Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲು ದುರಂತಕ್ಕೆ ಮಸೀದಿ ಕಾರಣವೆಂದು ಫೋಟೋ ಶೇರ್: ತುಮಕೂರಿನ ಮಹಿಳೆ ಮಾಹಿತಿ ಸಂಗ್ರಹಿಸಿದ ಒಡಿಶಾ ಪೊಲೀಸರು

ಒಡಿಶಾದ ಬಾಲಾಸೋರ್​ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಸುಳ್ಳು ಸುದ್ದಿ ಹರಿದಾಡುತ್ತಿದ್ದು, ಈ ಬಗ್ಗೆ ಮಸೀದಿ ಫೋಟೋ ಹಂಚಿಕೊಂಡಿರುವ ತುಮಕೂರಿನ ಮಹಿಳೆಯ ಮಾಹಿತಿಯನ್ನು ಒಡಿಶಾ ಪೊಲೀಸರು ಸಂಗ್ರಹಿಸಿದ್ದಾರೆ. ಅಲ್ಲದೇ ಈ ಬಗ್ಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

ರೈಲು ದುರಂತಕ್ಕೆ ಮಸೀದಿ ಕಾರಣವೆಂದು ಫೋಟೋ ಶೇರ್: ತುಮಕೂರಿನ ಮಹಿಳೆ ಮಾಹಿತಿ ಸಂಗ್ರಹಿಸಿದ ಒಡಿಶಾ ಪೊಲೀಸರು
Follow us
ರಮೇಶ್ ಬಿ. ಜವಳಗೇರಾ
| Updated By: ವಿವೇಕ ಬಿರಾದಾರ

Updated on:Jun 04, 2023 | 9:51 PM

ಬೆಂಗಳೂರು: ಒಡಿಶಾದ ಬಾಲಾಸೋರ್​ನಲ್ಲಿ (Odisha Train Accident) ಶುಕ್ರವಾರ(ಜೂನ್ 02) ಸಂಜೆ ಸಂಭವಿಸಿದ ತ್ರಿವಳಿ ರೈಲು ಅಪಘಾತದಲ್ಲಿ 288 ಜನರು ಮೃತಪಟ್ಟಿದ್ದು, 900ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಘನ ಘೋರ ದುರಂತಕ್ಕೆ ವಿಶ್ವದ ದೊಡ್ಡ ದೊಡ್ಡ ನಾಯಕರು ಮಮ್ಮಲ ಮರುಗಿದ್ದಾರೆ. ಭೀಕರ ಸರಣಿ ರೈಲು ಅಪಘಾತ ಘಟನೆಗೆ ಎಲೆಕ್ಟ್ರಾನಿಕ್ ಇಂಟರ್ಲಾಕಿಂಗ್ (Electronic Interlocking) ಪ್ರಕ್ರಿಯೆಯಲ್ಲಾದ ಲೋಪವೇ ಕಾರಣ ಎಂದು ಸ್ವತಃ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೇ ಹೇಳಿದ್ದಾರೆ. ಇದರ ಮಧ್ಯೆ ಇದು ದುಷ್ಕರ್ಮಿಗಳ ಕೈವಾಡ ಎಂದೂ ಕೆಲವರು ಆರೋಪ ಮಾಡುತ್ತಿದ್ದಾರೆ. ಅಲ್ಲದೇ ದುರಂತಕ್ಕೆ ಮಸೀದಿ(mosque) ಕಾರಣ ಎಂದು ತುಮಕೂರಿನ ಶಕುಂತಲಾ ಎಸ್​ ಎನ್ನುವ ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೋಸ್ಟ್ ಇದೀಗ ವೈರಲ್ ಆಗುತ್ತಿದ್ದು, ಇದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಇನ್ನು ಪೋಸ್ಟ್ ಹಾಕಿರುವ ತುಮಕೂರಿನ ಮಹಿಳೆ ಯಾರೆಂದು ಒಡಿಶಾ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ: Electronic Interlocking: ರೈಲುದುರಂತಕ್ಕೆ ಕಾರಣವಾದ ಎಲೆಕ್ಟ್ರಾನಿಕ್ ಇಂಟರ್ಲಾಕಿಂಗ್ ಎಂದರೇನು? ಇದು ಹೇಗೆ ಕೆಲಸ ಮಾಡುತ್ತದೆ?

ಒಡಿಶಾ ಬಾಲಸೋರ್ ರೈಲು ದುರಂತಕ್ಕೆ ಜಿಹಾದಿಗಳು ಕಾರಣ ಎಂದು ಘಟನೆ ನಡೆದ ಸಮೀಪವಿರುವ ಮಸೀದಿ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದು, ಇನ್ನು ತುಮಕೂರು ಮೂಲದ ಮಹಿಳೆಯೊಬ್ಬರು ಘಟನೆಗೆ ಮಸೀದಿ ಪಕ್ಕದಲ್ಲಿ ಇರುವುದು ಕಾರಣ ಎಂದು ಬಿಂಬಿಸುವ ಅರ್ಥದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಣಗಳಲ್ಲಿ ವೈರಲ್ ಆಗಿದ್ದು, ಇದು ಒಡಿಶಾ ಪೊಲೀಸರ ಗಮನಕ್ಕೆ ಬಂದಿದೆ. ಕೂಡಲೇ ಒಡಿಶಾ ಪೊಲೀಸರು, ಮಸೀದಿ ಫೋಟೋ ಹರಿಬಿಟ್ಟ ಮಹಿಳೆ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಈ ಸಂಬಂಧ ಕರ್ನಾಟಕ ಪೊಲೀಸರಿಂದ ಮಹಿಳೆಯ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಈ ಸುಳ್ಳು ಸುದ್ದಿ ಬಗ್ಗೆ ಒಡಿಶಾ ಪೊಲೀಸರು ಟ್ವಿಟ್ಟರ್​ ಮೂಲಕ ಎಚ್ಚರಿಕೆ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಿದಾಡುತ್ತಿರುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ರೈಲು ದುರಂತದ ಬಗ್ಗೆ ಕೇಂದ್ರ ರೈಲ್ವೆ ಇಲಾಖೆ ತನಿಖೆ ನಡೆಸುತ್ತಿದೆ. ಯಾರು ಕೊಡ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಬಾರದು . ಈಗಾಗಲೇ ಘಟನೆಗೆ ಸಂಬಂಧಿಸಿದಂತೆ ಸುಳ್ಳು ಪೋಸ್ಟ್ ಮಾಡಿರುವವರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.

ರೈಲು ದುರಂತಕ್ಕೆ ಆ ಸಮುದಾಯ ಕಾರಣವೆಂದು ಘಟನೆ ಸಮೀಪದಲ್ಲಿರುವ ಮಸೀದಿ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಮೂಲಕ ಕೋಮು ಸೌಹಾರ್ದತೆಯನ್ನು ಕೆಡಿಸಲು ಪ್ರಯತ್ನಗಳು ನಡೆಯುತ್ತಿದ್ದು, ಇದರ ಮೇಲೆ ಒಡಿಶಾ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

Published On - 7:43 pm, Sun, 4 June 23