
ಬೆಂಗಳೂರು, ಡಿಸೆಂಬರ್ 10: ಕರ್ನಾಟಕ ಮಾಜಿ ಸಿಎಂ, ಮುತ್ಸದ್ದಿ ರಾಜಕಾರಣಿ ಎಸ್ಎಂ ಕೃಷ್ಣ ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ. ಈ ಮೂಲಕ ಕರ್ನಾಟಕ ರಾಜಕಾರಣದ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ. ಈ ಸಂದರ್ಭದಲ್ಲಿ ಎಸ್ಎಂ ಕೃಷ್ಣ ಅವರ ರಾಜಕೀಯ ಜೀವನ, ವೈಯಕ್ತಿಕ ಜೀವನ, ಹವ್ಯಾಸಗಳ ಕುರಿತ ಇಣುಕುನೋಟ ಇಲ್ಲಿದೆ.
ಈ ವೇಳೆ ಮದ್ದೂರು ಕ್ಷೇತ್ರದಿಂದ ಗೆಲುವು ಸಾಧಿಸಿದ ಎಸ್ಎಂ ಕೃಷ್ಣ ಅವರು ರಾಜ್ಯದ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿದರು. ಈ ಮೂಲಕ ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಮೊದಲ ನಾಯಕ ಸಿಎಂ ಆಗಿರುವ ಹೆಗ್ಗಳಿಕೆಗೆ ಕೃಷ್ಣ ಅವರು ಪಾತ್ರರಾಗಿದ್ದಾರೆ.
ಎಸ್ಎಂ ಕೃಷ್ಣ ಆಡಳಿತಾವಧಿಯ ಪ್ರಮುಖ ಘಟನಾವಳಿಗಳ ವಿವರ ಇಲ್ಲಿದೆ;
ಇವರು ಸಿಎಂ ಆಗಿದ್ದ ವೇಳೆ ರಾಜ್ಯದಲ್ಲಿ ಎರಡು ಘಟನೆಗಳು ದೊಡ್ಡ ಮಟ್ಟದ ಚರ್ಚೆ ಉಂಟಾಯಿತು. ಡಾ. ರಾಜ್ಕುಮಾರ್ ಅವರನ್ನು ವೀರಪ್ಪನ್ ಮೂರು ತಿಂಗಳ ಕಾಲ ಅಪಹರಣ ಮಾಡಿದ್ದ. ಆಗ ರಾಜ್ಯದ್ಯಾಂತ ಸರಕಾರದ ವಿರುದ್ಧ ಹೋರಾಟಗಳು ನಡೆದವು. ಬಳಿಕ ಕೃಷ್ಣ ಅವರು ಅಂದಿನ ತಮಿಳುನಾಡು ಸಿಎಂ ಜಯಲಲಿತ ಅವರೊಮದಿಗೆ ಮಾತುಕತೆ ನಡೆಸಿ, ಬಳಿಕ ವೀರಪ್ಪನ್ ಸಂಪರ್ಕ ಮಾಡಿ ರಾಜ್ಕುಮಾರ್ ಅವರನ್ನು ಕ್ಷೇಮವಾಗಿ ಕರೆತರುವಲ್ಲಿ ಪ್ರಮುಖ ಪಾತ್ರ ವಹಿಸಿದರು.
ಕೃಷ್ಣ ಆಡಳಿತದ ವೇಳೆ ರಾಜ್ಯಕ್ಕೆ ಬರಗಾಲವು ಸಹ ಬಂದೊದಗಿತ್ತು. ಆ ವೇಳೆ ರಾಜ್ಯ ಜನರ ರಕ್ಷಣೆಗೆ ವೈಜ್ಞಾನಿಕವಾಗಿ ಮೋಡ ಬಿತ್ತನೆ ಮಾಡಿ ಮಳೆ ಬರಿಸಲು ಸಹ ಕೃಷ್ಣ ಅವರು ಮುಂದಾಗಿದ್ದರು. ಆದರೆ ದುರಾದೃಷ್ಟವಶಾತ್ ಈ ಪ್ಲಾನ್ ಕೈಕೊಟ್ಟಿತು. ಈ ವೇಳೆ ತಮಿಳುನಾಡು ಕಾವೇರಿ ನೀರಿಗಾಗಿ ಕ್ಯಾತೆಯನ್ನು ಸಹ ತೆಗೆಯಿತು. ಮಂಡ್ಯ ಸೇರಿದಂತೆ ಹಳೆ ಮೈಸೂರು ಭಾಗದಲ್ಲಿ ತೀವ್ರ ಸ್ವರೂಪದ ಹೋರಾಟಗಳು ಸಹ ಜರುಗಿದವು.
