
ತುಮಕೂರು, ಸೆಪ್ಟೆಂಬರ್ 13: ‘ದೇವಣ್ಣ ದಳಂ’ ಹೆಸರಿನಲ್ಲಿ ಬೆದರಿಕೆ ಪತ್ರ ಬರೆದು ಆತಂಕ ಸೃಷ್ಟಿಸಿದ್ದ ನಕಲಿ ನಕ್ಸಲ್ ಕನಿಕಲಬಂಡೆ ವೆಂಕಟೇಶ್ ಪತ್ತೆಗಾಗಿ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ಪೊಲೀಸರು ಬೃಹತ್ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದ್ದಾರೆ. ಎಎಸ್ಪಿ ಗೋಪಾಲ್ ಹಾಗೂ ಮಧುಗಿರಿ ಡಿವೈಎಸ್ಪಿ ಮಂಜುನಾಥ್ ನೇತೃತ್ವದಲ್ಲಿ 5 ಇನ್ಸ್ಪೆಕ್ಟರ್ಗಳು ಮತ್ತು 10 ಸಬ್ ಇನ್ಸ್ಪೆಕ್ಟರ್ಗಳು ಸೇರಿದಂತೆ ಒಟ್ಟು 120 ಮಂದಿ ಪೊಲೀಸರ 5 ಪ್ರತ್ಯೇಕ ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿವೆ. ಕನಿಕಲಬಂಡೆ ಮತ್ತು ಗಂಗಸಾಗರ ಸುತ್ತಮುತ್ತಲಿನ ದಟ್ಟ ಬೆಟ್ಟಗುಡ್ಡಗಳ ಪ್ರದೇಶದಲ್ಲಿ ಡ್ರೋನ್ ಕ್ಯಾಮೆರಾಗಳನ್ನು ಬಳಸಿ ಶೋಧ ನಡೆಸಲಾಗುತ್ತಿದೆ.
ಆರೋಪಿ ವೆಂಕಟೇಶ್ ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಪ್ರತ್ಯೇಕ ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಸುಮಾರು ಒಂದು ತಿಂಗಳ ಹಿಂದೆ ಜಮೀನಿನ ಮೋಟಾರ್ನಲ್ಲಿ ಕಚ್ಚಾ ಬಾಂಬ್ ಸ್ಫೋಟಿಸಿದ್ದ ಈತ, ನಾಲ್ಕು ದಿನಗಳ ಹಿಂದೆ ಗಂಗಸಾಗರದ ನಾಗಭೂಷಣ್ ಎಂಬುವವರಿಗೆ ನಕ್ಸಲ್ ಸಂಘಟನೆ ‘ದೇವಣ್ಣ ದಳಂ’ ಹೆಸರಿನಲ್ಲಿ ಬೆದರಿಕೆ ಪತ್ರ ಬರೆದಿದ್ದ.
ಇದನ್ನೂ ಓದಿ: ರಾಜ್ಯದಲ್ಲಿ ನಕ್ಸಲ್ ನಿಗ್ರಹ ಪಡೆ ಮತ್ತೆ ರೀ ಆ್ಯಕ್ಟೀವ್? ಚಾಮರಾಜನಗರ ಬಾಂಬ್ ಬ್ಲಾಸ್ಟ್ ಪ್ರಕರಣ ಎಎನ್ಎಫ್ನಿಂದ ತನಿಖೆ?
ನಕ್ಸಲ್ ಆರೋಪಿ ವೇಂಕಟೇಶ್ ವಿರುದ್ಧದ ಕೋರ್ಟ್ನಲ್ಲಿ ದಾಖಲಾಗಿರುವ ಕೇಸ್ ನಡೆಸಲು ಹಣ ಬೇಕಾಗಿರುವುದರಿಂದ ಐದು ಲಕ್ಷ ರೂ ನೀಡುವಂತೆ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಒಂದು ವೇಳೆ ಹಣ ಕೊಡದಿದ್ದರೆ ಅನಾಹುತ ಸಂಭವಿಸಲಿದೆ ಎಂದು ಬೆದರಿಕೆ ಹಾಕಲಾಗಿತ್ತು.
ಕಚ್ಚಾ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾವಗಡ ಪೊಲೀಸರು ಈಗಾಗಲೇ ಆರೋಪಿ ವೆಂಕಟೇಶ್ನ ಪತ್ನಿ ಮತ್ತು ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಐವರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಆದರೆ ಪ್ರಮುಖ ಆರೋಪಿ ವೆಂಕಟೇಶ್ ಕಳೆದ ಒಂದೂವರೆ ತಿಂಗಳಿನಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದು, ಆತನನ್ನು ಸೆರೆಹಿಡಿಯಲು ಅರಣ್ಯ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ಜಾಲ ಬೀಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:02 pm, Sun, 13 September 26