Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕ್ಸಲ್ ಎನ್​ಕೌಂಟರ್: ಕರ್ನಾಟಕ, ಕೇರಳ, ತಮಿಳುನಾಡು ಪೊಲೀಸರಿಗೆ ಬೇಕಾಗಿದ್ದ ವಿಕ್ರಂ ಗೌಡ ಹಿನ್ನೆಲೆ ಇಲ್ಲಿದೆ

Naxal Encounter: ಉಡುಪಿ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಹತ್ಯೆಯಾಗಿದ್ದಾನೆ. ಈತ ಕರ್ನಾಟಕ, ಕೇರಳ ಮತ್ತು ತಮಿಳುನಾಡು ಪೊಲೀಸರಿಗೆ ಬೇಕಾಗಿದ್ದ. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವಿರೋಧಿ ಹೋರಾಟದಿಂದ ನಕ್ಸಲಿಸಂಗೆ ಸೇರಿದ ವಿಕ್ರಂ ಗೌಡನ ಹಿನ್ನೆಲೆ ಇಲ್ಲಿದೆ.

ನಕ್ಸಲ್ ಎನ್​ಕೌಂಟರ್: ಕರ್ನಾಟಕ, ಕೇರಳ, ತಮಿಳುನಾಡು ಪೊಲೀಸರಿಗೆ ಬೇಕಾಗಿದ್ದ ವಿಕ್ರಂ ಗೌಡ ಹಿನ್ನೆಲೆ ಇಲ್ಲಿದೆ
ವಿಕ್ರಂ ಗೌಡ ಸಂಗ್ರಹ ಚಿತ್ರಗಳು
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: Ganapathi Sharma

Updated on:Nov 19, 2024 | 12:02 PM

ಚಿಕ್ಕಮಗಳೂರು, ನವೆಂಬರ್ 19: ನಕ್ಸಲ್ ನಿಗ್ರಹ ಪಡೆ ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆಸಿದ ಎನ್​ಕೌಂಟರ್​ನಲ್ಲಿ ನಕ್ಸಲ್ ನಾಯಕ‌ ವಿಕ್ರಂ ಗೌಡ ಹತ್ಯೆಯಾಗಿದ್ದಾನೆ. ಈತ ಕರ್ನಾಟಕ, ಕೇರಳ, ತಮಿಳುನಾಡು ಪೊಲೀಸರಿಗೆ ವಿವಿಧ ಪ್ರಕರಣಗಳಲ್ಲಿ ಬೇಕಾಗಿದ್ದ. ನಕ್ಸಲ್ ಚಟುವಟಿಕೆಗಳ ಸಂಬಂಧ ವಿಕ್ರಂ ಗೌಡ ಮೇಲೆ ಈ ಹಿಂದೆ ಹಲವು ಪ್ರಕರಣಗಳು ದಾಖಲಾಗಿದ್ದವು.

ವಿಕ್ರಂ ಗೌಡ ನಕ್ಸಲರ ನೇತ್ರಾವತಿ ದಳದ ನಾಯಕ. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವಿರೋಧಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ. ಆ ಸಂದರ್ಭದಲ್ಲಿ ನಕ್ಸಲ್​ ಚಳವಳಿಗೆ ಧುಮುಕಿದ್ದ ವಿಕ್ರಂ ಗೌಡ, ನಂತರದಲ್ಲಿ ನಕ್ಸಲ್ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದ. ನಕ್ಸಲ್ ಹೋರಾಟದ ವೇಳೆ ಕರಾವಳಿ ಭಾಗದಲ್ಲಿ ನೇತ್ರಾವತಿ ದಳವನ್ನು ಮುನ್ನೆಡೆಸಿದ್ದ. ಮತ್ತೊಂದೆಡೆ, ಮಲೆನಾಡು ಭಾಗದಲ್ಲಿ ಮುಂಡಗಾರು ಲತಾ ತಂಡ ಸಕ್ರಿಯವಾಗಿತ್ತು.

