
ಉಡುಪಿ, ಜುಲೈ.18: ವೈದ್ಯಕೀಯ ಲೋಕದಲ್ಲಿ ಸಾಧನೆಗೈದ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ, ಪದ್ಮ ವಿಭೂಷಣ ಪ್ರೊ.ಮಾರ್ತಾಂಡ ವರ್ಮ ಶಂಕರನ್ ವಲಿಯಥಾನ್(90)ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಡಾ.ವಲಿಯಥಾನ್ (M. V. Sankaran Valiathan) ತಡರಾತ್ರಿ 9.14ಕ್ಕೆ ಮಣಿಪಾಲದಲ್ಲಿ ನಿಧನರಾಗಿದ್ದಾರೆ. ಪತ್ನಿ, ಒಬ್ಬ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.
ಉಡುಪಿ ಜಿಲ್ಲೆ ಮಣಿಪಾಲದ MAHE ಯುನಿವರ್ಸಿಟಿಯ ವಿಶ್ರಾಂತ ಉಪಕುಲಪತಿಯಾಗಿದ್ದ ಡಾ.ವಲಿಯಥಾನ್ ಅವರು ಭಾರತೀಯ ವೈದ್ಯಕೀಯ ಸಂಘದಿಂದ ಜೀವಮಾನ ಸಾಧನೆ ಪ್ರಶಸ್ತಿ ಪಡೆದಿದ್ದಾರೆ. ಹೃದಯ ಶಸ್ತ್ರಚಿಕಿತ್ಸೆ ಮತ್ತು ವೈದ್ಯಕೀಯ ತಂತ್ರಜ್ಞಾನಕ್ಕೆ ಗಮನಾರ್ಹ ಕೊಡುಗೆ ನೀಡಿದ್ದಾರೆ.
ತಿರುವನಂತಪುರದ ವೈದ್ಯಕೀಯ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದ ಡಾ.ವಲಿಯಥಾನ್, ತಿರುವನಂತಪುರದಲ್ಲಿ ಶ್ರೀ ಚಿತ್ರ ತಿರುನಾಳ್ ಸಂಸ್ಥೆ ಸ್ಥಾಪಿಸುವಲ್ಲಿ ಪ್ರಮುಖ ಪಾತ್ರವಾಗಿಸಿದ್ದಾರೆ. ಇವರು ಇಂಗ್ಲೆಂಡ್ನ ಎಡಿನ್ಬರ್ಗ್ ಮತ್ತು ಕೆನಡಾದ ರಾಯಲ್ ಕಾಲೇಜ್ ಆಫ್ ಸರ್ಜನ್ಸ್ನಿಂದ ಫೆಲೋಶಿಪ್ ಪಡೆದಿದ್ದರು. 20 ವರ್ಷಗಳ ಕಾಲ ಹೃದಯ ಶಸ್ತ್ರಚಿಕಿತ್ಸೆ ಪ್ರಾಧ್ಯಾಪಕರಾಗಿ, ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಇವರು 1993 ರಿಂದ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಮೊದಲ ಉಪಕುಲಪತಿಯಾಗಿದ್ದರು.
ಇದನ್ನೂ ಓದಿ: ಡೆಂಗ್ಯೂ, ಚಿಕುನ್ ಗುನ್ಯಾ ಪ್ರಕರಣಗಳ ನಡುವೆ ಬೆಂಗಳೂರನ್ನು ಕಾಡುತ್ತಿದೆ ಇಲಿ ಜ್ವರದ ಆತಂಕ
ಡಾ.ವಲಿಯಥಾನ್ ಅವರಿಗೆ 2005ರಲ್ಲಿ ಪದ್ಮವಿಭೂಷಣ, 2002ರಲ್ಲಿ ಪದ್ಮಶ್ರೀ, ಡಾ.B.C.ರಾಯ್ ರಾಷ್ಟ್ರೀಯ ಪ್ರಶಸ್ತಿ ಸಿಕ್ಕಿದೆ. ಅಲ್ಲದೆ ಇಂಗ್ಲೆಂಡ್ನ ರಾಯಲ್ ಕಾಲೇಜ್ ಆಫ್ ಸರ್ಜನ್ಸ್ನ ಹಂಟೇರಿಯನ್ ಪ್ರೊಫೆಸರ್ ಶಿಪ್, ಫ್ರೆಂಚ್ ಸರ್ಕಾರದಿಂದ ಚೆವಲಿಯರ್ ಆಫ್ ದಿ ಆರ್ಡರ್ ಆಫ್ ಪಾಮ್ಸ್ ಅಕಾಡೆಮಿಕ್ಸ್, ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದಿಂದ ಡಾ. ಸ್ಯಾಮ್ಯುಯೆಲ್ ಪಿ. ಆಸ್ಪರ್ ಪ್ರಶಸ್ತಿ, ಭಾರತೀಯ ವೈದ್ಯಕೀಯ ಸಂಘದಿಂದ ಜೀವಮಾನ ಸಾಧನೆ ಪ್ರಶಸ್ತಿ ಕೂಡ ಸಿಕ್ಕಿದೆ.
ಬಿಸಾಡಬಹುದಾದ ರಕ್ತದ ಚೀಲ ಮತ್ತು ಟಿಲ್ಟಿಂಗ್ ಡಿಸ್ಕ್ ಹೃದಯ ಕವಾಟದಂತಹ ವೈದ್ಯಕೀಯ ಸಾಧನಗಳನ್ನು ಅಭಿವೃದ್ಧಿಪಡಿಸುವಲ್ಲಿ ಅವರ ನವೀನ ಕೆಲಸವು ಭಾರತದ ವೈದ್ಯಕೀಯ ಸಾಧನಗಳ ಉದ್ಯಮಕ್ಕೆ ಅಡಿಪಾಯವನ್ನು ಹಾಕಿತು.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 11:17 am, Thu, 18 July 24