
ಕಾರ್ಕಳ, ಸೆ.2: ಉಡುಪಿ ಜಿಲ್ಲೆಯ ಕಾರ್ಕಳದ ಪ್ರಸಿದ್ಧ ಪರಶುರಾಮ ಥೀಮ್ ಪಾರ್ಕ್ (Parashurama Theme Park) ನಿರ್ಮಾಣದಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಹಾಗೂ ಬಿಜೆಪಿಯ ನೂರಾರು ಕಾರ್ಯಕರ್ತರು ಬೀದಿಗಿಳಿದು ಪ್ರತ್ಯಕ್ಷ ಸಮರಕ್ಕಿಳಿದ ಘಟನೆ ಬುಧವಾರ ನಡೆದಿದೆ. ಇದರಿಂದಾಗಿ ಕಾರ್ಕಳ ಪಟ್ಟಣವು ರಾಜ್ಯ ರಾಜಕಾರಣದ ಹೈಡ್ರಾಮಾ ಕೇಂದ್ರವಾಗಿ ಮಾರ್ಪಟ್ಟಿದೆ.
ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಸಚಿವ ನಾಗೇಂದ್ರ ಅವರ ರಾಜೀನಾಮೆಯನ್ನು ಉಲ್ಲೇಖಿಸಿ, ಪರಶುರಾಮ ಥೀಮ್ ಪಾರ್ಕ್ ಹಗರಣದ ನೈತಿಕ ಹೊಣೆ ಹೊತ್ತು ಸುನಿಲ್ ಕುಮಾರ್ ಕೂಡ ತಕ್ಷಣ ರಾಜೀನಾಮೆ ನೀಡಬೇಕೆಂದು ಆಗ್ರಹಿಸಲಾಯಿತು. ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರ ಹಾಗೂ ಶಾಸಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಶಾಸಕರ ಕಚೇರಿಗೆ ತೆರಳಿ ಸ್ಟಿಕ್ಕರ್ ಅಂಟಿಸಲು ಮುಂದಾದರು.
ಕಚೇರಿಯತ್ತ ಧಾವಿಸುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ಸರ್ವಜ್ಞ ವೃತ್ತದ ಬಳಿ ತಡೆದು ವಶಕ್ಕೆ ಪಡೆದರು. ಈ ವೇಳೆ ಪೊಲೀಸರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ತೀವ್ರ ಮಾತಿನ ಚಕಮಕಿ ನಡೆದು ವಾತಾವರಣ ಉದ್ವಿಗ್ನಗೊಂಡಿತ್ತು. ಕಾಂಗ್ರೆಸ್ನ ‘ಸ್ಟಿಕ್ಕರ್ ಅಭಿಯಾನ’ಕ್ಕೆ ಪ್ರತಿಯಾಗಿ ನೂರಾರು ಬಿಜೆಪಿ ಕಾರ್ಯಕರ್ತರು ಶಾಸಕ ಸುನಿಲ್ ಕುಮಾರ್ ಅವರ ಕಚೇರಿ ಆವರಣದಲ್ಲಿ ಜಮಾಯಿಸಿ ಕಾಂಗ್ರೆಸ್ ವಿರುದ್ಧ ಶಕ್ತಿ ಪ್ರದರ್ಶನ ನಡೆಸಿದರು.
ಇದನ್ನೂ ಓದಿ: ಹುಬ್ಬಳ್ಳಿ-ಧಾರವಾಡ ಕಮಿಷನರ್ ಹುದ್ದೆಗೆ ಐಪಿಎಸ್ ಅಧಿಕಾರಿಗಳ ನಿರಾಸಕ್ತಿ: ಆದೇಶವಾದರೂ ಅಧಿಕಾರ ವಹಿಸಿಕೊಳ್ಳದ ಭೂಷಣ್ ಬೋರಸೆ
ಶಾಸಕರ ರಾಜ್ಯಮಟ್ಟದ ಜನಪ್ರಿಯತೆ ಹಾಗೂ ಅಭಿವೃದ್ಧಿ ಕೆಲಸಗಳನ್ನು ಸಹಿಸದೇ ಕಾರ್ಕಳದ ಕಾಂಗ್ರೆಸ್ ನಾಯಕರು ರಾಜಕೀಯ ಹತಾಶೆಯಿಂದ ಈ ರೀತಿಯ ಪ್ರಚೋದನಾಕಾರಿ ಚಟುವಟಿಕೆಗಳನ್ನು ಮಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕರು ಟೀಕಿಸಿದರು. ಶಾಸಕರ ವಿರುದ್ಧ ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ಕಾರ್ಯಕರ್ತರು ತಹಶೀಲ್ದಾರ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಎರಡು ಪಕ್ಷಗಳ ಕಾರ್ಯಕರ್ತರು ಶಾಸಕರ ಕಚೇರಿ ಸುತ್ತಮುತ್ತ ಮುಖಾಮುಖಿಯಾಗಿದ್ದರಿಂದ ಕೆಲಕಾಲ ಕಾರ್ಕಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು ಹೆಚ್ಚಿನ ಭದ್ರತೆ ಒದಗಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