ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಿಂದ ‘ಪಾಕಿಸ್ತಾನ ಹೋಲಿಕೆ’ ಆರೋಪ: ವರದಿ ಕೇಳಿದ ಸುಪ್ರೀಂ ಕೋರ್ಟ್

ಕರ್ನಾಟಕ ಹೈಕೋರ್ಟ್​ನ ಜಡ್ಜ್​​​ವೊಬ್ಬರು ಬೆಂಗಳೂರಿನ ನಿರ್ದಿಷ್ಟ ಪ್ರದೇಶವನ್ನು ಪಾಕಿಸ್ತಾನಕ್ಕೆ ಹೋಲಿಕೆ ಮಾಡಿ ಮಾತನಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್​ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು, ವಿಚಾರಣೆ ಕೈಗೆತ್ತಿಕೊಂಡಿದೆ. ಹೈಕೋರ್ಟ್​ ಜಡ್ಜ್ ವಿರುದ್ಧದ ಆರೋಪ ಸಂಬಂಧ ಹೈಕೋರ್ಟ್ ರಿಜಿಸ್ಟ್ರಾರ್​​​ರಿಂದ ವರದಿ ಕೇಳಿದೆ.

ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಿಂದ ‘ಪಾಕಿಸ್ತಾನ ಹೋಲಿಕೆ’ ಆರೋಪ: ವರದಿ ಕೇಳಿದ ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
Edited By:

Updated on: Sep 20, 2024 | 12:11 PM

ನವದೆಹಲಿ, ಸೆಪ್ಟೆಂಬರ್ 20: ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರು ಪ್ರಕರಣವೊಂದರ ವಿಚಾರಣೆ ವೇಳೆ ಬೆಂಗಳೂರಿನ ನಿರ್ದಿಷ್ಟ ಪ್ರದೇಶವನ್ನು ‘ಪಾಕಿಸ್ತಾನ’ಕ್ಕೆ ಹೋಲಿಸಿದ್ದಾರೆ ಎಂಬ ಆರೋಪದ ಸಂಬಂಧ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡಿದೆ. ಸುಪ್ರೀಂ ಕೋರ್ಟ್ ನ್ಯಾಯಪೀಠ ಸದ್ಯ ಕರ್ನಾಟಕ ಹೈಕೋರ್ಟ್ ರಿಜಿಸ್ಟ್ರಾರ್​​​ರಿಂದ ವರದಿ ಕೇಳಿದೆ. ಜತೆಗೆ, ಅಟಾರ್ನಿ ಜನರಲ್ ಹಾಗೂ ಸಾಲಿಸಿಟರ್ ಜನರಲ್ ಅಭಿಪ್ರಾಯ ಕೇಳಿದೆ.

ಕರ್ನಾಟಕ ಹೈಕೋರ್ಟ್ ನ್ಯಾಯಶಧೀಶರ ಹೇಳಿಕೆ ಕುರಿತ ವಿಚಾರಣೆಯನ್ನು ಸುಪ್ರೀಂ ಕೋರ್ಟ್​ ಸದ್ಯ ಎರಡು ವಾರ ಕಾಲ ಮುಂದೂಡಿಕೆ ಮಾಡಿದೆ.

ಕರ್ನಾಟಕ ಹೈಕೋರ್ಟ್​​ ನ್ಯಾಯಾಧೀಶ ವಿ ಶ್ರೀಶಾನಂದ ಅವರು ವಿಚಾರಣೆಯೊಂದರ ವೇಳೆ ‘ಪಾಕಿಸ್ತಾನ’ ಹೋಲಿಕೆ ಹೇಳಿಕೆ ನೀಡಿದ್ದರು ಎಂಬ ಆರೋಪವಿದೆ. ಹೇಳಿಕೆ ಕುರಿತ ವಿಡಿಯೋ ತುಣುಕೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಸಾಕಷ್ಟು ವಿರೋಧ ವ್ಯಕ್ತವಾಗಿತ್ತು.

ವೈರಲ್ ಆದ ವಿಡಿಯೋದಲ್ಲೇನಿದೆ?

ವಿಚಾರಣೆಯೊಂದರ ವೇಳೆ, ‘‘ಮೈಸೂರು ರಸ್ತೆ ಮೇಲ್ಸೇತುವೆ ಬಳಿ ಹೋಗಿ ನೋಡಿ, ಪ್ರತಿ ಆಟೊ ರಿಕ್ಷಾದಲ್ಲಿ 10 ಮಂದಿ ಇರುತ್ತಾರೆ. ಅಲ್ಲಿ ಯಾವುದೂ ಅನ್ವಯವಾಗುವುದಿಲ್ಲ. ಯಾಕೆಂದರೆ ಕೆಆರ್​​ ಮಾರುಕಟ್ಟೆ ಮತ್ತು ಗೌರಿ ಪಾಳ್ಯ ವರೆಗೆ ಮೈಸೂರು ರೋಡ್ ಫ್ಲೈಓವರ್ ಪಾಕಿಸ್ತಾನದಲ್ಲಿದೆ, ಭಾರತದಲ್ಲಿಲ್ಲ. ಇದು ವಾಸ್ತವ. ನೀವು ಎಂಥವನೇ ಸ್ಟ್ರಿಕ್ಟ್ ಅಧಿಕಾರಿಗಳನ್ನು ಅಲ್ಲಿಗೆ ಹಾಕಿ, ಹಿಡಿದರೆ ನೋಡ್ತೀನಿ’’ ಎಂದು ನ್ಯಾಯಾಧೀಶರು ಹೇಳುವುದು ವಿಡಿಯೋದಲ್ಲಿದೆ.

ಇದನ್ನೂ ಓದಿ: ‘ಸಂಜೆ 250 ಕೊಡು, ಇಲ್ಲಾಂದ್ರೆ ಶೆಡ್ಡಿಗ್ ಬಾ’, ಆಟೋ ಚಾಲಕರ ಸಮಸ್ಯೆಯನ್ನು ಎಳೆಎಳೆಯಾಗಿ ವಿವರಿಸಿದ ಕರ್ನಾಟಕ ಹೈಕೋರ್ಟ್​

ವಿಡಿಯೋಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ಷೇಪ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:06 pm, Fri, 20 September 24

Harish GR
Follow Us