ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್: ಪೂರ್ವಾನುಮತಿ ಇಲ್ಲದೆ ಬಳ್ಳಾರಿ ಪ್ರವೇಶಕ್ಕೆ ಅನುಮತಿ

| Updated By: ಗಣಪತಿ ಶರ್ಮ

Updated on: Sep 30, 2024 | 12:06 PM

ಕೊಪ್ಪಳ ಜಿಲ್ಲೆಯ ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್​ನಲ್ಲಿ ಕೊನೆಗೂ ರಿಲೀಫ್ ದೊರೆತಿದೆ. ಬಳ್ಳಾರಿ ಪ್ರವೇಶಕ್ಕೆ ಅವರಿಗಿದ್ದ ನಿರ್ಬಂಧವನ್ನು ಸರ್ವೋಚ್ಚ ನ್ಯಾಯಾಲಯ ತೆರವುಗೊಳಿಸಿದೆ. ಇದರೊಂದಿಗೆ ರೆಡ್ಡಿ ಬಳ್ಳಾರಿ ಎಂಟ್ರಿ ನಿರಾಳವಾಗಿದೆ. ರೆಡ್ಡಿ ಕುರಿತು ಸುಪ್ರೀಂ ಕೋರ್ಟ್ ನೀಡಿದ ಆದೇಶದ ಮಾಹಿತಿ ಇಲ್ಲಿದೆ.

ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್: ಪೂರ್ವಾನುಮತಿ ಇಲ್ಲದೆ ಬಳ್ಳಾರಿ ಪ್ರವೇಶಕ್ಕೆ ಅನುಮತಿ
ಗಾಲಿ ಜನಾರ್ದನ ರೆಡ್ಡಿ
Follow us on

ನವದೆಹಲಿ, ಸೆಪ್ಟೆಂಬರ್ 30: ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್​ನಲ್ಲಿ ಬಿಗ್ ರಿಲೀಫ್ ದೊರೆತಿದೆ. ಬಳ್ಳಾರಿಗೆ ತೆರಳಲು ಅವರಿಗೆ ಸುಪ್ರೀಂಕೋರ್ಟ್ ಅನುಮತಿ ನೀಡಿ ಸೋಮವಾರ ಆದೇಶಿಸಿದೆ. ಇದರೊಂದಿಗೆ, ಯಾವುದೇ ಪೂರ್ವಾನುಮತಿ ಇಲ್ಲದೆ ಬಳ್ಳಾರಿಗೆ ತೆರಳಲು ಜನಾರ್ದನ ರೆಡ್ಡಿಗೆ ಅವಕಾಶ ದೊರೆತಂತಾಗಿದೆ.

ಈ ಹಿಂದೆ ಬಳ್ಳಾರಿ, ಕಡಪ, ಅನಂತಪುರಕ್ಕೆ ತೆರಳಲು ಅವರು ಪೂರ್ವಾನುವತಿ ಪಡೆಯುವುದು ಕಡ್ಡಾಯವಾಗಿತ್ತು. ಅವರಿಗೆ ಜಾಮೀನು ನೀಡುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ಷರತ್ತು ವಿಧಿಸಿತ್ತು. ಇದೀಗ ನ್ಯಾ. ಎಂಎಂ ಸುಂದರೇಶ್ ನೇತೃತ್ವದ ದ್ವಿ ಸದಸ್ಯ ಪೀಠದಿಂದ ಹೊಸ ಆದೇಶ ಹೊರಬಿದ್ದಿದೆ.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಜೈಲುಪಾಲಾಗಿದ್ದರು. ನಂತರ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. 2015 ರ ಜನವರಿ 23 ರಂದು ಸುಪ್ರೀಂ ಕೋರ್ಟ್‌ ಜನಾರ್ದನ ರೆಡ್ಡಿಗೆ ಷರತ್ತುಬದ್ಧ ಜಾಮೀನು ನೀಡಿತ್ತು. ಆ ಸಂದರ್ಭದಲ್ಲಿ, ಬಳ್ಳಾರಿ, ಕಡಪ, ಅನಂತಪುರಕ್ಕೆ ತೆರಳಲು ಪೂರ್ವಾನುಮತಿ ಪಡೆಯವುದನ್ನು ಸುಪ್ರೀಂ ಕೋರ್ಟ್ ಕಡ್ಡಾಯಗೊಳಿಸಿತ್ತು.

ಪೂರ್ವಾನುಮತಿ ಪಡೆದು ಈಗಾಗಲೇ ರೆಡ್ಡಿ ಬಳ್ಳಾರಿಗೆ ಭೇಟಿ ನೀಡಿದ್ದಾರೆ. ಆದರೆ, ಇನ್ಮುಂದೆ ಮುಕ್ತವಾಗಿ ಬಳ್ಳಾರಿಗೆ ತೆರಳಬಹುದಾಗಿದೆ.

ತಮ್ಮ ರಾಜಕೀಯದ ಪ್ರಮುಖ ನೆಲೆಯಾಗಿರುವ ಬಳ್ಳಾರಿ ಭೇಟಿಗೆ ಸುಪ್ರೀಂ ಕೋರ್ಟ್ ನಿರ್ಬಂಧ ವಿಧಿಸಿದ್ದು, ಜನಾರ್ದನ ರೆಡ್ಡಿ ಅವರಿಗೆ ತೀವ್ರ ಹಿನ್ನಡೆ ಉಂಟುಮಾಡಿತ್ತು.

ಕಳೆದ ಬಾರಿಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಸ್ಥಾಪಿಸಿದ್ದ ಜನಾರ್ದನ ರೆಡ್ಡಿ ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಪಕ್ಷದ ಇತರ ಅಭ್ಯರ್ಥಿಗಳು ಯಾರೂ ಗೆಲುವು ಸಾಧಿಸಿರಲಿಲ್ಲ.

ಇದನ್ನೂ ಓದಿ: ಎತ್ತಿನಹೊಳೆ ನೆಪದಲ್ಲಿ ಪರಮೇಶ್ವರ್, ಡಿಕೆ ಶಿವಕುಮಾರ್ ಭೇಟಿ: ಕುತೂಹಲಕ್ಕೆ ಕಾರಣವಾದ ಸಿಎಂ ಸ್ಥಾನ ಆಕಾಂಕ್ಷಿಗಳ ಮಾತುಕತೆ

2024 ರ ಲೋಕಸಭೆ ಚುನಾವಣೆಗೂ ಮುನ್ನ ಮಾರ್ಚ್ 25ರಂದು ಅವರು ಮತ್ತೆ ಬಿಜೆಪಿ ಸೇರ್ಪಡೆಯಾಗಿದ್ದರು. ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ವನ್ನು ಷರತ್ತುರಹಿತವಾಗಿ ಬಿಜೆಪಿ ಜತೆ ವಿಲೀನಗೊಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:53 am, Mon, 30 September 24