ರಾಜ್ಯದ ನೀರಿನ ಸಮಸ್ಯೆ ಇರುವ ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು: ಸದ್ಗುರು ಶ್ರೀ ಮಧುಸೂದನ ಸಾಯಿ

ಈ ಬಾರಿ ಮಳೆ ಇಲ್ಲದೇ ಕರ್ನಾಟಕದ ಹಲವೆಡೆ ಬೆಳೆಗೆ ಮಾತ್ರವಲ್ಲ ಕುಡಿಯಲು ನೀರಿನ ಸಮಸ್ಯೆಗಳು ಎದುರಾಗಿವೆ. ಪಕ್ಕದಲ್ಲೇ ನದಿ, ಕಾಲುವೆಗಳ ಹರಿಯುತ್ತಿದ್ದರೂ ಸಹ ಹಳ್ಳಿಗಳಲ್ಲಿ ನೀರಿನ ಕೊರತೆ ಎದುರಾಗಿದೆ. ಇನ್ನು ಕೆಲವು ಊರುಗಳಲ್ಲಿ ಕುಡಿಯುವ ನೀರಿಗಾಗಿ ಕಿಲೋಮೀಟರ್ ಗಟ್ಟಲೇ ಹೋಗಬೇಕಾದು ಪರಿಸ್ಥಿತಿಯೂ ಸಹ ಇದೆ. ಇದನ್ನ ಅರಿತ ನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ ಅವರು ರಾಜ್ಯದ ನೀರಿನ ಸಮಸ್ಯೆ ಇರುವ ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ನೀಡಲು ಮುಂದಾಗಿದ್ದಾರೆ.

ರಾಜ್ಯದ ನೀರಿನ ಸಮಸ್ಯೆ ಇರುವ ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು: ಸದ್ಗುರು ಶ್ರೀ ಮಧುಸೂದನ ಸಾಯಿ
Sri Madhusudan Sai

Updated on: Aug 29, 2026 | 7:06 PM

ತುಮಕೂರು, (ಆಗಸ್ಟ್ 29): ರಾಜ್ಯದಲ್ಲಿ ಶುದ್ಧ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಲ್ಲಿ ನೀರು ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಿ ಪ್ರತಿ ಕುಟುಂಬಕ್ಕೂ ಪ್ರತಿದಿನ 20 ಲೀಟರ್ ಶುದ್ಧ ಕುಡಿಯುವ ನೀರು (Drinking Water) ಒದಗಿಸುವ ಯೋಜನೆ ರೂಪಿಸಲು ಚಿಂತಿಸಲಾಗುತ್ತಿದೆ ಎಂದು ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ (Sadguru Sri Madhusudan Sai) ತಿಳಿಸಿದರು.

ತುಮಕೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನೀರಿನ ಗುಣಮಟ್ಟದ ಸಮಸ್ಯೆ, ಅದರಲ್ಲೂ ಫ್ಲೋರೈಡ್‌ ಸಮಸ್ಯೆ ಹಲವು ಗ್ರಾಮೀಣ ಪ್ರದೇಶಗಳಲ್ಲಿ ಗಂಭೀರವಾಗಿದೆ. ಇಂತಹ ಪ್ರದೇಶಗಳಲ್ಲಿ ನೀರು ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಿ, ಸ್ಥಳೀಯ ಜನರಿಗೆ ಸುರಕ್ಷಿತ ಕುಡಿಯುವ ನೀರು ದೊರೆಯುವಂತೆ ಮಾಡುವುದು ಸಂಸ್ಥೆಯ ಉದ್ದೇಶವಾಗಿದೆ. ಫಲಾನುಭವಿ ಕುಟುಂಬಗಳಿಗೆ ಕಾರ್ಡ್ ನೀಡಲಾಗುತ್ತಿದ್ದು, ಅದರ ಮೂಲಕ ದಿನಕ್ಕೆ 20 ಲೀಟರ್ ಶುದ್ಧ ನೀರು ಪಡೆಯುವ ವ್ಯವಸ್ಥೆ ಕಲ್ಪಿಸುವ ಚಿಂತನೆ ಇದೆ ಎಂದರು.

