Tv9 Kannada News Live: ಕಪ್ಪೆ ಚಿಪ್ಪುಗಾಗಿ 10 ಜನ ಸಾವು, ರಾಜ್ಯದಲ್ಲಿ ಮಳೆ, ಪೈಲಟ್ಗೆ ಹೃದಯಾಘಾತ: ಈ ಹೊತ್ತಿನ ಸುದ್ದಿಗಳು
ಉತ್ತರ ಕನ್ನಡ ಜಿಲ್ಲೆ ಭಟ್ಕಳ ಬಳಿ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆ ಆಗಿದೆ. ಕರ್ನಾಟಕದಲ್ಲಿ ಮುಂದಿನ 7 ದಿನಗಳ ಕಾಲ ಗುಡುಗು, ಸಿಡಿಲು ಸಹಿತ ವ್ಯಾಪಕ ಮಳೆ ಸಾಧ್ಯತೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. 'ದೃಶ್ಯಂ 3' ಶತಕೋಟಿ ಕ್ಲಬ್ ಸೇರಿದ್ದು, ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಿದೆ. ಈ ಹೊತ್ತಿನ ಪ್ರಮುಖ ಸುದ್ದಿಗಳು ಹೀಗಿವೆ.

ಬೆಂಗಳೂರು, ಮೇ 24: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಬಳಿಯ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿ ಜಲಸಮಾಧಿಯಾದ (death) ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಮೃತರ ಸಂಖ್ಯೆ 10ಕ್ಕೆ ಏರಿಕೆ ಆಗಿದೆ. ಪಡುಶಿರಾಲಿ ಶಾರದಹೊಳೆಯ 14 ಜನ ನದಿಗೆ ಇಳಿದಿದ್ದರು. 12 ಮಂದಿ ಮಹಿಳೆಯರು, ಇಬ್ಬರು ಪುರುಷರು ಕಪ್ಪೆಚಿಪ್ಪುಗಳನ್ನ ತೆಗೆಯುತ್ತಿದ್ದರು. ಬೆಳಗ್ಗೆ 11 ಗಂಟೆ ಸುಮಾರಿನಲ್ಲಿ ಒಂದಷ್ಟು ಕಪ್ಪೆ ಚಿಪ್ಪುಗಳನ್ನ ಹಾಯ್ದು ನದಿ ತಟದಲ್ಲಿ ಇರಿಸಿದ್ದರು. ಆದರೆ ತಣ್ಣಗೆ ಹರಿಯುತ್ತಿದ್ದ ನದಿ ಒಡಲಿನಲ್ಲಿ, ಏಕಾಏಕಿ ನೀರಿನ ಹರಿವು ಹೆಚ್ಚಾಗಿದೆ. ಇದ್ರಿಂದಾಗಿ 10 ಮಂದಿ ಜಲಸಮಾಧಿ ಆಗಿದ್ದಾರೆ. ಒಬ್ಬರ ಶವಕ್ಕೆ ಶೋಧ ನಡೆಯುತ್ತಿದೆ. ಮೂವರು ಪವಾಡದ ರೀತಿ ಬಚಾವ್ ಆಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. (ಈ ಸುದ್ದಿಯ ಹೆಚ್ಚಿನ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ).
ಏಳು ದಿನ ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ
ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಚುರುಕುಗೊಂಡಿದ್ದು, ಮುಂದಿನ ಏಳು ದಿನಗಳ ಕಾಲ ರಾಜ್ಯಾದ್ಯಂತ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಐಎಂಡಿ ಮತ್ತು ಕೆಎಸ್ಎನ್ಡಿಎಂಸಿ ಮುನ್ಸೂಚನೆ ನೀಡಿವೆ. ಕರಾವಳಿ ಭಾಗಕ್ಕೆ ಹಸಿರು ಅಲರ್ಟ್ ಘೋಷಿಸಲಾಗಿದ್ದು, ಮೇ 25 ರಂದು ಒಳನಾಡಿನ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುವ ಮುನ್ನೆಚ್ಚರಿಕೆ ಇರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಗಂಟೆಗೆ 40-50 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಸಿಡಿಲು ಹಾಗೂ ಆಲಿಕಲ್ಲು ಮಳೆಯ ಮುನ್ಸೂಚನೆ ಇರುವುದರಿಂದ ರೈತರು ಮತ್ತು ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಹವಾಮಾನ ಇಲಾಖೆ ಜಾಗರೂಕತೆ ವಹಿಸಲು ಸೂಚಿಸಿದೆ. (ಈ ಸುದ್ದಿಯ ಹೆಚ್ಚಿನ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ).