ಇಷ್ಟೆಲ್ಲಾ ಸಮಸ್ಯೆಗಳ ನಡುವೆ ಎಸ್ಎಂ ಕೃಷ್ಣ ಅವರು ಸಿಎಂ ಆಗಿದ್ದ ವೇಳೆ ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿದ್ದು, ಸರಕಾರಿ ಶಾಲೆ ಮಕ್ಕಳಿಗೆ ಬಿಸಿಯೂಟ, ಯಶಸ್ವಿನಿ ಯೋಜನೆ, ಬೆಂ-ಮೈ ಹೆದ್ದಾರಿ, ಬೆಂಗಳೂರನ್ನು ಸಿಲಿಕಾನ್ ಸಿಟಿಯನ್ನಾಗಿ ಮಾಡಿದ್ದು, ಐಟಿ ಬಿಟಿಯಲ್ಲಿ ಬಹುದೊಡ್ಡ ಕ್ರಾಂತಿ ಸೇರಿದಂತೆ ಇನ್ನೂ ಹತ್ತಾರು ಅಭಿವೃದ್ಧಿ ಕೆಲಸಗಳನ್ನು ಮಾಡಿಸಿದ್ದಾರೆ.
2004 ರಲ್ಲಿ ಕೃಷ್ಣ ಅವರು ತಮ್ಮ ಸ್ವಕ್ಷೇತ್ರ ಮದ್ದೂರು ಕ್ಷೇತ್ರವನ್ನು ಡಿಸಿ ತಮ್ಮಣ್ಣಗೆ ಬಿಟ್ಟುಕೊಟ್ಟು ಬೆಂಗಳೂರಿನ ಚಾಮರಾಜಪೇಟೆಯಲ್ಲಿ ವಿಧಾಸಭಾ ಚುನಾವಣೆಯನ್ನು ಎದುರಿಸುತ್ತಾರೆ. ಚಾಮರಾಜಪೇಟೆಯಲ್ಲೂ ಸಹ ಕೃಷ್ಣ ಅವರು ಗೆಲುವು ಸಾಧಿಸುತ್ತಾರೆ ಬಳಿಕ ಚಾಮರಾಜಪೇಟೆಯ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ 2004 ರಲ್ಲಿ ಮಹಾರಾಷ್ಟದ ರಾಜ್ಯಪಾಲರಾಗಿ ನೇಮಕಗೊಂಡಿದ್ದರು.
ಇದನ್ನೂ ಓದಿ: ಎಸ್ಎಂ ಕೃಷ್ಣ ನಿಧನ, ಕರ್ನಾಟಕ ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಇನ್ನಿಲ್ಲ
2008 ರಲ್ಲಿ ರಾಜ್ಯಪಾಲರ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜ್ಯಸಭೆಗೆ ಪ್ರವೇಶಿಸುತ್ತಾರೆ. ನಂತರ 2009 ರಲ್ಲಿ ಮನಮೋಹನ ಸಿಂಗ್ ಅವರ ಸಂಪುಟದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. 2012 ರಂದು ವಿದೇಶಾಂಗ ಸಚಿವ ಸ್ಥಾನಕ್ಕೂ ಕೃಷ್ಣ ಅವರು ರಾಜಿನಾಮೆ ನೀಡಿದ್ದರು.
2017 ರಂದು ಕಾಂಗ್ರೆಸ್ ಸದಸ್ಯತ್ವಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ ಎಸ್ಎಂ ಕೃಷ್ಣ 2017 ರಲ್ಲೇ ಬಿಜೆಪಿ ಪಕ್ಷಕ್ಕೆ ಎಸ್.ಎಂ.ಕೃಷ್ಣ ಸೇರ್ಪಡೆಯಾಗಿದ್ದರು. 2022 ಜನವರಿ 7 ರಂದು ಎಸ್ಎಂ ಕೃಷ್ಣ ತಮ್ಮ 60 ವರ್ಷಗಳ ಸುದೀರ್ಘ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