ಚಿಕ್ಕಮಗಳೂರು: ಹಿಂದೂ ಮನೆ ಮೇಲೆ ನಿರಂತರ ಕಲ್ಲು ತೂರಾಟದಿಂದ ಘರ್ಷಣೆ, ವಿಜಯನಗರ ಬಡಾವಣೆ ಬಳಿ ಉದ್ವಿಗ್ನ ಪರಿಸ್ಥಿತಿ

ಚಿಕ್ಕಮಗಳೂರಿನ ವಿಜಯನಗರ ಬಡಾವಣೆಯಲ್ಲಿ ಕಳೆದ ಒಂದು ವಾರದಿಂದ ಹಿಂದೂ ಮನೆಯೊಂದರ ಮೇಲೆ ನಿರಂತರ ಕಲ್ಲು ತೂರಾಟ ನಡೆದ ಆರೋಪ ಕೇಳಿಬಂದಿದ್ದು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಇಬ್ಬರು ಯುವಕರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ನಾಲ್ವರು ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಪೊಲೀಸ್ ಠಾಣೆ ಎದುರೇ ಬಜರಂಗದಳ, ಎಸ್‌ಡಿಪಿಐ ಮಧ್ಯೆ ಹೈಡ್ರಾಮಾ ನಡೆದಿದ್ದರಿಂದ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

ಚಿಕ್ಕಮಗಳೂರು: ಹಿಂದೂ ಮನೆ ಮೇಲೆ ನಿರಂತರ ಕಲ್ಲು ತೂರಾಟದಿಂದ ಘರ್ಷಣೆ, ವಿಜಯನಗರ ಬಡಾವಣೆ ಬಳಿ ಉದ್ವಿಗ್ನ ಪರಿಸ್ಥಿತಿ
ಚಿಕ್ಕಮಗಳೂರು ಉದ್ವಿಗ್ನ
Image Credit source: tv9
Edited By:

Updated on: Feb 17, 2026 | 7:04 AM

ಚಿಕ್ಕಮಗಳೂರು, ಫೆಬ್ರವರಿ 17: ಚಿಕ್ಕಮಗಳೂರು (Chikkamagaluru) ನಗರದ ವಿಜಯನಗರ ಬಡಾವಣೆಯ ತಿಲಕ್ ಪಾರ್ಕ್ ಸಮೀಪ ಮನೆಯೊಂದರ ಮೇಲೆ ಕಳೆದ ಒಂದು ವಾರದಿಂದ ಕಿಡಿಗೇಡಿಗಳು ರಾತ್ರಿ ವೇಳೆ ನಿರಂತರ ಕಲ್ಲುತೂರಾಟ ನಡೆಸಿದ್ದು, ಘಟನೆಯಿಂದ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಇನ್ನೂ ನಾಲ್ವರು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಇದರಿಂದಾಗಿ ಸ್ಥಳದಲ್ಲಿ ಸೋಮವಾರ ರಾತ್ರಿ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು. ಸದ್ಯ ಪ್ರಕರಣದ ತನಿಖೆಯನ್ನು ಬಸವನಹಳ್ಳಿ ಪೊಲೀಸ್ ಠಾಣೆ ಪೊಲೀಸರು ಕೈಗೊಂಡಿದ್ದಾರೆ.

ಸಂತ್ರಸ್ತ ಮಹಿಳೆ ಸುಧಾ ದೂರಿನ ಪ್ರಕಾರ, ಮಧ್ಯಾಹ್ನ ಹಾಗೂ ರಾತ್ರಿ ವೇಳೆ ಮನೆ ಮೇಲೆ ಕಲ್ಲು ಎಸೆಯಲಾಗುತ್ತಿದೆ. ನಾವು ಭಯದಲ್ಲಿ ಜೀವನ ನಡೆಸುವಂತಾಗಿದೆ ಎಂದು ಸುಧಾ ದೂರಿದ್ದಾರೆ.