ಅನ್ನಭಾಗ್ಯ ಅಕ್ಕಿ ವಿತರಣೆಯಲ್ಲಿ ಗೊಂದಲ: ಸರ್ಕಾರದ ವಿರುದ್ಧ ಬಿಜೆಪಿ ಕಿಡಿ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಅನ್ನಭಾಗ್ಯ’ ಗ್ಯಾರಂಟಿ ಯೋಜನೆಯಡಿ ಫಲಾನುಭವಿಗಳಿಗೆ ಅಕ್ಕಿ ವಿತರಿಸುವಲ್ಲಿ ಗೊಂದಲ ಸೃಷ್ಟಿಯಾಗಿದೆ. ನಿಯಮದ ಪ್ರಕಾರ ಪ್ರತಿ ಸದಸ್ಯರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತಲಾ 5 ಕೆಜಿಯಂತೆ ಒಟ್ಟು 10 ಕೆಜಿ ಅಕ್ಕಿ ನೀಡಬೇಕಿತ್ತು. ಆದರೆ, ಈ ಬಾರಿ ಕೇಂದ್ರ ಸರ್ಕಾರವು ಮೇ ಮತ್ತು ಜೂನ್ ತಿಂಗಳ ತನ್ನ ಪಾಲಿನ ಅಕ್ಕಿಯನ್ನು ಒಟ್ಟಿಗೆ ನ್ಯಾಯಬೆಲೆ ಅಂಗಡಿಗಳಿಗೆ ಕಳುಹಿಸಿದೆ. ಇದನ್ನು ಗಮನಿಸಿದ ರಾಜ್ಯ ಸರ್ಕಾರವು ಮೇ ತಿಂಗಳ ತನ್ನ ಪಾಲಿನ ಅಕ್ಕಿ ವಿತರಣೆಯನ್ನು ಸ್ಥಗಿತಗೊಳಿಸಿದೆ. ಇದರಿಂದಾಗಿ ನ್ಯಾಯಬೆಲೆ ಅಂಗಡಿಗಳಲ್ಲಿ ಸದ್ಯ ಕೇಂದ್ರದ ಎರಡು ತಿಂಗಳ ಅಕ್ಕಿ ಮಾತ್ರ ಸಿಗುತ್ತಿದ್ದು, ರಾಜ್ಯದ ಪಾಲು ಸಿಗದೆ ಜನರಲ್ಲಿ ಆತಂಕ ಮೂಡಿದೆ. ಈ ಬಗ್ಗೆ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. (ಈ ಸುದ್ದಿಯ ಹೆಚ್ಚಿನ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ).
ವಿಮಾನ ಪೈಲಟ್ಗೆ ಹೃದಯಾಘಾತ: ಆಮೇಲೇನಾಯ್ತು?
ಬ್ರಿಟನ್ಗೆ ಹೊರಟಿದ್ದ ಜೆಟ್2 ವಿಮಾನದ ಪೈಲಟ್ಗೆ ಹಾರಾಟದ ಮಧ್ಯೆಯೇ (30,000 ಅಡಿ ಎತ್ತರದಲ್ಲಿ) ದಿಢೀರ್ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಸಹ-ಪೈಲಟ್ ಪರಿಸ್ಥಿತಿಯನ್ನು ಅತ್ಯಂತ ಜಾಣ್ಮೆಯಿಂದ ನಿಭಾಯಿಸಿ, ವಿಮಾನವನ್ನು ಜರ್ಮನಿಯ ಫ್ರಾಂಕ್ಫರ್ಟ್ ವಿಮಾನ ನಿಲ್ದಾಣದಲ್ಲಿ ಯಶಸ್ವಿಯಾಗಿ ತುರ್ತು ಭೂಸ್ಪರ್ಶ ಮಾಡಿದ್ದಾರೆ. ಸದ್ಯ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. (ಈ ಸುದ್ದಿಯ ಹೆಚ್ಚಿನ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ).
ಅಮೆರಿಕ ವೀಸಾ ಗೊಂದಲಕ್ಕೆ ಜೈಶಂಕರ್ ಕಳವಳ
ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರೂಬಿಯೊ ಅವರೊಂದಿಗೆ ಜಂಟಿ ಜಾಗತಿಕ ಸುದ್ದಿಗೋಷ್ಠಿಯಲ್ಲಿ ವೀಸಾ ವಿಳಂಬ ಮತ್ತು ಭಾರತೀಯ ಪ್ರಯಾಣಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಮಾರ್ಕೋ ರೂಬಿಯೊ, ಈ ಕಠಿಣ ನಿಯಮಗಳು ಕೇವಲ ಭಾರತವನ್ನು ಗುರಿಯಾಗಿಸಿಕೊಂಡು ಮಾಡಿದ್ದಲ್ಲ, ಅಕ್ರಮ ವಲಸೆ ತಡೆಯಲು ಕೈಗೊಂಡ ಕ್ರಮವಾಗಿದ್ದು, ಕಾನೂನುಬದ್ಧ ಭಾರತೀಯ ಪ್ರವಾಸಿಗರಿಗೆ ತೊಂದರೆಯಾಗದಂತೆ ಸ್ಪಂದಿಸುವುದಾಗಿ ಭರವಸೆ ನೀಡಿದ್ದಾರೆ. (ಈ ಸುದ್ದಿಯ ಹೆಚ್ಚಿನ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ).
‘ದೃಶ್ಯಂ 3’ ಶತಕೋಟಿ ಕ್ಲಬ್ಗೆ
ಜೀತು ಜೋಸೆಫ್ ನಿರ್ದೇಶನದಲ್ಲಿ ಮೂಡಿಬಂದಿರುವ ಮಲಯಾಳಂ ನಟ ಮೋಹನ್ಲಾಲ್ ಅವರ ಬಹುನಿರೀಕ್ಷಿತ ಫ್ಯಾಮಿಲಿ ಕ್ರೈಮ್ ಥ್ರಿಲ್ಲರ್ ಸಿನಿಮಾ ‘ದೃಶ್ಯಂ 3’ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಿದೆ. ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದರೂ, ಚಿತ್ರವು ಬಿಡುಗಡೆಯಾದ ಕೇವಲ ಮೂರೇ ದಿನಗಳಲ್ಲಿ ಜಾಗತಿಕವಾಗಿ 100 ಕೋಟಿ ರೂ ಗಳಿಕೆಯ ಗಡಿಯನ್ನು ದಾಟುವ ಮೂಲಕ ದಾಖಲೆ ಬರೆದಿದೆ. ಪ್ರಸ್ತುತ ಚಿತ್ರದ ಒಟ್ಟು ಜಾಗತಿಕ ಕಲೆಕ್ಷನ್ ಸುಮಾರು 117.17 ಕೋಟಿ ರೂ. ತಲುಪಿದ್ದು, ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. (ಈ ಸುದ್ದಿಯ ಹೆಚ್ಚಿನ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ).
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.





