
ತುಮಕೂರು, ಜುಲೈ 20: ರಾಜ್ಯ ಕಾಂಗ್ರೆಸ್ನಲ್ಲಿ ಪವರ್ ಶೇರಿಂಗ್ ನಡುವೆ ಸಿಎಂ ಸಿದ್ದರಾಮಯ್ಯಗೆ (Siddaramaiah) ಶನಿದೇವರ ಕಾಟ ಕಾಡಲಿದೆಯಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಸಿಎಂ ಸಿದ್ದರಾಮಯ್ಯ ಸೋಮವಾರ ಪಾವಗಡ (Pavagada) ಪಟ್ಟದ ಹೈಸ್ಕೂಲ್ ಮೈದಾನದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಶನಿಮಹಾತ್ಮ ದೇವರ ಕೋಪದಿಂದಾಗಿ ಪಾವಗಡ ಪಟ್ಟಣಕ್ಕೆ ಭೇಟಿ ಕೊಟ್ಟ ಮುಖ್ಯಮಂತ್ರಿಗಳೆಲ್ಲಾ ಅಧಿಕಾರ ಕಳಕೊಂಡಿದ್ದಾರೆ ಎಂಬ ನಂಬಿಕೆ ಇದೆ. ಈ ನಿಟ್ಟಿನಲ್ಲಿ ನಾಳೆ ಸಿಎಂ ತೆರಳುತ್ತಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಚಾಮರಾಜನಗರ ನಗರಕ್ಕೆ ಹೋಗಿ ಸೈ ಎನಿಸಿಕೊಂಡಿರುವ ಸಿಎಂ ಸಿದ್ದರಾಮಯ್ಯ ನಾಳೆ ಪಾವಗಡಕ್ಕೆ ಆಗಮಿಸುತ್ತಿದ್ದಾರೆ. ಈಗಾಗಲೇ ಎರಡು-ಮೂರು ಬಾರಿ ಪಾವಗಡ ತಾಲೂಕಿಗೆ ಭೇಟಿ ಕೊಟ್ಟಿದ್ದರೂ ಪಾವಗಡ ಪಟ್ಟಣಕ್ಕೆ ಸಿಎಂ ಹೋಗಿರಲಿಲ್ಲ. ಸದ್ಯ ಇದು ಕುತೂಹಲಕ್ಕೆ ಕಾರಣವಾಗಿದೆ.
ಇದನ್ನೂ ಓದಿ: ನಾಯಕತ್ವ ಬದಲಾವಣೆ ಇಲ್ಲ: ಸಿಎಂ ಸಿದ್ದರಾಮಯ್ಯಗೆ ಸ್ಪಷ್ಟ ಸಂದೇಶ ರವಾನಿಸಿರುವ ಕಾಂಗ್ರೆಸ್ ಹೈಕಮಾಂಡ್
ನಿನ್ನೆ ಈ ಕುರಿತಾಗಿ ಮಾತನಾಡಿದ್ದ ಪಾವಗಡ ಶಾಸಕ ವೆಂಕಟೇಶ್, ಸಿಎಂ ಸಿದ್ಧರಾಮಯ್ಯ ಅವರಿಗೆ ಆ ಭಾವನೆ ಇಲ್ಲ. ಆ ನಂಬಿಕೆಗಳನ್ನು ಅವರು ನಂಬುವುದಿಲ್ಲ ಎಂದಿದ್ದರು.
ಇನ್ನು ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಜೂನಿಯರ್ ಕಾಲೇಜು ಮೈದಾನದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮ ಆಯೋಜಿಸಲಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ.
ಮೊಳಕಾಲ್ಮೂರು, ಚೆಳ್ಳಕೆರೆ ಜೊತೆಗೆ ಪಾವಗಡಕ್ಕೆ ಸುಮಾರು 2350 ಕೋಟಿ ರೂ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ ಇದಾಗಿದೆ. ತುಂಗಭದ್ರಾ ಹಿನ್ನೀರಿನಿಂದ ಪೈಪ್ ಲೇನ್ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಸಿಎಂ ಉದ್ಘಾಟನೆ ಬಳಿಕ ಪ್ರತಿ ಊರಿಗೂ ಕುಡಿಯುವ ನೀರು ಲಭ್ಯವಾಗಲಿದೆ.
ಇದನ್ನೂ ಓದಿ: ರಾಹುಲ್ ಗಾಂಧಿ ಜತೆ ಮಾತುಕತೆಗೂ ಮುನ್ನ ತಾವೇ 5 ವರ್ಷ ಸಿಎಂ ಎಂದ ಸಿದ್ದರಾಮಯ್ಯ
ಸಿಎಂ ಜೊತೆ ಗೃಹ ಸಚಿವ ಜಿ. ಪರಮೇಶ್ವರ್, ಸತೀಶ್ ಜಾರಕಿಹೊಳಿ, ಸಂತೋಷ್ ಲಾಡ್, ಜಯಚಂದ್ರ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಭಾಗಿ ಆಗಲಿದ್ದಾರೆ. ಕಾರ್ಯಕ್ರಮಕ್ಕೆ 35 ಸಾವಿರಕ್ಕೂ ಅಧಿಕ ಜನ ಭಾಗಿಯಾಗುವ ನಿರೀಕ್ಷೆ ಇದ್ದು, ತುಮಕೂರು ಎಸ್ಪಿ ನೇತೃತ್ವದಲ್ಲಿ ಅಗತ್ಯ ಬಂದೊಬಸ್ತ್ ನಿಯೋಜನೆ ಮಾಡಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.