ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್; ಪತ್ನಿ ಸೌಮ್ಯ ಅರೆಸ್ಟ್!
ಉಡುಪಿ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರ ಪತ್ನಿ ಸೌಮ್ಯ ಶೆಟ್ಟಿಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಮಾನಸಿಕ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆಂಬ ಆರೋಪ ಸೌಮ್ಯ ಮೇಲಿತ್ತು. ಪ್ರಾಥಮಿಕ ತನಿಖೆಯಲ್ಲಿ ಆರೋಪ ಸಾಬೀತಾದ ಹಿನ್ನೆಲೆ ಸೌಮ್ಯಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಉಡುಪಿ, ಏಪ್ರಿಲ್ 12: ಉದ್ಯಮಿ ಸುದೀಪ್ ರೈ ಆತ್ಮಹತ್ಯೆ (Sudeep Rai Suicide) ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಪತ್ನಿ ಸೌಮ್ಯ ಶೆಟ್ಟಿ ಮೇಲೆ ಹತ್ತು ಹಲವು ಆರೋಪಗಳು ಕೇಳಿ ಬಂದಿದ್ದವು. ಸುದೀಪ್ ಜೊತೆಗೆ ಎರಡನೇ ಮದುವೆಯಾಗಿದ್ದ ಆಕೆ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರಚೋದಿಸಿದ್ದಾಳೆಂದು ಆತನ ತಂದೆ ದಾಮೋದರ ಶೆಟ್ಟಿ ಕೇಸ್ ದಾಖಲಿಸಿದ್ದರು. ತನ್ನ ಮೇಲಿನ ಆರೋಪಗಳನ್ನು ಸೌಮ್ಯ ಅಲ್ಲಗಳೆದರೂ ಇದೀಗ ಪ್ರಾಥಮಿಕ ತನಿಖೆಯಲ್ಲಿ ಆರೋಪ ಸಾಬೀತಾದ ಹಿನ್ನೆಲೆ ಸೌಮ್ಯಳನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಪತಿಗೆ ಬೆದರಿಕೆ ಹಾಕಿದ್ದ ಸೌಮ್ಯ
ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿ ಮೂಲದ ಸುದೀಪ್ ರೈ ಫೆಬ್ರವರಿ 17ರಂದು ಕಾರ್ಕಳ ಮೂಲದ ಸೌಮ್ಯ ಶೆಟ್ಟಿಯನ್ನು ಪ್ರೀತಿಸಿ ಮದುವೆಯಾಗಿದ್ದರು. ಮದುವೆಯಾದ ಬಳಿಕ ಸುದೀಪ್ ರೈ ಅವರು ಕಾರ್ಕಳದ ಬಂಗ್ಲೆಗುಡ್ಡೆಯಲ್ಲಿರುವ ಪತ್ನಿಯ ಮನೆಯಲ್ಲಿ ವಾಸವಾಗಿದ್ದರು. ಮಾರ್ಚ್ 17ರಂದು ತಾಯಿಯೊಂದಿಗೆ ಕಾರಿನಲ್ಲಿ ನೆಲ್ಯಾಡಿ ಕಡೆಗೆ ತೆರಳುತ್ತಿದ್ದ ವೇಳೆ, ಸೌಮ್ಯ ಶೆಟ್ಟಿ ಕಾರಿಗೆ ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾಳೆಂದು ಸುದೀಪ್ ಅವರ ಪೋಷಕರು ಆರೋಪಿಸಿದ್ದರು.
ಈ ಘಟನೆಯ ಬಳಿಕ ಮಾರ್ಚ್ 22ರಂದು ಸುದೀಪ್ ರೈ ಅವರು ವಿಷ ಸೇವಿಸಿರುವುದಾಗಿ ಸೌಮ್ಯ ಶೆಟ್ಟಿ ಸಂಬಂಧಿಕರಿಗೆ ಕರೆಮಾಡಿ ತಿಳಿಸಿದ್ದಳು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮಾರ್ಚ್ 29ರಂದು ಸುದೀಪ್ ಮೃತಪಟ್ಟಿದ್ದರು. ಆ ಬಳಿಕ ಪೊಲೀಸ್ ಠಾಣೆ ಮೆಟ್ಟಿಲೇರಿದ ಮೃತನ ತಂದೆ ಸೊಸೆ ಸೌಮ್ಯಳೇ ಮಗನಿಗೆ ಮಾನಸಿಕ ಹಿಂಸೆ ನೀಡಿ ಆತ್ಮಹತ್ಯೆಗೆ ಪ್ರಚೋದಿಸಿದ್ದಾಳೆ ಎಂದು ದೂರು ನೀಡಿದ್ದರು.
ಇದನ್ನೂ ಓದಿ ಸುದೀಪ್ ಆತ್ಮಹತ್ಯೆ ಪ್ರಕರಣ: ಪತಿ ಸಾವಿಗೆ ಕಾರಣ ಬಿಚ್ಚಿಟ್ಟ ಉದ್ಯಮಿ ಪತ್ನಿ ಸೌಮ್ಯಾ
ನ್ಯಾಯಾಂಗ ಬಂಧನ
ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ನಿರೀಕ್ಷಕ ಮಂಜಪ್ಪ ಅವರ ನೇತೃತ್ವದಲ್ಲಿ ತನಿಖೆ ನಡೆಸಲಾಗಿದ್ದು, ಪ್ರಾಥಮಿಕ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ವಿಚಾರಣೆಯ ವೇಳೆ ಸೌಮ್ಯ ಶೆಟ್ಟಿ ವಿರುದ್ಧದ ಆರೋಪಗಳು ದೃಢಪಟ್ಟ ಹಿನ್ನೆಲೆ, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:33 am, Sun, 12 April 26



