ತುಮಕೂರಿಗೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಭಾಗ್ಯ ಇಲ್ವಾ?: ಸಚಿವ ಎಂ.ಬಿ. ಪಾಟೀಲ್ ಹೇಳಿದ್ದೇನು?
ರಾಜಧಾನಿ ಬೆಂಗಳೂರಿಗೆ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತುಮಕೂರಿನಲ್ಲಿ ಸ್ಥಾಪಿಸುವ ಪ್ರಸ್ತಾವನೆ ಸದ್ಯಕ್ಕೆ ಸರ್ಕಾರದ ಮುಂದಿಲ್ಲ ಎಂದು ಸಚಿವ ಎಂ.ಬಿ. ಪಾಟೀಲ್ ಶಾಸನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಗ್ರೀನ್ಫೀಲ್ಡ್ ವಿಮಾನ ನಿಲ್ದಾಣ ನೀತಿಯ ಪ್ರಕಾರ 150 ಕಿ.ಮೀ ವಾಯು ದೂರಿನ ನಿಯಮವು ಇದಕ್ಕೆ ಅಡ್ಡಿಯಾಗಲಿದೆ. ಪ್ರಸ್ತುತ ಯಾವುದೇ ಅನುದಾನ ಹಂಚಿಕೆಯ ಯೋಜನೆ ಇಲ್ಲ ಎಂದು ಸಚಿವರು ತಿಳಿಸಿದ್ದಾರೆ.

ಬೆಂಗಳೂರು, ಆ.20: ರಾಜಧಾನಿ ಬೆಂಗಳೂರಿಗೆ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಅಥವಾ ಪ್ರತ್ಯೇಕ ವಿಮಾನ ನಿಲ್ದಾಣವನ್ನು ತುಮಕೂರು ಜಿಲ್ಲೆಯಲ್ಲಿ ಸ್ಥಾಪಿಸುವ ಯಾವುದೇ ಪ್ರಸ್ತಾವನೆ ಸದ್ಯಕ್ಕೆ ಸರ್ಕಾರದ ಮುಂದಿಲ್ಲ ಎಂದು ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಶಾಸನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ವಿಧಾನಸಭೆಯಲ್ಲಿ ತುಮಕೂರು ನಗರ ಶಾಸಕ ಜಿ.ಬಿ. ಜ್ಯೋತಿ ಗಣೇಶ್ ಕೇಳಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ.
ಕೇಂದ್ರ ಸರ್ಕಾರದ ಗ್ರೀನ್ಫೀಲ್ಡ್ ವಿಮಾನ ನಿಲ್ದಾಣ ನೀತಿಯ ಪ್ರಕಾರ, ಹಾಲಿ ಇರುವ ಸಿವಿಲ್ ವಿಮಾನ ನಿಲ್ದಾಣದಿಂದ 150 ಕಿ.ಮೀ ವಾಯು ದೂರಿನಲ್ಲಿ (Aerial Distance) ಇನ್ನೊಂದು ಹೊಸ ವಿಮಾನ ನಿಲ್ದಾಣಕ್ಕೆ ಸಾಮಾನ್ಯವಾಗಿ ಅನುಮತಿ ನೀಡಲಾಗುವುದಿಲ್ಲ.
ಒಂದು ವೇಳೆ ಈ ವ್ಯಾಪ್ತಿಯಲ್ಲಿ ವಿಮಾನ ನಿಲ್ದಾಣ ನಿರ್ಮಿಸಬೇಕಾದರೆ, ಹಾಲಿ ಇರುವ ವಿಮಾನ ನಿಲ್ದಾಣದ ಮೇಲಾಗುವ ಪ್ರಭಾವವನ್ನು ಆಧರಿಸಿ ಪ್ರತ್ಯೇಕವಾಗಿ ಪರಿಶೀಲಿಸಿ ಕೇಂದ್ರ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಮುಂಬರುವ ಬಜೆಟ್ನಲ್ಲಿ ತುಮಕೂರು ವಿಮಾನ ನಿಲ್ದಾಣಕ್ಕೆ ಹಣ ಕಾಯ್ದಿರಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ, ಅಂತಹ ಯಾವುದೇ ಯೋಜನೆ ಸರ್ಕಾರದ ಪರಿಶೀಲನೆಯಲ್ಲಿ ಇಲ್ಲದಿರುವುದರಿಂದ ಅನುದಾನ ಹಂಚಿಕೆಯ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ.
ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಕೇಂದ್ರ ಸಚಿವ ವಿ. ಸೋಮಣ್ಣ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ನಾಯಕರು ತುಮಕೂರಿನಲ್ಲೇ ಬೆಂಗಳೂರಿನ 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಬೇಕು ಎಂದು ಬಹಿರಂಗವಾಗಿ ಆಗ್ರಹಿಸಿದ್ದರು. ಆದರೆ ಸರ್ಕಾರ ಸದ್ಯಕ್ಕೆ ಅಂತಹ ಯಾವುದೇ ಯೋಜನೆ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




