ಮುಸ್ಲಿಮರಿಗೆ ಸಿದ್ದರಾಮಯ್ಯ ಭರ್ಜರಿ ಕೊಡುಗೆ? ಮೀಸಲಾತಿ ಶೇ 10ಕ್ಕೆ ಏರಿಕೆ ಮನವಿ ಬಗ್ಗೆ ಪರಿಶೀಲನೆಗೆ ಜಮೀರ್ ಸೂಚನೆ
ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಶೇಕಡ 4 ರ ಮೀಸಲಾತಿ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಣೆ ಮಾಡಿದ್ದರು. ಇದೀಗ ಕಾಂಗ್ರೆಸ್ ಸರ್ಕಾರ ಮುಸ್ಲಿಮರ ಒಟ್ಟು ಮೀಸಲಾತಿಯನ್ನು ಶೇಕಡ 10ಕ್ಕೆ ಹೆಚ್ಚಿಸುವ ಸುಳಿವು ದೊರೆತಿದೆ. ಈ ಕುರಿತಾದ ಬೇಡಿಕೆ ಸಂಬಂಧ ಕ್ರಮ ಕೈಗೊಳ್ಳುವಂತೆ ಸಚಿವ ಜಮೀರ್ ಅಹ್ಮದ್ ಸೂಚನೆ ನೀಡಿದ್ದಾರೆ.

ಬೆಂಗಳೂರು, ಮಾರ್ಚ್ 13: ಸಿಎಂ ಸಿದ್ದರಾಮಯ್ಯ (Siddaramaiah) ಮುಸ್ಲಿಮರನ್ನು (Muslims) ಅತಿಯಾಗಿ ಓಲೈಕೆ ಮಾಡುತ್ತಾರೆ ಎಂಬ ಪ್ರತಿಪಕ್ಷ ಬಿಜೆಪಿ ಆರೋಪದ ಬೆನ್ನಲ್ಲೇ ಇದೀಗ ಕರ್ನಾಟಕ ಕಾಂಗ್ರೆಸ್ ಸರ್ಕಾರ (Congress govt) ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗುವ ಸುಳಿವು ದೊರೆತಿದೆ. ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಶೇ 4 ರ ಮೀಸಲಾತಿ ಘೋಷಣೆಯಾದ ಬೆನ್ನಲ್ಲೇ ಇದೀಗ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇ 10ಕ್ಕೆ ಹೆಚ್ಚಿಸಬೇಕೆಂಬ ಬೇಡಿಕೆ ಸಂಬಂಧ ಕ್ರಮ ವಹಿಸುವಂತೆ ಸಚಿವ ಜಮೀರ್ ಅಹ್ಮದ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಮೀಸಲಾತಿಯನ್ನು ಶೇ 10ಕ್ಕೆ ಹೆಚ್ಚಿಸುವಂತೆ ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ಗೆ ಸಂಘಟನೆಗಳು ಮನವಿ ಮಾಡಿದ್ದವು. ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಇಂಜಿನಿಯರ್ಸ್ ಅಸೋಸಿಯೇಷನ್ನಿಂದ ಮನವಿ ಸಲ್ಲಿಕೆಯಾಗಿತ್ತು. ಈ ಮನವಿ ಆಧರಿಸಿ ಕ್ರಮ ಕೈಗೊಳ್ಳುವಂತೆ ಸಚಿವ ಜಮೀರ್ ವಿಶೇಷ ಕರ್ತವ್ಯಾಧಿಕಾರಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಕಾರ್ಯದರ್ಶಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ.
ಮುಸ್ಲಿಮರಿಗೆ 2 ಬಿ ಮೀಸಲಾತಿಯನ್ನು ಶೇ 10ಕ್ಕೆ ಹೆಚ್ಚಿಸುವ ಬಗ್ಗೆ ಮನವಿ ಸಲ್ಲಿಕೆಯಾಗಿದೆ. ಈ ಬಗ್ಗೆ ಪರಿಶೀಲಿಸಿ, ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸಚಿವರು ನಿರ್ದೇಶಿಸಿರುತ್ತಾರೆ ಎಂದು ಜಮೀರ್ ಅಹ್ಮದ್ ಅವರ ವಿಶೇಷ ಕರ್ತವ್ಯಾಧಿಕಾರಿ ಬರೆದ ಪತ್ರದಲ್ಲಿ ಉಲ್ಲೇಖವಾಗಿದೆ.
ಇತ್ತೀಚೆಗೆ ಮಂಡಿಸಿದ್ದ 2025-26ನೇ ಸಾಲಿನ ಬಜೆಟ್ನಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಸಿದ್ದರಾಮಯ್ಯ ಭರ್ಜರಿ ಕೊಡುಗೆಗಳನ್ನು ನೀಡಿದ್ದರು.ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೂ ಶೇ 4ರಷ್ಟು ಮೀಸಲಾತಿ ಕಲ್ಪಿಸಿ ಘೋಷಣೆ ಮಾಡಿದ್ದರು. ಇದೀಗ ಬಜೆಟ್ ಘೋಷಣೆಯ ಬೆನ್ನಲ್ಲೇ ಮುಸ್ಲಿಮರಿಗೆ ಮತ್ತೊಂದು ಕೊಡುಗೆ ನೀಡಲು ಸರ್ಕಾರ ಮುಂದಾಗಿರುವಂತಿದೆ.
ಇದನ್ನೂ ಓದಿ: ಸದ್ದಿಲ್ಲದೇ ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಘೋಷಿಸಿದ ಸಿದ್ದರಾಮಯ್ಯ!
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮುಸ್ಲಿಂ ಓಲೈಕೆ ಸರ್ಕಾರ ಎಂದು ಪ್ರತಿಪಕ್ಷಗಳು ಟೀಕಿಸುತ್ತಲೇ ಇವೆ. ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇಕಡಾ 4 ರಷ್ಟು ಮೀಸಲಾತಿ ನೀಡಿರುವುದು ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಬಜೆಟ್ ಘೋಷಣೆ ಬಗ್ಗೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದ ಸಿದ್ದರಾಮಯ್ಯ, ಮುಸ್ಲಿಮರಿಗೆ ಘೋಷಿಸಿದ ಅನುದಾನ ಒಟ್ಟು ಲೆಕ್ಕ ನೋಡಿದರೆ ಕಡಿಮೆಯೇ ಇದೆ ಎಂದು ಸಮರ್ಥಿಸಿಕೊಂಡಿದ್ದರು.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:39 am, Thu, 13 March 25