ಮೂರು ಬಾರಿ ಕರ್ನಾಟಕ ಪೊಲೀಸರಿಂದ ತಪ್ಪಿಸಿಕೊಂಡಿದ್ದ ವಿಕ್ರಂ ಗೌಡ

ಕರ್ನಾಟಕದ ಮೋಸ್ಟ್ ವಾಂಟೆಡ್ ನಕ್ಸಲ್ ಆಗಿರುವ ವಿಕ್ರಂ ಗೌಡ ಉಡುಪಿ ಹೆಬ್ರಿ ತಾಲೂಕಿನ ಕೂಡ್ಲು ನಾಡ್ವಾಲು ಗ್ರಾಮ ಮೂಲದವ. ದಕ್ಷಿಣ ಭಾರತದಲ್ಲಿ ನಕ್ಸಲ್ ಸಂಘಟನೆಯ ನಾಯಕತ್ವವನ್ನು ತಮಿಳುನಾಡು ಮೂಲದ ಕುಪ್ಪುಸ್ವಾಮಿ ವಹಿಸಿಕೊಂಡಿದ್ದರೆ, ಕರ್ನಾಟಕದಲ್ಲಿನ ಜವಾಬ್ದಾರಿ ವಿಕ್ರಂ ಗೌಡ ಹೆಗಲಿಗೆ ಬಿದ್ದಿತ್ತು. 20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಬೇಕಾಗಿರುವ ವಿಕ್ರಂ ಗೌಡ ಕಳೆದ 20 ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ಶಾಮೀಲಾಗಿದ್ದಾನೆ. ಕಾರ್ಮಿಕ ಸಂಘಟನೆಯ ಹಿನ್ನೆಲೆಯಿಂದ ಬಂದಿದ್ದ ವಿಕ್ರಂ ಗೌಡ ಮೂರು ಬಾರಿ ಕರ್ನಾಟಕ ಪೊಲೀಸರ ಕೈಯಿಂದ ಪರಾರಿಯಾಗಿದ್ದ. 2016ರಲ್ಲಿ ಕೇರಳ ಪೊಲೀಸರಿಗೂ ಚಳ್ಳೆಹಣ್ಣು ತಿನ್ನಿಸಿದ್ದ. ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಸರ್ಕಾರದ ಯೋಜನೆಗೆ ವಿಕ್ರಂ ಗೌಡ ವಿರೋಧ ಹೊಂದಿದ್ದ. ಅಷ್ಟೇ ಅಲ್ಲದೇ ಈ ಯೋಜನೆಯಲ್ಲಿ ಮುಖ್ಯ ಪಾತ್ರವನ್ನು ವಹಿಸಿದ್ದಕ್ಕೆ ಗೌರಿ ಲಂಕೇಶ್ ವಿರುದ್ಧ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಿತ್ತಿಪತ್ರಗಳನ್ನೂ ಕೂಡ ಹಂಚಿದ್ದ.

ನಕ್ಸಲರ ಪತ್ತೆಗೆ 5 ಲಕ್ಷ ರೂ. ಬಹುಮಾನ ಘೋಷಿಸಿದ್ದ ಪೊಲೀಸ್ ಇಲಾಖೆ

ನಕ್ಸಲರ ಪತ್ತಗೆ ಪೋಲಿಸ್ ಇಲಾಖೆ ಹತ್ತು ವರ್ಷಗಳ ಹಿಂದೆಯೇ 5 ಲಕ್ಷ ರೂ. ಬಹುಮಾನ ಘೋಷಣೆ ಮಾಡಿತ್ತು. ವಿಕ್ರಂ ಗೌಡ, ಮುಂಡಗಾರು ಲತಾ, ಜಯಣ್ಣ, ವನಜಾಕ್ಷಿ, ಸುಂದರಿ ಪತ್ತೆಗೆ 5 ಲಕ್ಷ ಬಹುಮಾನ ಘೋಷಣೆ ಮಾಡಲಾಗಿತ್ತು. ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ಹೇಳಿತ್ತು. ಕಳೆದ 18 ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯವಾಗಿದ್ದ ವಿಕ್ರಂ ಗೌಡ ವಿರುದ್ಧ ಚಿಕ್ಕಮಗಳೂರು ಜಿಲ್ಲೆಯಲ್ಲೇ 13 ಪ್ರಕರಣ ದಾಖಲಾಗಿದ್ದವು. ಕರ್ನಾಟಕ ತಮಿಳುನಾಡು, ಕೇರಳದ ರಾಜ್ಯದಲ್ಲಿ 50 ಕ್ಕೂ ಹೆಚ್ಚು ಕೇಸ್ ದಾಖಲಾಗಿದ್ದವು.

