ನೂತನ ಸಿಎಂಗೆ ಆರಂಭದಲ್ಲೇ ಸಾಲು ಸಾಲು ಸವಾಲುಗಳು: ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಡಿಕೆ ಶಿವಕುಮಾರ್ ಮಹತ್ವದ ಸಭೆ

ಮುಂಗಾರು ಮಳೆಯ ಅವಾಂತರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಅನುಪಸ್ಥಿತಿಯ ನಡುವೆ ನೂತನ ಸಿಎಂ ಡಿಕೆ ಶಿವಕುಮಾರ್ ಆಡಳಿತ ಯಂತ್ರಕ್ಕೆ ಚುರುಕು ನೀಡಲು ಮುಂದಾಗಿದ್ದಾರೆ. ಇಂದು ವಿಧಾನಸೌಧದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಡಿಸಿ, ಎಸ್ಪಿ ಮತ್ತು ಸಿಇಒಗಳ ತುರ್ತು ಸಭೆ ಕರೆದಿರುವ ಸಿಎಂ, ರಸಗೊಬ್ಬರ ಕೊರತೆ ನೀಗಿಸಲು ಹಾಗೂ ನೆರೆ ಪರಿಸ್ಥಿತಿ ಎದುರಿಸಲು ತುರ್ತು ಕ್ರಮಕ್ಕೆ ಸೂಚಿಸಲಿದ್ದಾರೆ.

ನೂತನ ಸಿಎಂಗೆ ಆರಂಭದಲ್ಲೇ ಸಾಲು ಸಾಲು ಸವಾಲುಗಳು: ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಡಿಕೆ ಶಿವಕುಮಾರ್ ಮಹತ್ವದ ಸಭೆ
ಡಿಕೆ ಶಿವಕುಮಾರ್
Image Credit source: tv9

Updated on: Jun 13, 2026 | 7:34 AM

ಬೆಂಗಳೂರು, ಜೂನ್ 13: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಆರಂಭದಲ್ಲೇ ಸವಾಲುಗಳ ಸಾಲು ಎದುರಾಗಿದೆ. ರಾಜ್ಯದಲ್ಲಿ ನೂತನ ಸಂಪುಟ ಇನ್ನು ಪೂರ್ಣ ಪ್ರಮಾಣದಲ್ಲಿ ರಚನೆಯಾಗದ ಕಾರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ವಿಳಂಬವಾಗಿರುವುದರಿಂದ ಆಡಳಿತದ ಸಂಪೂರ್ಣ ಜವಾಬ್ದಾರಿ ಸದ್ಯ ಅಧಿಕಾರಿಗಳ ಹೆಗಲೇರಿದೆ. ಈ ಹಿನ್ನೆಲೆಯಲ್ಲಿ ಖುದ್ದು ಕಣಕ್ಕಿಳಿದಿರುವ ಸಿಎಂ ಡಿಕೆ ಶಿವಕುಮಾರ್, ಆಡಳಿತ ಯಂತ್ರಕ್ಕೆ ಚುರುಕು ನೀಡಲು ಮತ್ತು ಮುಂಗಾರು ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಭರ್ಜರಿ ಆ್ಯಕ್ಷನ್ ಪ್ಲಾನ್ ಸಿದ್ಧಪಡಿಸಿದ್ದಾರೆ.

ಮುಖ್ಯಾಂಶಗಳು

  • ನೂತನ ಸಿಎಂಗೆ ಆರಂಭದಲ್ಲೇ ಸವಾಲುಗಳ ಮಹಾಪೂರ.
  • ಇಂದೇ ಡಿಸಿ, ಎಸ್ಪಿಗಳ ಮಹತ್ವದ ಸಭೆ.
  • ಗಡಿ, ಕರಾವಳಿ ಭಾಗದಲ್ಲಿ ಹೈಅಲರ್ಟ್‌ಗೆ ಸೂಚನೆ.

