Breaking News Today Live: ಅತಿಯಾದ ನಂಬಿಕೆಯೇ ಆಘಾತ ತಂದಿದೆ: ಹೆಚ್.ಡಿ.ಕುಮಾರಸ್ವಾಮಿ
Karnataka News Today Live Updates: ಪ್ರತಿಷ್ಠೆಯಾಗಿದ್ದ ಪರಿಷತ್ ಚುನಾವಣೆ ಭಾರೀ ಕುತೂಹಲ ಮೂಡಿಸಿತ್ತು. ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ನಡುವೆ ಭಾರೀ ಪೈಪೋಟಿ ಏರ್ಪಡಿತ್ತು . ಇದೀಗ ಕಾಂಗ್ರೆಸ್ ಗೆಲುವಿನ ಪತಾಕೆ ಹಾರಿಸಿದೆ. ಇದರ ನಡುವೆ ಜೆಡಿಎಸ್ಗೆ ಭಾರೀ ಮುಖಭಂಗವಾಗಿದೆ. ಇನ್ನು ಇರಾನ್, ಅಮೆರಿಕ ಶಾಂತಿ ಒಪ್ಪಂದದ ಬಗ್ಗೆ ಜಾಗತಿಕ ಮಟ್ಟದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಮತ್ತೊಂದು ಕಡೆ ತಮಿಳುನಾಡು ಹಾಗೂ ಕರ್ನಾಟಕದ ನಡುವೆ ಮೇಕೆದಾಟು ಜಲಾಶಯ ಯೋಜನೆ ಬಗ್ಗೆಯೂ ಬಿಸಿಬಿಸಿ ಚರ್ಚೆಗಳು ನಡೆಯುತ್ತಿದೆ.

LIVE NEWS & UPDATES
-
ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸ್ಥಳದಲ್ಲೇ ಸಾವು!
ರಾಜಧಾನಿಯ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರ ಮೇಲೆ ಬಿಎಂಟಿಸಿ (BMTC) ಎಲೆಕ್ಟ್ರಿಕ್ ಬಸ್ ಹರಿದ ಪರಿಣಾಮ, ಅವರು ಸ್ಥಳದಲ್ಲೇ ಅತ್ಯಂತ ದಾರುಣವಾಗಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರನ್ನು ಗಾರೆ ಕೆಲಸ ಮಾಡಿಕೊಂಡಿದ್ದ ರಾಜು (58) ಎಂದು ಗುರುತಿಸಲಾಗಿದೆ. ಇವರು ಎಂದಿನಂತೆ ತಮ್ಮ ದೈನಂದಿನ ಕೆಲಸ ಮುಗಿಸಿಕೊಂಡು ಜ್ಞಾನಭಾರತಿ ಸಮೀಪದ ಮಂಗನಹಳ್ಳಿ ಕ್ರಾಸ್ (Manganahalli Cross) ಬಳಿ ರಸ್ತೆಯನ್ನು ದಾಟಲು ಯತ್ನಿಸುತ್ತಿದ್ದರು ಎನ್ನಲಾಗಿದೆ.
-
ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು; ಮೂವರಿಗೆ ಗಂಭೀರ ಗಾಯ!
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮುಡಿಗುಂಡ ಸೇತುವೆ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ನಿಯಂತ್ರಣ ತಪ್ಪಿದ ಕಾರು ಸೇತುವೆಯ ತಡೆಗೋಡೆಗೆ ಭೀಕರವಾಗಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ಮೃತರು ಕೊಳ್ಳೇಗಾಲ ನ್ಯಾಯಾಲಯದ (Kollegal Court) ಸಿಬ್ಬಂದಿ ಎಂದು ಗುರುತಿಸಲಾಗಿದೆ.
-
-
ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ಗೆ ಸ್ಪಷ್ಟ ಬಹುಮತ
ರಾಜ್ಯ ರಾಜಕೀಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷವು ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ. ವಿಧಾನ ಪರಿಷತ್ (Legislative Council) ಚುನಾವಣೆಯಲ್ಲಿ ಕಾಂಗ್ರೆಸ್ನ ಐವರು ಅಭ್ಯರ್ಥಿಗಳು ಭರ್ಜರಿ ಜಯ ದಾಖಲಿಸುವುದರೊಂದಿಗೆ, ಮೇಲ್ಮನೆಯಲ್ಲಿ ಕಾಂಗ್ರೆಸ್ ಪಕ್ಷದ ಬಲ ಗಣನೀಯವಾಗಿ ಹೆಚ್ಚಾಗಿದ್ದು, ಸ್ಪಷ್ಟ ಬಹುಮತದ ಗಡಿಯನ್ನು ದಾಟಿದೆ.
