TV9 Kannada News Live: ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥನ ಖಡಕ್ ಎಚ್ಚರಿಕೆ! ಇಲ್ಲಿದೆ ಈ ಹೊತ್ತಿನ ಪ್ರಮುಖ ಸುದ್ದಿಗಳು

ಬೆಂಗಳೂರಿನಲ್ಲಿ 2,000 ಕೋಟಿ ರೂ. ಮೊತ್ತದ ಬೃಹತ್ ನಕಲಿ ಐಟಿಸಿ ಹಗರಣ ಭೇದಿಸಿರುವ ವಾಣಿಜ್ಯ ತೆರಿಗೆ ಇಲಾಖೆಯು 'ನ್ಯಾಷನಲ್ ಟ್ರಾವೆಲ್ಸ್'ಗೆ ನೋಟಿಸ್ ನೀಡಿದೆ. ಮತ್ತೊಂದೆಡೆ, ಉಭಯ ದೇಶಗಳ ಬಾಂಧವ್ಯ ಮತ್ತು ಮುಕ್ತ ವ್ಯಾಪಾರ ಒಪ್ಪಂದ ಬಲಪಡಿಸಲು ಪ್ರಧಾನಿ ಮೋದಿ ನೆದರ್‌ಲ್ಯಾಂಡ್ಸ್‌ಗೆ ಭೇಟಿ ನೀಡಿದ್ದಾರೆ. ಇದೇ ವೇಳೆ, ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಭಯೋತ್ಪಾದನೆ ನಿಲ್ಲಿಸದಿದ್ದರೆ ಭೂಪಟದಲ್ಲಿ ಉಳಿಯಬೇಕೇ ಎಂದು ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಎಲ್ಲಾ ಪ್ರಮುಖ ವಿದ್ಯಮಾನಗಳ ಸಮಗ್ರ ವರದಿ ಇಲ್ಲಿದೆ.

TV9 Kannada News Live: ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥನ ಖಡಕ್ ಎಚ್ಚರಿಕೆ! ಇಲ್ಲಿದೆ ಈ ಹೊತ್ತಿನ ಪ್ರಮುಖ ಸುದ್ದಿಗಳು
ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥನ ಖಡಕ್ ಎಚ್ಚರಿಕೆ! ಇಲ್ಲಿದೆ ಈ ಹೊತ್ತಿನ ಪ್ರಮುಖ ಸುದ್ದಿಗಳು

Updated on: May 16, 2026 | 2:44 PM

ಬೆಂಗಳೂರು, ಮೇ 16: ಬೆಂಗಳೂರಿನಲ್ಲಿ ಬರೋಬ್ಬರಿ 2,000 ಕೋಟಿ ರೂಪಾಯಿ ಮೊತ್ತದ ಬೃಹತ್ ನಕಲಿ ಐಟಿಸಿ ತೆರಿಗೆ ವಂಚನೆ ಜಾಲವನ್ನು ವಾಣಿಜ್ಯ ತೆರಿಗೆ ಇಲಾಖೆ ಭೇದಿಸಿದ್ದು, ಸಚಿವ ಜಮೀರ್ ಖಾನ್  (Zameer Khan) ಅವರ ‘ನ್ಯಾಷನಲ್ ಟ್ರಾವೆಲ್ಸ್’ಗೆ ನೋಟಿಸ್ ನೀಡಲಾಗಿದೆ. ಇನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಮತ್ತು ಇಯು ನಡುವಿನ ಮುಕ್ತ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ ನೆದರ್‌ಲ್ಯಾಂಡ್ಸ್‌ನ ಆಮ್ಸ್ಟರ್‌ಡ್ಯಾಮ್‌ಗೆ ಭೇಟಿ ನೀಡಿದ್ದಾರೆ. ಮತ್ತೊಂದೆಡೆ, ಪಾಕ್ ಪ್ರಾಯೋಜಿತ ಭಯೋತ್ಪಾದನೆಗೆ ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಪಾಕಿಸ್ತಾನಕ್ಕೆ ಜಾಗತಿಕ ಭೂಪಟದ ಇತಿಹಾಸ ನೆನಪಿಸಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಮುಖ್ಯಾಂಶಗಳು

  • ಭೂಪಟದಲ್ಲಿ ಉಳಿಯಬೇಕೇ ಎಂದು ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ ಸೇನಾ ಮುಖ್ಯಸ್ಥ.
  • ಬೆಂಗಳೂರಿನಲ್ಲಿ ಎರಡು ಸಾವಿರ ಕೋಟಿಯ ನಕಲಿ ಐಟಿಸಿ ತೆರಿಗೆ ವಂಚನೆ ಜಾಲ ಪತ್ತೆ.
  • ಮುಕ್ತ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ ನೆದರ್‌ಲ್ಯಾಂಡ್ಸ್‌ಗೆ ಭೇಟಿ ನೀಡಿದ ಪ್ರಧಾನಿ ಮೋದಿ.

