ದಂಡನಾ ಶಿಫಾರಸನ್ನು ತಿರಸ್ಕರಿಸಿ ಕ್ಯಾಬಿನೆಟ್ ಅನುಮೋದನೆ ನೀಡಿದೆ.

ಬೆಂಗಳೂರು ಮೈಸೂರು ಮೂಲಸೌಕರ್ಯ ಕಾರಿಡಾರ್ ಯೋಜನೆ (BMICP)ಯ ಅನುಷ್ಠಾನದ ಬಗ್ಗೆ ಕ್ಯಾಬಿನೆಟ್ ಸಬ್ ಕಮಿಟಿ ರಚಸಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕರ್ಣಂಗೇರಿ ಗ್ರಾಮದ ಸರ್ವೆ ನಂಬರ್​512/1ರಲ್ಲಿ 0.26 ಎಕರೆ (26 ಸೆಂಟ್) ಜಮೀನನ್ನು ಬಿಲ್ಲವ ಸಮಾಜ ಸೇವಾ ಸಂಘಕ್ಕೆ ಮಂಜೂರು ಮಾಡಲು ಕ್ಯಾಬಿನೆಟ್ ತೀರ್ಮಾನಿಸಿದೆ.

ಇದನ್ನೂ ಓದಿ: ಜಾತಿ ಗಣತಿ ವರದಿ ಬಗ್ಗೆ ಚರ್ಚಿಸಲು ಏ. 17ಕ್ಕೆ ಕರ್ನಾಟಕ ಸಚಿವ ಸಂಪುಟ ವಿಶೇಷ ಸಭೆ ನಿಗದಿ

ಬೆಂಗಳೂರು ನಗರ ಜಿಲ್ಲೆ, ಉತ್ತರ (ಅಪರ) ತಾಲ್ಲೂಕು, ಹೊಸಹಳ್ಳಿ ಗ್ರಾಮದ ಸರ್ವೆ ನಂಬರ್​ 21ರಲ್ಲಿ ಕೊಡವ ಸಮಾಜ, ಬೆಂಗಳೂರು ಇವರಿಗೆ ಮಂಜೂರು ಮಾಡಿರುವ 7 ಎಕರೆ ಜಮೀನಿಗೆ ವಿಧಿಸಿರುವ ಮೌಲ್ಯವನ್ನು ಪರಿಷ್ಕರಿಸಿ ಅನುಮೋದಿಸಲಾಗಿದೆ . ಗಿಗ್ ಕಾರ್ಮಿಕರ ವಿಧೇಯಕ ಮಂಡನೆಗೆ ಕ್ಯಾಬಿನೆಟ್ ತೀರ್ಮಾನ ಕೈಗೊಂಡಿದ್ದು, ಸುಗ್ರೀವಾಜ್ಞೆ ಮೂಲಕ ಬಿಲ್ ಜಾರಿಗೆ ತರಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:18 pm, Fri, 11 April 25