ಭಕ್ತರೇ ಗಮನಿಸಿ, ಪೊಲೀಸ್ ಇಲಾಖೆಯಿಂದ ಮಹತ್ವದ ಸೂಚನೆ: ನಾಳೆ ಈ ಸಮಯದಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಇರುವುದಿಲ್ಲ
ಜೂನ್ 12 ರಂದು ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಧ್ಯಾಹ್ನ 12 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕರಿಗೆ ದರ್ಶನದಲ್ಲಿ ಬದಲಾವಣೆ ಇರಲಿದೆ ಎಂದು ಪೊಲೀಸ್ ಇಲಾಖೆ ಸೂಚಿಸಿದೆ. ಭದ್ರತೆಯ ಕಾರಣದಿಂದ ಅನಾನುಕೂಲ ತಪ್ಪಿಸಲು ಭಕ್ತಾದಿಗಳು ತಮ್ಮ ದರ್ಶನ ಸಮಯವನ್ನು ಯೋಜಿಸಿಕೊಳ್ಳಬೇಕು ಮತ್ತು ಪೊಲೀಸರೊಂದಿಗೆ ಸಹಕರಿಸಬೇಕು.

ಕೊಲ್ಲೂರು, ಜೂ.11: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ನಾಳೆ (ಜೂನ್ 12, ಶುಕ್ರವಾರ) ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆಯಲಿದ್ದಾರೆ. ಸಿಎಂ ಭೇಟಿಯ ಹಿನ್ನೆಲೆಯಲ್ಲಿ ಕೊಲ್ಲೂರು ದೇವಸ್ಥಾನದ ಸುತ್ತಮುತ್ತ ಹಾಗೂ ಮುಖ್ಯಮಂತ್ರಿಗಳು ಸಂಚರಿಸುವ ಮಾರ್ಗದುದ್ದಕ್ಕೂ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯು ಅತ್ಯಂತ ಬಿಗಿ ಬಂದೋಬಸ್ತ್ ಕೈಗೊಂಡಿದೆ. ಸಾರ್ವಜನಿಕರು ಹಾಗೂ ದೂರದೂರುಗಳಿಂದ ಬರುವ ಭಕ್ತಾದಿಗಳಿಗೆ ದರ್ಶನದ ವೇಳೆ ಅನಾನುಕೂಲವಾಗುವುದನ್ನು ತಪ್ಪಿಸಲು ಪೊಲೀಸ್ ಇಲಾಖೆಯು ಮಹತ್ವದ ಮಾರ್ಗಸೂಚಿ ಪ್ರಕಟಣೆಯನ್ನು ಹೊರಡಿಸಿದೆ.
ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಕೇವಲ ದೇವಿಯ ದರ್ಶನ ಮತ್ತು ವಿಶೇಷ ಪೂಜೆಗಾಗಿ ಮಾತ್ರ ಕೊಲ್ಲೂರಿಗೆ ಆಗಮಿಸುತ್ತಿದ್ದು, ಪೂಜೆಯ ಬಳಿಕ ತಮಿಳುನಾಡಿಗೆ ಹಿಂದಿರುಗಲಿದ್ದಾರೆ. ಈ ಪ್ರವಾಸದ ವೇಳೆ ಅವರ ಯಾವುದೇ ಸಾರ್ವಜನಿಕ ಭೇಟಿ ಅಥವಾ ರಾಜಕೀಯ ಕಾರ್ಯಕ್ರಮಗಳು ಇರುವುದಿಲ್ಲ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.
