AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Union Budget 2025: ನಾಳಿನ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕದ ಬೇಡಿಕೆಗಳೇನು? ಇಲ್ಲಿದೆ ಪಟ್ಟಿ

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2025-26ನೇ ಸಾಲಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ನಾಳೆ (ಫೆ.1) ಕೇಂದ್ರದ ಬಜೆಟ್‌ ಮಂಡಿಸಲಿದ್ದಾರೆ. ಹೀಗಾಗಿ ಈ ಬಜೆಟ್​ನಲ್ಲಿ ಏನೆಲ್ಲಾ ಕೊಡುಗೆ ನೀಡಲಿದ್ದಾರೆ ಎಂದು ಜನರು ಕಾತರದಿಂದ ಕಾಯುತ್ತಿದ್ದಾರೆ. ಇನ್ನು ಯಾವೆಲ್ಲಾ ಬೆಲೆ ಏರಿಕೆ ಯಾವೆಲ್ಲಾ ಕಡಿಮೆಯಾಗಲಿದೆ ಎನ್ನುವ ಚರ್ಚೆಗಳು ನಡೆದಿವೆ. ಇದರ ಮಧ್ಯ ಕರ್ನಾಟಕ ರಾಜ್ಯದ ಬೇಡಿಕೆಗಳೇನು ಎನ್ನುವ ವಿವರ ಇಲ್ಲಿದೆ.

Union Budget 2025: ನಾಳಿನ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕದ ಬೇಡಿಕೆಗಳೇನು? ಇಲ್ಲಿದೆ ಪಟ್ಟಿ
Union Budget 2025
ರಮೇಶ್ ಬಿ. ಜವಳಗೇರಾ
|

Updated on:Jan 31, 2025 | 5:35 PM

Share

ಬೆಂಗಳೂರು, (ಜನವರಿ 31): ನಾಳೆ ಅಂದರೆ ಫೆಬ್ರವರಿ 01ರಂದು 2025-26ನೇ ಸಾಲಿನ ಕೇಂದ್ರ ಬಜೆಟ್ ಇದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಬಜೆಟ್ ಮಂಡನೆ ಮಾಡಲಿದ್ದಾರೆ. ಇನ್ನು ಈ 2025-26ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಭರಪೂರ ಕೊಡುಗೆಗಳು ಘೋಷಣೆಯಾಗುವ ನಿರೀಕ್ಷೆಗಳು ಇವೆ. ಇನ್ನು ಬಜೆಟ್​ನಲ್ಲಿ ಹಲವು ಅಂಶಗಳನ್ನು ಸೇರಿಸಬೇಕೆಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪಟ್ಟಿ ಸಲ್ಲಿಸಲಾಗಿದೆ. ಹಾಗಾದ್ರೆ, ಕರ್ನಾಟಕ ರಾಜ್ಯದ ಬೇಡಿಕೆಗಳೇನು ಎನ್ನುವುದು ಈ ಕೆಳಗಿನಂತಿದೆ ನೋಡಿ.

ಕರ್ನಾಟಕ ರಾಜ್ಯದ ಬೇಡಿಕೆಗಳೇನು?