ಪೊಲೀಸರಿಗೆ ದೂರು ನೀಡಿದ್ದೆವೆಂದ ಎಂದ ಯುವಕ

ನಮ್ಮ ಮನೆಯ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ಕಳೆದ ಒಂದು ವಾರದಿಂದ ನಿರಂತರವಾಗಿ ಕಲ್ಲು ತೂರಾಟ ಮಾಡುತ್ತಿದ್ದಾರೆ. ಅವರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ನಾನು ಕೆಲಸಕ್ಕೆ ಹೋಗುತ್ತೇನೆ. ತಾಯಿ ,ತಂಗಿ ಇಬ್ಬರೇ ಮನೆಯಲ್ಲಿ ಇರುತ್ತಾರೆ. ಮಧ್ಯಾಹ್ನ ರಾತ್ರಿ ವೇಳೆಯಲ್ಲಿ ಕಲ್ಲು ಎಸೆಯುತ್ತಾರೆ. ನಾವು ಪೊಲೀಸರಿಗೆ ದೂರು ನೀಡಿದ್ದೆವು. ಸೋಮವಾರ ರಾತ್ರಿ ಕೂಡ ಮನೆಗೆ ಕಲ್ಲು ಎಸೆದಿದ್ದಾರೆ. ಅದನ್ನು ಹೊರಗೆ ಇದ್ದ ತಾಯಿ ಹಾಗೂ ತಂಗಿ ಪ್ರಶ್ನೆ ಮಾಡಿದ್ದಾರೆ. ಆಗ ಅವರ ಜೊತೆ ಯುವಕರು ಜಗಳ ಮಾಡಿದ್ದಾರೆ ಎಂದು ಮನೆ ಮಾಲೀಕ ಗಗನ್ ಎಂಬವರು ಆರೋಪಿಸಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಕೆಲ ಮುಸ್ಲಿಂ ಯುವಕರನ್ನು ಬಜರಂಗದಳ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾಗಿ ಮಾಹಿತಿ ಲಭ್ಯವಾಗಿದೆ. ಮತ್ತೊಂದೆಡೆ, ಘರ್ಷಣೆ ವೇಳೆ ಇಬ್ಬರು ಮುಸ್ಲಿಂ ಯುವಕರು ಗಾಯಗೊಂಡಿದ್ದು, ಅವರನ್ನು ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಭಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ ನಡೆದಿದೆ ಎಂಬ ಆರೋಪವನ್ನು ಗಾಯಾಳುಗಳು ಮತ್ತು ಸಮುದಾಯದ ಮುಖಂಡರು ಮಾಡುತ್ತಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಎಸ್​ಡಿಪಿಐ ಮುಖಂಡ ಮುನೀರ್, ಮುಸ್ಲಿಂ ಯುವಕರ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಲಾಗಿದೆ. ಸಂಬಂಧಪಟ್ಟವರ ವಿರುದ್ಧ ಕೇಸ್ ದಾಖಲಿಸದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇನ್ನೊಂದೆಡೆ ಹಿಂದೂ ಸಂಘಟನೆಗಳು, ಮನೆ ಮೇಲೆ ಕಲ್ಲು ಎಸೆದವರನ್ನು ತಕ್ಷಣ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿವೆ. ಮನೆಯ ಮೇಲೆ ಕಲ್ಲು ತೂರಿದ ಆರು ಜನ ಯುವಕರ ಬಂಧನಕ್ಕೆ ಭಜರಂಗದಳ ,ಬಿಜೆಪಿ ಪಟ್ಟು ಹಿಡಿದಿವೆ. ಪರಿಣಾಮವಾಗಿ ಪೊಲೀಸ್ ಠಾಣೆ ಎದುರು ಕೆಲಕಾಲ ಹೈಡ್ರಾಮಾವೇ ನಡೆದಿದೆ. ಎರಡೂ ಸಮುದಾಯದ ಯುವಕರು ಜಮಾವಣೆಗೊಂಡು ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಇದನ್ನೂ ಓದಿ: ನಡು ರಸ್ತೆಯಲ್ಲೇ ಕೆಎಸ್​ಆರ್​ಟಿಸಿ ಬಸ್ ಜಪ್ತಿ! ಪ್ರಯಾಣಿಕರು ಕಂಗಾಲು

ಸದ್ಯ ಎಂಎಸ್‌ಪಿ ಜಯಕುಮಾರ್ ನೇತೃತ್ವದಲ್ಲಿ ಹೆಚ್ಚುವರಿ ಪೊಲೀಸ್ ಪಡೆ ನಿಯೋಜಿಸಲಾಗಿದ್ದು, ಠಾಣೆ ಮತ್ತು ಆಸ್ಪತ್ರೆ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