ಇಲ್ಲಿದೆ ನೋಡಿ ಎಕ್ಸ್ ಪೋಸ್ಟ್:
ಸಾರ್ವಜನಿಕ ಪ್ರಕಟಣೆ @DgpKarnataka @KarnatakaCops @Rangepol_WR @112Udupi pic.twitter.com/pSuxLuJqD4
— SP Udupi (@PoliceUdupi) June 11, 2026
ಭಕ್ತಾದಿಗಳಿಗೆ ಪೊಲೀಸ್ ಇಲಾಖೆಯ ಪ್ರಮುಖ ಸೂಚನೆಗಳು:
ದರ್ಶನದ ಸಮಯ ಬದಲಾವಣೆ ಸೂಕ್ತ: ವಿವಿಐಪಿ (VVIP) ಭೇಟಿ ಮತ್ತು ವಿಶೇಷ ಭದ್ರತಾ ಹಿತದೃಷ್ಟಿಯಿಂದ ಜೂನ್ 12ರ ಮಧ್ಯಾಹ್ನ 12:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಭಕ್ತಾದಿಗಳು ದೇವಸ್ಥಾನಕ್ಕೆ ಬರುವುದನ್ನು ಮತ್ತು ದರ್ಶನ ಪಡೆಯುವುದನ್ನು ತಪ್ಪಿಸುವುದು ಸೂಕ್ತ ಎಂದು ಹೇಳಲಾಗಿದೆ.
ಪ್ರವೇಶ ನಿಷೇಧವಿಲ್ಲ, ಆದರೆ ವಿಳಂಬ ಸಾಧ್ಯತೆ: ಭಕ್ತಾದಿಗಳಿಗೆ ಯಾವುದೇ ಸಮಯದಲ್ಲಿ ದೇವಸ್ಥಾನ ಪ್ರವೇಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿಲ್ಲ. ಆದರೆ, ಸಿಎಂ ಭೇಟಿಯ ಭದ್ರತಾ ತಪಾಸಣೆಗಳ ಕಾರಣದಿಂದಾಗಿ ಸಾಮಾನ್ಯ ದರ್ಶನದ ವೇಳೆ ಭಕ್ತರಿಗೆ ತೀವ್ರ ಅನಾನುಕೂಲ ಹಾಗೂ ವಿಳಂಬವಾಗಬಹುದು.
ಗುಂಪು ಸೇರುವುದಕ್ಕೆ ನಿರ್ಬಂಧ: ಮುಖ್ಯಮಂತ್ರಿಗಳ ವಾಹನ ಸಂಚಾರದ ಕಾನ್ವಾಯ್ ಸಾಗುವ ಹಾದಿ, ದೇವಸ್ಥಾನದ ಮುಖ್ಯ ಪ್ರವೇಶ ದ್ವಾರಗಳು ಹಾಗೂ ಮೂಕಾಂಬಿಕಾ ದೇವಸ್ಥಾನದ ಒಳಗಿನ ಆವರಣದಲ್ಲಿ ಸಾರ್ವಜನಿಕರು ಅನಗತ್ಯವಾಗಿ ಗುಂಪು ಸೇರುವುದು ಅಥವಾ ಜನಸಂದಣಿ ಉಂಟುಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
ಇದನ್ನೂ ಓದಿ: ಜೂನ್ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ಭೇಟಿ: ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿರುವ ವಿಜಯ್
ಹೈ-ಪ್ರೊಫೈಲ್ ಬಂದೋಬಸ್ತ್ ಇರುವುದರಿಂದ ಕೊಲ್ಲೂರಿಗೆ ಬರುವ ಸಾರ್ವಜನಿಕರು ಹಾಗೂ ಭಕ್ತಾದಿಗಳು ಪೊಲೀಸ್ ಸಿಬ್ಬಂದಿಯೊಂದಿಗೆ ಸಹಕರಿಸಬೇಕು ಮತ್ತು ಅನಾನುಕೂಲಗಳನ್ನು ತಪ್ಪಿಸಲು ತಮ್ಮ ದರ್ಶನದ ಸಮಯವನ್ನು ಮುಂಚಿತವಾಗಿಯೇ ಯೋಜಿಸಿಕೊಳ್ಳಬೇಕು ಎಂದು ಉಡುಪಿ ಜಿಲ್ಲಾ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




