
ಇಂದು ಮಧ್ಯಾಹ್ನ 2ರಿಂದ 5.15ರವರೆಗೆ ನೀಟ್ ಮರುಪರೀಕ್ಷೆ ನಡೆಯಲಿದ್ದು, ಬೆಳಗ್ಗೆ 11ರಿಂದ ಮಧ್ಯಾಹ್ನ 1.30ರೊಳಗೆ ಪರೀಕ್ಷಾ ಕೇಂದ್ರಕ್ಕೆ ಬರುವಂತೆ ಪರೀಕ್ಷಾರ್ಥಿಗಳಿಗೆ ಸೂಚಿಸಲಾಗಿದೆ. ಮಧ್ಯಾಹ್ನ 1.30ರ ನಂತರ ಬರುವ ವಿದ್ಯಾರ್ಥಿಗಳಿಗೆ ಪ್ರವೇಶ ಇರುವುದಿಲ್ಲ. ವಿಕಲಚೇತನ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಹೆಚ್ಚುವರಿ ಸಮಯ ಅಂದರೆ 6.20ರವರೆಗೆ ಅವಖಾಶ ಇರಲಿದೆ. ದೇಶ-ವಿದೇಶಗಳ 565 ನಗರಗಳಲ್ಲಿ ನೀಟ್ ಮರು ಪರೀಕ್ಷೆ ನಡೆಯಲಿದ್ದು, 22.7 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗೆ ಸಮಸ್ಯೆ ಆಗದಂತೆ 2ಲಕ್ಷಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಸಿಸಿಟಿವಿ, ಜಿಪಿಎಸ್ ಟ್ರ್ಯಾಕಿಂಗ್, ಬಯೋಮೆಟ್ರಿಕ್ ಪರಿಶೀಲನೆ ಕಡ್ಡಾಯಗೊಳಿಸಲಾಗಿದ್ದು, ಬಯೋಮೆಟ್ರಿಕ್ ದೋಷವಿದ್ದಲ್ಲಿ ಮ್ಯಾನುವಲ್ ವೆರಿಫಿಕೇಶನ್ಗೆ NTA ಅವಕಾಶ ನೀಡಿದೆ.
ತುಮಕೂರು ನಗರದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ ಹಾಗೂ ಆಯುಷ್ ಇಲಾಖೆಯಿಂದ ಅಂತಾರಾಷ್ಟ್ರೀಯ ಯೋಗದಿನಾಚರಣೆ ಕಾರ್ಯಕ್ರಮ ನಡೆದಿದೆ. ಕೇಂದ್ರ ಸಚಿವ ವಿ. ಸೋಮಣ್ಣ, ಶಾಸಕರಾದ ಜ್ಯೋತಿಗಣೇಶ್, ಸುರೇಶ್ ಗೌಡ, ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಸೇರಿದಂತೆ ವಿವಿಧ ಗಣ್ಯರು ಯೋಗಾಭ್ಯಾಸದಲ್ಲಿ ಭಾಗಿಯಾಯಾಗಿದ್ದಾರೆ.
ಮಂಡ್ಯ ನಗರದ ಪಿಇಟಿ ಆವರಣದಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಿದ್ದಾರೆ. ಬಳಿಕ ಸಾರ್ವಜನಿಕರ ಜೊತೆ ಕುಮಾರಸ್ವಾಮಿ ಯೋಗ ಮಾಡಿದ್ದು, ಈ ವೇಳೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಸಾವಿರಾರು ಜನ ಭಾಗಿಯಾಗಿದ್ದರು. ಚಂದ್ರವನ ಆಶ್ರಯದ ತ್ರಿನೇತ್ರ ಶಿವಯೋಗಿ ಸ್ವಾಮೀಜಿ, ಡಿಸಿ ಡಾ.ಕುಮಾರ್ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ, ಜಿಪಂ ಸಿಇಒ ನಂದಿನಿ ಉಪಸ್ಥಿತರಿದ್ದರು.