ಪಾಕಿಸ್ತಾನಕ್ಕೆ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಕಠಿಣ ಸಂದೇಶ

ಪಾಕಿಸ್ತಾನ ಪ್ರಾಯೋಜಿತ ಗಡಿಯಾಚೆಗಿನ ಭಯೋತ್ಪಾದನೆಗೆ ಸಂಬಂಧಿಸಿದಂತೆ ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ನೆರೆರಾಷ್ಟ್ರಕ್ಕೆ ಅತ್ಯಂತ ಕಠಿಣ ಹಾಗೂ ನೇರ ಸಂದೇಶ ರವಾನಿಸಿದ್ದಾರೆ. ದೆಹಲಿಯಲ್ಲಿ ನಡೆದ ‘ಸೇನಾ ಸಂವಾದ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಾಕಿಸ್ತಾನವು ತನ್ನ ನೆಲದಲ್ಲಿ ಉಗ್ರರಿಗೆ ಆಶ್ರಯ ನೀಡುವುದನ್ನು ಮತ್ತು ಭಾರತದ ವಿರುದ್ಧ ಸಂಚು ರೂಪಿಸುವುದನ್ನು ಮುಂದುವರಿಸುವ ಮುನ್ನ, ತಾನು ಜಗತ್ತಿನ ಭೂಪಟ ಮತ್ತು ಇತಿಹಾಸದ ಭಾಗವಾಗಿ ಉಳಿಯಬೇಕೇ ಅಥವಾ ಬೇಡವೇ ಎಂಬುದನ್ನು ಮೊದಲು ನಿರ್ಧರಿಸಿಕೊಳ್ಳಲಿ ಎಂದು ಖಡಕ್ ಆಗಿ ಎಚ್ಚರಿಸಿದ್ದಾರೆ. ಸದಾ ಸೈನಿಕರನ್ನು ಪ್ರಚೋದಿಸುವ ಹಾಗೂ ಗಡಿಯಲ್ಲಿ ಉಗ್ರರನ್ನು ನುಸುಳಿಸುವ ಪಾಕಿಸ್ತಾನದ ಕುತಂತ್ರಕ್ಕೆ ಭಾರತ ಇನ್ನು ಮುಂದೆ ಮೌನವಾಗಿ ಕೂರುವುದಿಲ್ಲ, ಬದಲಿಗೆ ಅತ್ಯಂತ ಪ್ರಖರ ಮತ್ತು ತಕ್ಕ ಪ್ರತ್ಯುತ್ತರ ನೀಡಲಿದೆ ಎಂದು ಸೇನಾ ಮುಖ್ಯಸ್ಥರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ ಭಯೋತ್ಪಾದನೆ ನಿಲ್ಲಿಸದಿದ್ದರೆ ಇತಿಹಾಸ, ಭೂಪಟದಿಂದ ಪಾಕಿಸ್ತಾನ ಮರೆಯಾಗಲಿದೆ: ಭಾರತೀಯ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!