ಶ್ರೀ ಸತ್ಯಸಾಯಿ ಬಾಬಾ ಅವರು ರಾಯಲಸೀಮೆಯ ಅನಂತಪುರ ಸೇರಿದಂತೆ ಬರಪೀಡಿತ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಬೃಹತ್ ನೀರು ಯೋಜನೆಗಳನ್ನು ಕೈಗೊಂಡಿದ್ದರು. ಅದೇ ಮಾದರಿಯಲ್ಲಿ ರಾಜ್ಯದ ಅಗತ್ಯವಿರುವ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಸಂಸ್ಥೆ ಕಾರ್ಯನಿರ್ವಹಿಸಲಿದೆ. ನೀರಾವರಿಗಿಂತಲೂ ಮೊದಲು ಜನರಿಗೆ ಸುರಕ್ಷಿತ ಕುಡಿಯುವ ನೀರು ಒದಗಿಸುವುದಕ್ಕೆ ಆದ್ಯತೆ ನೀಡಲಾಗುವುದು ಎಂದು ಸದ್ಗುರು ಮಧುಸೂದನ ಸಾಯಿ ಹೇಳಿದರು.

ನೇಪಾಳದಲ್ಲಿ ಸಂಭವಿಸಿರುವ ಭೀಕರ ದುರಂತದ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿದ ಅವರು, ಅಲ್ಲಿನ ಸಂತ್ರಸ್ತರಿಗೆ ನೆರವು ನೀಡಲು ಸಂಸ್ಥೆ ಸಿದ್ಧವಿದೆ ಎಂದರು. ನೇಪಾಳದಲ್ಲಿರುವ ಸಂಸ್ಥೆಯ ತಂಡಕ್ಕೆ ಈಗಾಗಲೇ ಅಗತ್ಯ ನೆರವು ನೀಡುವಂತೆ ಸೂಚಿಸಲಾಗಿದೆ. ಆದರೆ ದುರಂತ ಪ್ರದೇಶಗಳಿಗೆ ಸದ್ಯ ಪ್ರವೇಶ ಸಾಧ್ಯವಾಗದ ಪರಿಸ್ಥಿತಿ ಇರುವುದರಿಂದ, ಪರಿಸ್ಥಿತಿ ಸುಧಾರಿಸಿದ ಬಳಿಕ ಮನೆ ಹಾಗೂ ಕುಟುಂಬ ಸದಸ್ಯರನ್ನು ಕಳೆದುಕೊಂಡವರಿಗೆ ನೆರವು ನೀಡಲು ತಂಡವನ್ನು ಕಳುಹಿಸಲಾಗುವುದು ಎಂದು ತಿಳಿಸಿದರು.

ನೇಪಾಳದ ದುರಂತವು ಹವಾಮಾನ ಬದಲಾವಣೆಯ ಪರಿಣಾಮಗಳ ಬಗ್ಗೆ ಜಗತ್ತಿಗೆ ಮತ್ತೊಮ್ಮೆ ಎಚ್ಚರಿಕೆ ನೀಡಿದೆ. ಹಿಮಾಲಯ ಪ್ರದೇಶದಲ್ಲಿನ ಹಿಮ ಕರಗುವಿಕೆ ಸೇರಿದಂತೆ ಪರಿಸರ ಬದಲಾವಣೆಗಳು ಮುಂದಿನ ದಿನಗಳಲ್ಲಿ ಇಂತಹ ಅನಾಹುತಗಳಿಗೆ ಕಾರಣವಾಗುವ ಸಾಧ್ಯತೆಗಳಿವೆ. ಚೀನಾ, ಅಮೆರಿಕ ಸೇರಿದಂತೆ ಹಲವು ದೇಶಗಳಿಂದಲೂ ಹವಾಮಾನ ಬದಲಾವಣೆಯ ಪರಿಣಾಮಗಳ ಕುರಿತು ಎಚ್ಚರಿಕೆಗಳು ಬರುತ್ತಿವೆ. ಹೀಗಾಗಿ ಪರಿಸರ ಸಂರಕ್ಷಣೆ ಮತ್ತು ಭವಿಷ್ಯದ ದುರಂತಗಳನ್ನು ಎದುರಿಸಲು ಮುನ್ನೆಚ್ಚರಿಕೆ ಕ್ರಮಗಳಿಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us