ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಇಬ್ಬರ ಬಂಧನ

ಐವನ್ ಡಿಸೋಜಾ ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದರೂ ಎಫ್​ಐಆರ್​ ದಾಖಲಾಗಿಲ್ಲ. ಹೀಗಾಗಿ ಸದ್ಯ ಬಿಜೆಪಿ ಜನಪ್ರತಿನಿಧಿಗಳ ಕೋರ್ಟ್​ ಮೆಟ್ಟಿಲೇರಲು ನಿರ್ಧರಿಸಿದೆ. ಈ ಮಧ್ಯೆ ಐವನ್ ಡಿಸೋಜಾ ಅವರ ಮನೆ ಮೇಲೆ ಕಲ್ಲುತೂರಾಟ ಮಾಡಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಇಬ್ಬರ ಬಂಧನ
ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಇಬ್ಬರ ಬಂಧನ
Edited By:

Updated on: Aug 28, 2024 | 4:42 PM

ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ ಮೇಲೆ ಕಲ್ಲುತೂರಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಭರತ್ ಅಲಿಯಾಸ್ ಯಕ್ಷಿತ್, ದಿನೇಶ್ ಕುರ್ತಮೊಗೆರು ಬಂಧಿತರು. ಸಿಸಿಕ್ಯಾಮರಾ ದೃಶ್ಯ ಆಧರಿಸಿ ಇಬ್ಬರು ಆರೋಪಿಗಳ ಬಂಧನ ಮಾಡಲಾಗಿದೆ. ಐವನ್ ಡಿಸೋಜಾ ಹೇಳಿಕೆಯಿಂದ ಸಿಟ್ಟಾಗಿ ಕಲ್ಲೆಸೆದಿದ್ದಾಗಿ ಪೊಲೀಸರ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾರೆ.

ಆರೋಪಿ ಭರತ್, ಬಂಟ್ವಾಳ ತಾಲೂಕಿನ ಬೋಳಂತೂರಿನ ರಾಘವ ಭಂಡಾರಿ ಪುತ್ರ. ಭರತ್ ವಿರುದ್ಧ ಹಲ್ಲೆ ಆರೋಪದಡಿ ಈವರೆಗೆ 3 ಪ್ರಕರಣ ದಾಖಲಾಗಿವೆ. ಕನ್ಯಾನದಲ್ಲಿ ಫೈನಾನ್ಸ್​ ವಸೂಲಿ ವಿಭಾಗದಲ್ಲಿ ದಿನೇಶ್ ಕೆಲಸ ಮಾಡುತ್ತಿದ್ದ. ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಆನಂದ ಪೂಜಾರಿ ಪುತ್ರ.

ಇದನ್ನೂ ಓದಿ: ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ಎಂಎಲ್​ಸಿ ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ವಿರೋಧಿಸಿ ನಡೆದಿದ್ದ ಪ್ರತಿಭಟನೆಯಲ್ಲಿ ರಾಜ್ಯಪಾಲರ ಥಾಮರ್​ ಚಂದ್​ ಗೆಹಲೋತ್​ ವಿರುದ್ಧ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಇತ್ತೀಚೆಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಹೀಗಾಗಿ ಆ.22 ರಂದು ರಾತ್ರಿ ಸುಮಾರು 11 ಗಂಟೆಗೆ ಹೆಲ್ಮೆಟ್ ಹಾಕಿಕೊಂಡು ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಂಗಳೂರಿನ ವೆಲೆನ್ಸಿಯಾದಲ್ಲಿರುವ ಮನೆಯ ಮೇಲೆ ರಾತ್ರಿ ಕಲ್ಲು ತೂರಾಟ ಮಾಡಿ ಪರಾರಿಯಾಗಿದ್ದರು.

ಇದನ್ನೂ ಓದಿ: ಕೈ ಎಂಎಲ್​ಸಿ ಐವನ್ ಡಿಸೋಜಾಗೆ ಸಂಕಷ್ಟ: ಜನಪ್ರತಿನಿಧಿಗಳ ಕೋರ್ಟ್​ ಮೆಟ್ಟಿಲೇರಲು ನಿರ್ಧರಿಸಿದ ಬಿಜೆಪಿ

ಇದಾದ ನಂತರ 2 ನಿಮಿಷ ಬಿಟ್ಟು ಮತ್ತೆ ಬೈಕ್​ನಲ್ಲಿ ಬಂದು ಕಲ್ಲು ತೂರಾಟ ಮಾಡಿದ್ದರು. ಇದರಿಂದ ಐವನ್ ಡಿಸೋಜಾ ಅವರ ಮನೆಯ ಕಿಟಕಿ ಗಾಜುಗಳು ಪುಡಿಯಾಗಿದ್ದವು. ಕಲ್ಲು ತೂರಾಟ ವೇಳೆ ಐವನ್ ಡಿಸೋಜಾ ಅವರ ಪತ್ನಿ ಕವಿತಾ ಡಿಸೋಜಾ ಮನೆಯಲ್ಲಿ ಇದ್ದರು. ಸ್ಥಳಕ್ಕೆ ಪಾಂಡೇಶ್ವರ ಠಾಣಾ ಪೊಲೀಸರು ಭೇಟಿ ನೀಡಿ ಸಿಸಿ ಕ್ಯಾಮೆರಾ ಪರಿಶೀಲನೆ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:27 pm, Wed, 28 August 24

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us