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ಯೋಗ ದಿನಾಚರಣೆ ಆಚರಿಸಲಾಗಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಡಿಸಿ ಮೊಹಮ್ಮದ್ ರೋಷನ್, ಕಮಿಷನರ್ ಭೂಷಣ ಬೋರಸೆ, ಜಿ.ಪಂ. ಸಿಇಒ ರಾಹುಲ್ ಶಿಂಧೆ, ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸೇರಿ ಇತರ ಅಧಿಕಾರಿಗಳು ಭಾಗಿಯಾಗಿದ್ದಾರೆ.
12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ಆಯುಷ್ ಇಲಾಖೆ ವತಿಯಿಂದ ವಿಧಾನಸೌಧ ಮುಂಭಾಗದ ಗ್ರ್ಯಾಂಡ್ ಸ್ಟೆಪ್ಸ್ ಮೇಲೆ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಚಾಲನೆ ನೀಡಿದ್ದು, ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ, ಆರೋಗ್ಯ ಇಲಾಖೆ ಸಚಿವ ಯು. ಟಿ. ಖಾದರ್, ಆಯುಷ್ ಇಲಾಖೆ ಆಯುಕ್ತ ಡಾ. ಸುನೀಲ್ , ಸಿನಿ ತಾರೆಯರಾದ ಸುಧಾರಾಣಿ, ವಸಿಷ್ಠ ಸಿಂಹ, ಹರಿಪ್ರಿಯ ಸೇರಿದಂತೆ ಹಲವರು ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗಿಯಾಗಿದ್ದಾರೆ.
ವಿಶ್ವಯೋಗ ದಿನಾಚರಣೆ ಹಿನ್ನೆಲೆ ಮುಂಜಾನೆ 5ರಿಂದಲೇ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಸಂಚಾರ ಆರಂಭವಾಗಿದೆ. ಉಳಿದ ದಿನಗಳಲ್ಲಿ ಭಾನುವಾರ ಬೆಳಗ್ಗೆ 7 ಗಂಟೆಗೆ ಮೆಟ್ರೋ ಓಡಾಟ ಶುರುವಾಗುತ್ತಿತ್ತು. ಆದರೆ ಇಂದು ಪ್ರಯಾಣಿಕರ ಅನುಕೂಲಕ್ಕಾಗಿ ಬೇಗ ಆರಂಭಿಸಲಾಗಿದೆ.
ಮಾನವನ ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ಯೋಗ ದಿವ್ಯೌಷಧ. ಯೋಗ ಕೇವಲ ಆಸನ ಮಾತ್ರವಲ್ಲ, ಮನುಷ್ಯರನ್ನು ಒಗ್ಗೂಡಿಸುತ್ತೆ ಎಂದು ಕೋಲ್ಕತ್ತಾದಲ್ಲಿ ನಡೆದ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ. ಸಮತೋಲಿತ ಜೀವನಕ್ಕಾಗಿ ಯೋಗ ಅತಿ ಮುಖ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. ಭಾರತ ಸರ್ಕಾರವು ಈ ವರ್ಷದ ಅಂತಾರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮವನ್ನು ಪಶ್ಚಿಮ ಬಂಗಾಳದ ಕೊಲ್ಕತ್ತಾದ ಐತಿಹಾಸಿಕ ರೆಡ್ ರೋಡ್ನಲ್ಲಿ ಆಯೋಜಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಪದಗ್ರಹಣಮಾಡುತ್ತಿದ್ದು, ಮತ್ತೊಂದೆಡೆ ದೇಶಾದ್ಯಂತ ಇಂದು ನೀಟ್ ಮರುಪರೀಕ್ಷೆ ನಡೆಯುತ್ತಿದೆ. ರಾಜ್ಯ, ದೇಶ, ಅಂತಾರಾಷ್ಟ್ರೀಯ, ಸಿನಿಮಾ, ಕ್ರೀಡೆ ಸೇರಿ ಈ ದಿನದ ಪ್ರಮುಖ ಸುದ್ದಿಗಳ ಹೈಲೆಟ್ಸ್ ಇಲ್ಲಿದೆ.
Published On - 7:01 am, Sun, 21 June 26