ಡಿಕೆಶಿ ಸರ್ಕಾರಕ್ಕೆ ಆರಂಭದಲ್ಲೇ ಎದುರಾಗಿರುವ ಪ್ರಮುಖ ಸವಾಲುಗಳು

ರಾಜ್ಯದಲ್ಲಿ ಈಗಾಗಲೇ ಮುಂಗಾರು ಮಳೆ ತೀವ್ರಗೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಭಾರಿ ಅವಾಂತರಗಳು ಸೃಷ್ಟಿಯಾಗಿವೆ. ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ನಿರಂತರ ಮಳೆಯಿಂದಾಗಿ ಸರಣಿ ಭೂಕುಸಿತ ಹಾಗೂ ಗುಡ್ಡ ಕುಸಿತದ ಆತಂಕ ಎದುರಾಗಿದೆ. ಮತ್ತೊಂದೆಡೆ, ಮುಂಗಾರು ಆರಂಭವಾಗಿರುವುದರಿಂದ ರಾಜ್ಯಾದ್ಯಂತ ರೈತರು ಬಿತ್ತನೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ, ಹಲವು ಜಿಲ್ಲೆಗಳಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ತೀವ್ರ ಕೊರತೆ ಎದುರಾಗಿದ್ದು, ರೈತರಲ್ಲಿ ತೀವ್ರ ಅಸಮಾಧಾನ ಮೂಡಿಸಿದೆ. ಉಸ್ತುವಾರಿ ಸಚಿವರ ಅನುಪಸ್ಥಿತಿಯಲ್ಲಿ ಈ ಎಲ್ಲಾ ಸಮಸ್ಯೆಗಳನ್ನು ತಕ್ಷಣವೇ ಬಗೆಹರಿಸಬೇಕಾದ ಅನಿವಾರ್ಯತೆ ಸಿಎಂ ಮುಂದಿದೆ.

ಅಧಿಕಾರಿಗಳ ಮಟ್ಟದಲ್ಲೇ ಬಾಕಿ ಇರುವ ಕೆಲಸಗಳನ್ನು ಚುರುಕುಗೊಳಿಸಲು ಮುಖ್ಯಮಂತ್ರಿಗಳು ಇಡೀ ದಿನದ ಸುದೀರ್ಘ ಸಭೆ ಹಮ್ಮಿಕೊಂಡಿದ್ದಾರೆ. ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು (DC), ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು (SP) ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ (CEO) ಮಹತ್ವದ ವೀಡಿಯೋ ಕಾನ್ಫರೆನ್ಸ್ ಸಭೆ ನಡೆಯಲಿದೆ. ಜಿಲ್ಲಾ ಮಟ್ಟದ ಉನ್ನತ ಅಧಿಕಾರಿಗಳಿಗೆ ಖುದ್ದು ಮುಖ್ಯಮಂತ್ರಿಗಳೇ ನೇರ ಸೂಚನೆಗಳನ್ನು ನೀಡಲಿದ್ದು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕೆಲಸ ಮಾಡಲು ಕಠಿಣ ಪಾಠ ಮಾಡಲಿದ್ದಾರೆ.

ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಭಾಗಕ್ಕೆ ವಿಶೇಷ ನಿಗಾ

ಇಂದಿನ ಸಭೆಯಲ್ಲಿ ಮಳೆ ಪೀಡಿತ ಜಿಲ್ಲೆಗಳ ಅಧಿಕಾರಿಗಳಿಗೆ ಸಿಎಂ ಹೈಅಲರ್ಟ್ ಘೋಷಿಸುವಂತೆ ಸೂಚಿಸಲಿದ್ದಾರೆ. ಕರಾವಳಿ ಭಾಗದಲ್ಲಿ ಮಳೆಯೊಂದಿಗೆ ಸಾಗರ ತೀರದ ಜನರಿಗೆ ಚಂಡಮಾರುತದ ಆತಂಕವೂ ಇರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಆದೇಶಿಸಲಾಗುತ್ತಿದೆ. ಇನ್ನು ಉತ್ತರ ಕರ್ನಾಟಕದ ನದಿ ಪಾತ್ರದ ಜಿಲ್ಲೆಗಳಲ್ಲಿ ಮಳೆ ಹೆಚ್ಚಾದರೆ ಜಲಾವೃತವಾಗುವ ಭೀತಿ ಇದ್ದು, ನದಿ ಇಕ್ಕೆಲಗಳ ಗ್ರಾಮಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಸನ್ನದ್ಧರಾಗಿರುವಂತೆ ಡಿಸಿ ಮತ್ತು ಎಸ್ಪಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ ನೀಡಲಿದ್ದಾರೆ.

ವರದಿ: ಈರಣ್ಣ ಬಸವ, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:32 am, Sat, 13 June 26

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Follow Us