  1. 15ನೇ ಹಣಕಾಸು ಆಯೋಗದ ಅವಧಿ ಮುಂದಿನ ವರ್ಷ ಪೂರ್ಣಗೊಳ್ಳಲಿದ್ದರೂ ಇಲ್ಲಿಯ ವರೆಗೆ ಆಯೋಗವೇ ಶಿಫಾರಸು ಮಾಡಿರುವ ವಿಶೇಷ ಅನುದಾನ ರೂ.5495 ಕೋಟಿ ಮತ್ತು ರಾಜ್ಯ ಕೇಂದ್ರಿತ ರೂ.6000 ಕೋಟಿ ಮೊತ್ತದ ವಿಶೇಷ ಅನುದಾನವನ್ನು ಬಿಡುಗಡೆ ಮಾಡಿಲ್ಲ. ಕೇಂದ್ರ ಹಣಕಾಸು ಆಯೋಗ ತಾನು ಶಿಫಾರಸು ಮಾಡಿದ್ದಕ್ಕಿಂತ ಕಡಿಮೆ ಮೊತ್ತದ ಹಣವನ್ನು ರಾಜ್ಯ ಸರ್ಕಾರಕ್ಕೆ ನೀಡುತ್ತಾ ಬಂದಿದೆ. 2021-22, 2022-23 ಮತ್ತು 2023-24ರ ಹಣಕಾಸು ವರ್ಷದಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಗೆ 1311 ಕೋಟಿ, ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಿಗೆ ರೂ.775 ಕೋಟಿ ಕಡಿಮೆ ಅನುದಾನ ನೀಡಲಾಗಿದೆ. 2022-23 ಮತ್ತು 2023-24ರ ಹಣಕಾಸು ವರ್ಷದಲ್ಲಿ, ಆರೋಗ್ಯ ಅನುದಾನದಲ್ಲಿ ರೂ.826 ಕೋಟಿ, ಎಸ್ ಡಿ ಆರ್ ಎಫ್ ಅಡಿಯಲ್ಲಿ ರೂ.340 ಕೋಟಿ ಹಣವನ್ನು ಕಡಿತ ಮಾಡಲಾಗಿದೆ. ಈ ಒಟ್ಟು ಬಾಕಿ ರೂ.3,300 ಕೋಟಿ ರೂಪಾಯಿ ಮತ್ತು 2024-25 ಮತ್ತು 2025-26ರ ಅವಧಿಯಲ್ಲಿ ಆಯೋಗ ಶಿಫಾರಸು ಮಾಡಿರುವ ವಿಶೇಷ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಬೇಕು.
  2.  ಕೇಂದ್ರ ಸರ್ಕಾರ ರಾಜ್ಯಗಳಲ್ಲಿ ವಸೂಲು ಮಾಡುತ್ತಿರುವ ಸೆಸ್ ಮತ್ತು ಸರ್ಚಾರ್ಜ್ ಗಳಲ್ಲಿ ರಾಜ್ಯಗಳಿಗೆ ಪಾಲು ನೀಡಲಾಗುತ್ತಿಲ್ಲ. 2010-11ರಲ್ಲಿ ಒಟ್ಟು ತೆರಿಗೆಯ ಶೇಕಡಾ 8.1ರಷ್ಟಿದ್ದ ಸೆಸ್ ಮತ್ತು ಸರ್ಚಾರ್ಜ್ ನ ಪ್ರಮಾಣ 2024-25ರಲ್ಲಿ ಶೇಕಡಾ 14ಕ್ಕೆ ಏರಿಕೆಯಾಗಿದೆ. ಇದರಿಂದಾಗಿ ಕರ್ನಾಟಕಕ್ಕೆ ಬರುವ ತೆರಿಗೆ ಪಾಲಿನಲ್ಲಿ ಕಡಿತ ಉಂಟಾಗಿದೆ. ಇದರ ಜೊತೆಯಲ್ಲಿ ಕೇಂದ್ರದ ಸಹಾಯ ಧನ ಕೂಡಾ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಸೆಸ್ ಮತ್ತು ಸರ್ಚಾರ್ಜ್ ಅನ್ನು ರದ್ದುಗೊಳಿಸಬೇಕು ಇಲ್ಲವೆ ಅದನ್ನು ಒಟ್ಟು ತೆರಿಗೆಯ ನಿಧಿಗೆ ಸೇರಿಸಿ ಅದನ್ನು ರಾಜ್ಯಗಳಿಗೆ ಹಂಚಿಕೆ ಮಾಡಬೇಕು.