ಕೇರಳದಿಂದ ಆಗಮಿಸಿದ್ದ ನಕ್ಸಲರು

ಕೇರಳದಲ್ಲಿ ಕೂಡ ಇತ್ತೀಚೆಗೆ ನಕ್ಸಲ್ ಚಟುವಟಿಕೆ ಹೆಚ್ಚಾಗಿತ್ತು. ಅದರ ಬೆನ್ನಲ್ಲೇ ಅಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆಯೂ ಚುರುಕಾಗಿತ್ತು. ನಂತರ ಅಲ್ಲಿಂದ ಕಾಲ್ಕಿತ್ತಿದ್ದ ನಕ್ಸಲರು, 2 ತಿಂಗಳುಗಳ ಹಿಂದೆ ಕರ್ನಾಟಕಕ್ಕೆ ಆಗಮಿಸಿದ್ದರು.

ಉಡುಪಿ ಜಿಲ್ಲೆಯ ಪಶ್ಚಿಮ ಘಟ್ಟ ಸಾಲಿನ ಗ್ರಾಮಗಳು ಹಾಗೂ ಚಿಕ್ಕಮಗಳೂರಿನ ಹಲವೆಡೆ ಇತ್ತೀಚೆಗೆ ನಕ್ಸಲರು ಸಭೆ ನಡೆಸಿದ್ದರು. ಕಸ್ತೂರಿ ರಂಗನ್​​ ವರದಿ ಜಾರಿ, ಅರಣ್ಯ ಒತ್ತುವರಿ ತೆರವು ಸಂಬಂಧ ಸಭೆ ನಡೆಸಿದ್ದರು. ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ನಕ್ಸಲ್ ಚಟುವಟಿಕೆ ಬಿರುಸುಗೊಂಡಿತ್ತು. ಹೀಗಾಗಿ ಜಿಲ್ಲೆಯ ನಕ್ಸಲ್​ಪೀಡಿತ ಪ್ರದೇಶಗಳಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿತ್ತು. ನಕ್ಸಲ್ ನಿಗ್ರಹ ಪಡೆಯಿಂದ ಕಾರ್ಯಾಚರಣೆ ಕೂಡ ಮುಂದುವರಿದಿದೆ.

ಕುದುರೆಮುಖ ನೆಪದಿಂದ ಆರಂಭವಾಗಿದ್ದ ನಕ್ಸಲ್ ಚಟುವಟಿಕೆ

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಘೋಷಣೆ ವಿರೋಧಿಸಿ ಹುಟ್ಟಿಕೊಂಡಿದ್ದ ನಕ್ಸಲ್ ಚಳುವಳಿ, ನಂತರ ಕರ್ನಾಟಕದ ವಿವಿಧ ಭಾಗಗಳಲ್ಲಿ ದಶಕಗಳ ಕಾಲ ಆತಂಕ ಸೃಷ್ಟಿ ಮಾಡಿತ್ತು. ಆದರೆ, ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಘೋಷಣೆಯಾದ ಬಳಿಕ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ನಕ್ಸಲ್ ಚಳವಳಿಗೆ ಹೆಚ್ಚಿನ ಬೆಂಬಲ‌ ಸಿಕ್ಕಿರಲಿಲ್ಲ. ಹೀಗಾಗಿ ಪಕ್ಕದ ರಾಜ್ಯ ಕೇರಳಕ್ಕೆ ನಕ್ಸಲರು ಸ್ಥಳಾಂತರಗೊಂಡಿದ್ದರು.

ಇದನ್ನೂ ಓದಿ: ಉಡುಪಿ: ನಕ್ಸಲ್ ನಿಗ್ರಹ ಪಡೆ ಎನ್​ಕೌಂಟರ್​ಗೆ ನಕ್ಸಲ್ ನಾಯಕ‌ ವಿಕ್ರಂ ಗೌಡ ಬಲಿ

ಇದೀಗ ಮತ್ತೆ ಕಸ್ತೂರಿ ರಂಗನ್​​ ವರದಿ ಜಾರಿ, ಅರಣ್ಯ ಒತ್ತುವರಿ ತೆರವು ವಿಚಾರವಾಗಿ ನಕ್ಸಲರು ಸಭೆಗಳನ್ನು ನಡೆಸಿ, ಚಟುವಟಿಕೆ ಆರಂಭಿಸಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:33 am, Tue, 19 November 24