
ಬೆಂಗಳೂರು, ಜುಲೈ 25: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ ಜೊತೆಗೆ ಗಂಟೆಗೆ 30 ರಿಂದ 50 kmph ವೇಗದಲ್ಲಿ ಬಲವಾದ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಹಾಗೂ ಮಲೆನಾಡಿನ ಪ್ರಮುಖ ಜಿಲ್ಲೆಗಳಿಗೆ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ.
ಕರಾವಳಿ ಪ್ರದೇಶದಲ್ಲಿ ಹಲವು ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ. ಇಂದೂ ಸಹ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 30 ರಿಂದ 40 kmph ವೇಗದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ. ಉಡುಪಿಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಅಂಗನವಾಡಿಯಿಂದ ಪಿಯುಸಿವರೆಗಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹಾಗೂ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ಟಿ. ಕೆ. ಸ್ವರೂಪ್ ಈ ರಜೆ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಸುರಕ್ಷಿತವಾಗಿರಲು ಸೂಚಿಸಲಾಗಿದೆ.
ಬೆಳಗಾವಿ, ಬೀದರ್, ವಿಜಯಪುರ, ಧಾರವಾಡ, ಗದಗ, ರಾಯಚೂರು, ಹಾವೇರಿ, ಯಾದಗಿರಿ ಮತ್ತು ಕಲ್ಬುರ್ಗಿ ಹಲವು ಭಾಗಗಳಲ್ಲಿ ಗಂಟೆಗೆ 40 ರಿಂದ 50 kmph ವೇಗದ ಬಲವಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ. ಬಾಗಲಕೋಟೆ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 kmph ವೇಗದ ಗಾಳಿ ಸಹಿತ ಲಘು ಮಳೆಯಾಗುವ ಸಾಧ್ಯತೆಯಿದೆ.
ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗಂಟೆಗೆ 40 ರಿಂದ 50 kmph ವೇಗದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಮುನ್ಸೂಚನೆಯಿದ್ದು,ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ. ಚಿತ್ರದುರ್ಗ ಮತ್ತು ಮೈಸೂರಿನ ಹಲವೆಡೆ ಗಂಟೆಗೆ 40 ರಿಂದ 50 kmph ವೇಗದ ಬಿರುಗಾಳಿ ಸಹಿತ ಸಾಧಾರಣ ಮಳೆ ಬೀಳಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಮತ್ತು ವಿಜಯನಗರ ಗಂಟೆಗೆ 30 ರಿಂದ 40 kmph ವೇಗದ ಬಿರುಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರಿ ಮಳೆ ಹಾಗೂ ಗಾಳಿಯ ರಭಸ ಹೆಚ್ಚಿರಲಿದ್ದು, ಸಾರ್ವಜನಿಕರು ಅಗತ್ಯ ಜಾಗರೂಕತೆ ವಹಿಸಲು ಸೂಚಿಸಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