-
ಜಿ.ಟಿ. ದೇವೇಗೌಡರಿಗೆ ಪರೋಕ್ಷ ಟಾಂಗ್ ಕೊಟ್ಟ ಕುಮಾರಸ್ವಾಮಿ
ವಿಧಾನ ಪರಿಷತ್ ಚುನಾವಣೆಯ ಮತದಾನ ಮುಕ್ತಾಯಗೊಂಡ ಬೆನ್ನಲ್ಲೇ ಮೈಸೂರಿನಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ. ಕುಮಾರಸ್ವಾಮಿ ಅವರು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸುವಂತಹ ಹೇಳಿಕೆಗಳನ್ನು ನೀಡಿದ್ದಾರೆ. “ಚುನಾವಣೆಯ ಫಲಿತಾಂಶ ನನಗೊಂದು ಹೊಸ ಅನುಭವ ನೀಡಿದ್ದು, ಸ್ವಂತ ಪಕ್ಷದವರೇ ನನಗೆ ದೊಡ್ಡ ಸಂದೇಶ ಕೊಟ್ಟಿದ್ದಾರೆ” ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. ಜೊತೆಗೆ ಜೆಡಿಎಸ್ ಹಿರಿಯ ನಾಯಕ ಜಿ.ಟಿ. ದೇವೇಗೌಡ ಅವರ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.
ಬೆಂಗಳೂರು, ಜೂ.19: ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಯಾಗಿದ್ದ, ವಿಧಾನ ಪರಿಷತ್ ಚುನಾವಣೆಗೆ ಕೊನೆಗೂ ತೆರೆಬಿದ್ದಿದೆ. ಆಡಳಿತ ಪಕ್ಷ ಕಾಂಗ್ರೆಸ್ಗೆ ಗೆಲುವಿನ ಸಂತಸ ತಂದರೆ, ವಿರೋಧ ಪಕ್ಷಗಳಿಗೆ ಸೋಲಿನ ರುಚಿ ಕಂಡಿದೆ. ಅದರಲ್ಲೂ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಇದ್ದ ಪೈಪೋಟಿಯಲ್ಲಿ ಜೆಡಿಎಸ್ ಸೋತಿದೆ. ಈ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ತಮ್ಮದೇ ಪಕ್ಷದ ಶಾಸಕರ ವಿರೋಧ ಅಸಮಾನಧಾನ ವ್ಯಕ್ತಪಡಿಸಿದ್ದಾರೆ. ಇನ್ನೊಂದು ಕಡೆ ಈ ಬಗ್ಗೆ ರಾಷ್ಟ್ರ ರಾಜಕಾರಣದಲ್ಲೂ ಭಾರೀ ಚರ್ಚೆಗಳು ನಡೆದಿದೆ. ಮೇಕೆದಾಟು ಜಲಾಶಯ ಯೋಜನೆಗೆ ಸಂಬಂಧಿಸಿ ತಮಿಳುನಾಡು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ, ಉಭಯ ರಾಜ್ಯಗಳ ನಡುವೆ ರಾಜಕೀಯ ಸಂಘರ್ಷ ತಾರಕಕ್ಕೇರಿದೆ. ತಮಿಳುನಾಡಿನ ನೂತನ ಸಿಎಂ ಜೋಸೆಫ್ ವಿಜಯ್ ಸರ್ಕಾರವು ಯೋಜನೆಯನ್ನು ಬಲವಾಗಿ ವಿರೋಧಿಸುತ್ತಿದ್ದರೆ, ಇತ್ತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮಿಳುನಾಡಿನ ಕ್ಯಾತೆಗೆ ತಕ್ಕ ತಿರುಗೇಟು ನೀಡಿದ್ದಾರೆ. ಜಾಗತಿಕ ಮಟ್ಟದಲ್ಲಿ ಯುದ್ಧ ಒಪ್ಪಂದ ಹಾಗೂ ಶಾಂತಿ ಸ್ಥಾಪನೆಗೆ ಭಾರೀ ಚರ್ಚೆಗಳು ನಡೆಯುತ್ತಿದೆ. ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿದೆ ನೋಡಿ.
Published On - Jun 19,2026 9:03 AM




