ನಾಡಗೀತೆ ವಿವಾದ ಬೆನ್ನಲ್ಲೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ವರ್ಗಾವಣೆ

| Updated By: Rakesh Nayak Manchi

Updated on: Feb 27, 2024 | 9:14 PM

ಖಾಸಗಿ ಶಾಲೆಗಳಲ್ಲಿ ಇನ್ನು ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಹೊರಡಿಸಿದ್ದ ಸುತ್ತೋಲೆ ಭಾರೀ ಟೀಕೆಗೆ ಕಾರಣವಾಗಿತ್ತು. ಸ್ವತಃ ಕಾಂಗ್ರೆಸ್ ಕಾರ್ಯಕರ್ತರೇ ಸಾಮಾಜಿಕ ಜಾಲತಾಣದಲ್ಲಿ ಇಂತಹ ಎಡವಟ್ಟುಗಳನ್ನು ಮಾಡುವ ಅಧಿಕಾರಿಗಳನ್ನು ಕಿತ್ತೊಗೆಯಿರಿ ಎಂದು ಒತ್ತಾಯಿಸಿದ್ದರು. ಇದರ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿಯನ್ನು ವರ್ಗಾವಣೆ ಮಾಡಿದೆ. ಇವರ ಜೊತೆಗೆ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.

ನಾಡಗೀತೆ ವಿವಾದ ಬೆನ್ನಲ್ಲೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ವರ್ಗಾವಣೆ
ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಕರ್ನಾಟಕ ಸರ್ಕಾರ
Image Credit source: indiancolumbus
Follow us on

ಬೆಂಗಳೂರು, ಫೆ.27: ಖಾಸಗಿ ಶಾಲೆಗಳಲ್ಲಿ ಇನ್ನು ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬ ವಿವಾದಾತ್ಮಕ ಸುತ್ತೋಲೆ ಹೊರಡಿಸಿದ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ.ಅಜಯ್ ನಾಗಭೂಷಣ್ ಅವರನ್ನು ವರ್ಗಾವಣೆ (Transfer) ಮಾಡಿ ಆದೇಶ ಹೊರಡಿಸಿದೆ. ಇವರ ಜೊತೆಗೆ ವಿವಿಧ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಮೂವರು ಐಎಎಸ್ ಅಧಿಕಾರಿಗಳನ್ನೂ ವರ್ಗಾವಣೆ ಮಾಡಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ.ಅಜಯ್ ನಾಗಭೂಷಣ್, ಮೂಲ ಸೌಕರ್ಯ ಇಲಾಖೆ ಕಾರ್ಯದರ್ಶಿ ಡಾ.ಮಂಜುಳಾ, ಡಿಪಿಎಆರ್ ಕಾರ್ಯದರ್ಶಿ ಡಿ.ರಂದೀಪ್ ಹಾಗೂ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಎಂ.ದೀಪಾ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವಿವಾದಕ್ಕೆ ಕಾರಣವಾಗಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸುತ್ತೋಲೆ

ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ನಿರ್ಬಂಧ ಹೇರಿ ಆಮೇಲೆ ಹಿಂಪಡೆದಿದ್ದ ಮತ್ತು ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಕವಿತೆಯ ಬರಹದ ಸಾಲುಗಳನ್ನು ತೆಗೆಸಿ ಆಮೇಲೆ ಯೂಟರ್ನ್ ತೆಗೆದುಕೊಂಡಿದ್ದ ರಾಜ್ಯ ಸರ್ಕಾರವು ನಾಡಗೀತೆ ವಿವಾದದಲ್ಲಿ ಸಿಲುಕಿಕೊಂಡಿತ್ತು. ಸುತ್ತೋಲೆಯಲ್ಲಿ ‘ಎಲ್ಲಾ ಶಾಲೆಗಳಲ್ಲಿ ಕಾರ್ಯಕ್ರಮದ ಆರಂಭದಲ್ಲಿ ನಾಡಗೀತೆಯನ್ನು ಹಾಡುವುದು’ ಎಂಬುದರ ಬದಲಾಗಿ, ‘ಸರ್ಕಾರಿ ಶಾಲೆಗಳು, ಅನುದಾನಿತ ಶಾಲೆಗಳಲ್ಲಿ’ ಎಂದು ಉಲ್ಲೇಖಿಸಿತ್ತು. ಖಾಸಗಿ ಶಾಲೆಯನ್ನು ಉಲ್ಲೇಖಿಸಿರಲಿಲ್ಲ.

ಇದನ್ನೂ ಓದಿ: ರಾಜ್ಯ ಸರ್ಕಾರದ ವಿವಾದದ ನಡುವೆ ನಾಡಗೀತೆ ಕೊಂಡಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಈ ಬಗ್ಗೆ ಪ್ರತಿಪಕ್ಷಗಳು, ಸಾರ್ವಜನಿಕರು ಮಾತ್ರವಲ್ಲದೆ, ಕಾಂಗ್ರೆಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದರು. ಪ್ರತಿಪಕ್ಷಗಳ ಟೀಕಾ ಪ್ರಹಾರದ ಮಧ್ಯೆ, ಸರ್ಕಾರವನ್ನು ಸಮರ್ಥಿಸಿಕೊಳ್ಳಲು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೈರಾಣಾಗಿದ್ದರು. ಅಲ್ಲದೆ, ಮುದ್ರಣ ದೋಷದ ಕಾರಣ ನೀಡಿದ್ದರು.

ನಾಡಗೀತೆಯ ಧಾಟಿಯ ಬಗ್ಗೆ ಕೋರ್ಟ್​​ನಲ್ಲಿ ಕಿಕ್ಕೇರಿ ಕೃಷ್ಣ ಮೂರ್ತಿ ದಾವೆ ಹೂಡಿದ್ದರು. ಅಶ್ವಥ್ ಅವರ ದಾಟಿಯಲ್ಲಿ ಹಾಡಬೇಕು ಎಂದು ಕೇಸ್ ಹಾಕಿದ್ದರು. ಆಗ ‘ಎಲ್ಲಾ ಶಾಲೆಗಳಲ್ಲಿ ಎಂದರೆ ಏನು’ ಎಂದು ಕೋರ್ಟ್ ಕೇಳಿತ್ತು. ಇದರ ಬಗ್ಗೆ ವಿವರಣೆ ನೀಡಲು ಹೋದಾಗ ಪ್ರಿಂಟ್ ಮಿಸ್ಟೇಕ್ ಆಗಿತ್ತು ಎಂದು ತಂಗಡಗಿ ಹೇಳಿದ್ದರು. ಆದೇಶ ಮಾಡುತ್ತೀರಿ, ವಾಪಸ್ ತೆಗೆದುಕೊಳ್ಳುತ್ತೀರಿ. ಏನಿದು ತುಘಲಕ್ ದರ್ಬಾರ್ ನಡೆಸ್ತಿದ್ದೀರಾ ಎಂದು ಅಶೋಕ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಲ್ಲದೆ, ಸಚಿವರು ಕ್ಷಮೆ ಕೇಳುವಂತೆ ವಿಪಕ್ಷಗಳು ಒತ್ತಾಯಿಸಿದ್ದವು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