
ತುಮಕೂರು, ಜುಲೈ 20: ಬೆಂಗಳೂರಿಗೆ ಪರ್ಯಾಯವಾಗಿ ತುಮಕೂರಿನಲ್ಲಿ (tumakuru) ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ (International Airport) ಕೂಗು ಮತ್ತೆ ಜೋರಾಗಿದೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸರ್ಕಾರಕ್ಕೆ ಪತ್ರ ಬರೆದು ಒತ್ತಾಯಿಸಿದ ಬೆನ್ನಲ್ಲೇ ಇದೀಗ ತುಮಕೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯೂ ಧ್ವನಿಗೂಡಿಸಿದೆ. ವಸಂತ ನರಸಾಪುರದ 2 ಸಾವಿರ ಎಕರೆ ಸರ್ಕಾರಿ ಭೂಮಿಯಲ್ಲಿ ವಿಮಾನ ನಿಲ್ದಾಣ ನಿರ್ಮಿಸಿದರೆ ಕೈಗಾರಿಕೆ, ಲಾಜಿಸ್ಟಿಕ್ಸ್ ಮತ್ತು ಉತ್ತರ ಕರ್ನಾಟಕದ ಅಭಿವೃದ್ಧಿಗೆ ಹೊಸ ವೇಗ ಸಿಗಲಿದೆ ಎಂದು ಮಂಡಳಿ ಅಭಿಪ್ರಾಯಪಟ್ಟಿದೆ.
ತುಮಕೂರಿಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬೇಡಿಕೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಬಿಡದಿ ಟೌನ್ಶಿಪ್ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತುಮಕೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒತ್ತಾಯಿಸಿದ್ದರು. ಈ ಸಂಬಂಧ ಸಿಎಂ ಡಿಕೆ ಶಿವಕುಮಾರ್ಗೆ ಪತ್ರ ಕೂಡ ಬರೆದಿದ್ದಾರೆ ಎನ್ನಲಾಗಿತ್ತು. ಈ ಬೆನ್ನಲ್ಲೇ ಇದೀಗ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ಕೂಗು ಮತ್ತೆ ಜೋರಾಗಿದೆ.
ಯಡಿಯೂರಪ್ಪ ಒತ್ತಾಯದ ಬೆನ್ನಲ್ಲೇ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ ಕೂಡ ಸರ್ಕಾರ ಮುಂದು ಮನವಿ ಇಟ್ಟಿದೆ. ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಸುಮಾರು 2 ಸಾವಿರ ಎಕರೆ ಸರ್ಕಾರಿ ಭೂಮಿ ಲಭ್ಯವಿದ್ದು, ಇಲ್ಲಿಯೇ ಕರ್ನಾಟಕದ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಬೇಕು ಎಂದು ಆಗ್ರಹಿಸಿದೆ.
ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ 2.09 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ
ಚೆನ್ನೈ ಟು ಬೆಂಗಳೂರು ಕೈಗಾರಿಕಾ ಕಾರಿಡಾರ್, ರಾಷ್ಟ್ರೀಯ ಹೂಡಿಕೆ ಮತ್ತು ಉತ್ಪಾದನಾ ವಲಯ ಹೊಂದಿರುವ ರಾಜ್ಯದ ಏಕೈಕ ಜಿಲ್ಲೆ ತುಮಕೂರು. ಜೊತೆಗೆ 48 ಹಾಗೂ 206 ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಅತ್ಯುತ್ತಮ ರಸ್ತೆ ಸಂಪರ್ಕ ಹಾಗೂ 17 ಜಿಲ್ಲೆಗಳಿಗೆ ಹೆಬ್ಬಾಗಿಲಾಗಿರುವ ಭೌಗೋಳಿಕ ಅನುಕೂಲವೂ ತುಮಕೂರಿಗಿದೆ ಎಂದು ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಪಾಂಡುರಂಗ ಹೇಳಿದ್ದಾರೆ.
ಒಟ್ಟಾರೆ ಕೈಗಾರಿಕೆ, ರಫ್ತು, ಲಾಜಿಸ್ಟಿಕ್ಸ್ ಮತ್ತು ಉದ್ಯೋಗಾವಕಾಶಗಳನ್ನು ಮತ್ತಷ್ಟು ವಿಸ್ತರಿಸಲು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅತ್ಯಗತ್ಯ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ ಅಭಿಪ್ರಾಯಪಟ್ಟಿದೆ. ಆದರೆ ತುಮಕೂರಿಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಸ್ತಾಪ ಮೊದಲಿನದಲ್ಲ. ಆದರೆ ಈ ಒತ್ತಾಯ ಈಗ ಮತ್ತೆ ಕೇಳಿ ಬಂದಿದ್ದು, ಈ ಬೇಡಿಕೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯಾವ ರೀತಿಯ ಸ್ಪಂದಿಸಲಿವೆ ಎಂಬುವುದನ್ನು ಕಾದು ನೋಡಬೇಕಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.