ಬೆಂಗಳೂರಿನಲ್ಲಿ 2,000 ಕೋಟಿ ರೂ. ನಕಲಿ ಐಟಿಸಿ ಹಗರಣ

ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಸುಮಾರು 2,000 ಕೋಟಿ ರೂಪಾಯಿ ಮೊತ್ತದ ಬೃಹತ್ ನಕಲಿ ಐಟಿಸಿ (ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್) ವಂಚನೆ ಜಾಲವನ್ನು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಭೇದಿಸಿದ್ದಾರೆ. ಈ ಹಗರಣದ ತನಿಖೆಯ ಭಾಗವಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಸೇರಿದ್ದೆನ್ನಲಾದ ‘ನ್ಯಾಷನಲ್ ಟ್ರಾವೆಲ್ಸ್’ ಸಂಸ್ಥೆಗೆ ಇಲಾಖೆ ನೋಟಿಸ್ ಜಾರಿ ಮಾಡಿದೆ. ಮಹಾರಾಷ್ಟ್ರದ ಸ್ಕ್ರಾಪ್ ದಲ್ಲಾಳಿಗಳು ತೆರಿಗೆ ವಂಚಿಸಲು ಕರ್ನಾಟಕದಿಂದ ‘ಟಂಗ್‌ಸ್ಟನ್ ಕಾರ್ಬೈಡ್ ಸ್ಕ್ರ್ಯಾಪ್’ ಆಮದು ಮಾಡಿಕೊಳ್ಳುತ್ತಿರುವಂತೆ ನಕಲಿ ಇ-ವೇ ಬಿಲ್‌ಗಳನ್ನು ಸೃಷ್ಟಿಸುತ್ತಿದ್ದರು. ಈ ನಕಲಿ ಬಿಲ್‌ಗಳ ಸಾಗಾಟಕ್ಕೆ ನ್ಯಾಷನಲ್ ಟ್ರಾವೆಲ್ಸ್‌ನ ಲಾರಿಗಳನ್ನು ಬಳಸಿಕೊಳ್ಳಲಾದ ಆರೋಪದ ಮೇಲೆ ಈ ನೋಟಿಸ್ ನೀಡಲಾಗಿದೆ. ಭೌತಿಕವಾಗಿ ಯಾವುದೇ ಸರಕು ಇರದೇ ಕೇವಲ ಬಿಲ್‌ಗಳು ಮಾತ್ರ ಹಸ್ತಾಂತರಗೊಳ್ಳುತ್ತಿದ್ದವು. ತನಿಖೆಯಲ್ಲಿ ಇಂತಹ 127 ನಕಲಿ ಸಂಸ್ಥೆಗಳ ಬೃಹತ್ ಜಾಲ ಪತ್ತೆಯಾಗಿದ್ದು, ಸದ್ಯ ಕೋರ್ಟ್‌ ಆದೇಶದ ಮೇರೆಗೆ 7 ಜನರನ್ನು ಬಂಧಿಸಲಾಗಿದೆ.

ಇದನ್ನೂ ಓದಿ 2 ಸಾವಿರ ಕೋಟಿ ರೂ. ನಕಲಿ ಐಟಿಸಿ ಹಗರಣದಲ್ಲಿ ಸಚಿವ ಜಮೀರ್‌ ಖಾನ್‌ ಸಂಸ್ಥೆಗೂ ಲಿಂಕ್: ‘ನ್ಯಾಷನಲ್ ಟ್ರಾವೆಲ್ಸ್’ಗೆ ನೋಟಿಸ್!

ನೆದರ್‌ಲ್ಯಾಂಡ್ಸ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಪ್ರಧಾನಿ ನರೇಂದ್ರ ಮೋದಿ ಅವರು ನೆದರ್‌ಲ್ಯಾಂಡ್ಸ್‌ ದೇಶಕ್ಕೆ ಅಧಿಕೃತ ಭೇಟಿ ನೀಡಿದ್ದು, ಇದರ ಭಾಗವಾಗಿ ಆಮ್ಸ್ಟರ್‌ಡ್ಯಾಮ್‌ ನಗರಕ್ಕೆ ಬಂದಿಳಿದಿದ್ದಾರೆ. ಈ ಕುರಿತು ‘ಎಕ್ಸ್’ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಪ್ರಧಾನಿ ಮೋದಿ, ಭಾರತ ಮತ್ತು ಯುರೋಪಿಯನ್ ಯೂನಿಯನ್ (EU) ನಡುವಿನ ಮುಕ್ತ ವ್ಯಾಪಾರ ಒಪ್ಪಂದವು ಉಭಯ ದೇಶಗಳ ವ್ಯಾಪಾರ ಮತ್ತು ಹೂಡಿಕೆ ಸಂಬಂಧಗಳಿಗೆ ಹೊಸ ಉತ್ತೇಜನವನ್ನು ನೀಡಿರುವ ಮಹತ್ವದ ಸಮಯದಲ್ಲಿ ತಾವು ಈ ಭೇಟಿ ನೀಡಿರುವುದಾಗಿ ತಿಳಿಸಿದ್ದಾರೆ. ಈ ಪ್ರವಾಸವು ಭಾರತ ಹಾಗೂ ನೆದರ್‌ಲ್ಯಾಂಡ್ಸ್ ನಡುವೆ ಸೆಮಿಕಂಡಕ್ಟರ್, ಜಲ ಸಂಪನ್ಮೂಲ ನಿರ್ವಹಣೆ, ಶುದ್ಧ ಇಂಧನ ಮತ್ತು ಇತರ ಪ್ರಮುಖ ತಾಂತ್ರಿಕ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತು ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಅತ್ಯುತ್ತಮ ಅವಕಾಶವನ್ನು ಒದಗಿಸುತ್ತದೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ ನೆದರ್‌ಲ್ಯಾಂಡ್ಸ್‌ ತಲುಪಿದ ಪ್ರಧಾನಿ ನರೇಂದ್ರ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us