
ತುಮಕೂರು, ಸೆಪ್ಟೆಂಬರ್ 20: ತುಮಕೂರು ಜಿಲ್ಲೆಯ ಪಾವಗಡದಲ್ಲಿ ದುರಂತ ಘಟನೆಯೊಂದು ನಡೆದಿದೆ. ಇಬ್ಬರು ಮುದ್ದು ಮಕ್ಕಳನ್ನು ಕೊಂದ ತಾಯಿ ತಾನೂ ನೇಣಿಗೆ ಶರಣಾಗಿದ್ದಾರೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಡಪನಕೆರೆಯಲ್ಲಿ ಈ ಘಟನೆ ನಡೆದಿದೆ. 23 ವರ್ಷದ ಸರಿತಾ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಆತ್ಮಹತ್ಯೆಗೂ (Suicide) ಮುನ್ನ 4 ವರ್ಷದ ಮಗ ಕೌಶಿಕ್ ಹಾಗೂ 2 ವರ್ಷದ ಮಗು ಯುಕ್ತಿಯನ್ನು ಕೊಲೆ ಮಾಡಿದ್ದಾರೆ. ಬಳಿಕ ತಾವೂ ಸಾವನ್ನಪ್ಪಿದ್ದಾರೆ.
ಈ ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇಂದು ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಸರಿತಾ ತನ್ನ ಇಬ್ಬರು ಮಕ್ಕಳ ಹತ್ಯೆಗೈದು, ಬಳಿಕ ತಾನು ನೇಣಿಗೆ ಶರಣಾಗಿದ್ದಾರೆ. ಮೂಲತಃ ಕಡಪನಕೆರೆಯ ಸರಿತಾ ತನ್ನದೇ ಊರಿನ ಸಂತೋಷ್ ಜೊತೆ ವಿವಾಹವಾಗಿದ್ದರು. ಕಳೆದ 6 ವರ್ಷಗಳ ಹಿಂದೆ ಸಂತೋಷ್ ಜೊತೆ ವಿವಾಹವಾಗಿತ್ತು.
ಇದನ್ನೂ ಓದಿ: ದೇವನಹಳ್ಳಿ: ಮಕ್ಕಳನ್ನ ಬಕೆಟ್ನಲ್ಲಿ ಮುಳುಗಿಸಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ತಂದೆ, ತಾಯಿ ಬಚಾವ್
ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಸಂತೋಷ್ ಈ ಘಟನೆ ನಡೆದ ವೇಳೆ ಮನೆಯಲ್ಲಿರಲಿಲ್ಲ. ಮದುವೆಯಾದಾಗಿನಿಂದ ಪತಿ ಹಾಗೂ ಆತನ ಕುಟುಂಬದಿಂದ ಸರಿತಾ ಅವರಿಗೆ ಕಿರುಕುಳ ನೀಡಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ವರದಕ್ಷಿಣೆ ಕಿರುಕುಳ ನೀಡಿದ್ದ ಬಗ್ಗೆ ಶಂಕೆ ವ್ಯಕ್ತವಾಗಿದೆ. ಇದೇ ಕಾರಣಕ್ಕೆ ನೊಂದು ಮಕ್ಕಳ ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ನಡೆಸಿದ ನಂತರ ಸಾವಿನ ಹಿಂದಿನ ಕಾರಣ ತಿಳಿಯಲಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