  3.  ಜಿಎಸ್ ಟಿ ಅನುಷ್ಠಾನದಿಂದಾಗಿ ರಾಜ್ಯ ಸರ್ಕಾರಗಳಿಗೆ ಆಗುವ ನಷ್ಟಕ್ಕೆ ಪರಿಹಾರ ನೀಡಲು ಜಿಎಸ್ ಟಿ ಪರಿಹಾರ ಸೆಸ್ ಜಾರಿಗೊಳಿಸಲಾಗಿತ್ತು. 2022ರ ಜುಲೈ ತಿಂಗಳಲ್ಲಿಯೇ ಪರಿಹಾರ ನೀಡುವುದನ್ನು ನಿಲ್ಲಿಸಿದರೂ 2026ರ ವರೆಗೆ ಸೆಸ್ ಸಂಗ್ರಹವನ್ನು ಮುಂದುವರಿಸಲಾಗಿದೆ.. ಈ ಸೆಸ್ ಬದಲಿಗೆ ಹೆಚ್ಚುವರಿ ರಾಜ್ಯ ಸರಕು ಮತ್ತು ಸೇವಾ ತೆರಿಗೆ (ಎಸ್ ಜಿಎಸ್ ಟಿ) ಸಂಗ್ರಹಕ್ಕೆ ರಾಜ್ಯ ಸರ್ಕಾರಕ್ಕೆ ಅವಕಾಶ ನೀಡಬೇಕು.
  4. 1985ರಿಂದ ಸೇವಾ ತೆರಿಗೆಯನ್ನು ಪರಿಷ್ಕರಿಸಿಲ್ಲ, ಈ ದೀರ್ಘಾವಧಿಯಲ್ಲಿ ನಡೆದಿರುವ ಆರ್ಥಿಕ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಸೇವಾ ತೆರಿಗೆಯ ಗರಿಷ್ಠ ಮಿತಿಯನ್ನು ಹೆಚ್ಚಿಸಲು ಸಂವಿಧಾನಕ್ಕೆ ತಿದ್ದುಪಡಿಮಾಡಬೇಕು.
  5. ಬಂಡವಾಳ ವೆಚ್ಚಕ್ಕೆ ವಿಶೇಷ ನೆರವು ನೀಡುವ ಯೋಜನೆ ಸ್ವಾಗತಾರ್ಹವಾದುದು. ಆದರೆ ತೆರಿಗೆ ಹಂಚಿಕೆಯಲ್ಲಿ ಸಿಗುವ ಪಾಲಿನ ಆಧಾರದಲ್ಲಿಯೇ ಈ ವಿಶೇಷ ನೆರವು ನೀಡುತ್ತಿರುವ ಕಾರಣದಿಂದಾಗಿ ಈಗಾಗಲೇ ತೆರಿಗೆ ಹಂಚಿಕೆಯಲ್ಲಿ ಅನ್ಯಾಯಕ್ಕೀಡಾಗಿರುವ ಕರ್ನಾಟಕಕ್ಕೆ ಅತಿ ಕಡಿಮೆ ನೆರವು ಸಿಗುತ್ತಿದೆ. ಈ ಕಾರಣಕ್ಕಾಗಿ ವಿಶೇಷ ನೆರವು ಯೋಜನೆಯ ಮಾನದಂಡವನ್ನು ಬದಲಾಯಿಸಬೇಕು.
  6. ಆಯುಷ್ಮಾನ್ ಭಾರತ್ -ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಡಿ ಕೇಂದ್ರ ಸರ್ಕಾರ ಸುಮಾರು 69 ಲಕ್ಷ ಬಡ ಕುಟುಂಬಗಳನ್ನು ಮಾತ್ರ ಫಲಾನುಭವಿಗಳಾಗಿ ಗುರುತಿಸಿ ನೆರವು ನೀಡುತ್ತಿದೆ. ಇದರಿಂದಾಗಿ ಆರೋಗ್ಯ ಕರ್ನಾಟಕ ಯೋಜನೆಯ ಶೇಕಡಾ 60ರಷ್ಟು ಕುಟುಂಬಗಳಿಗೆ ಮಾತ್ರ ಕೇಂದ್ರ ಸರ್ಕಾರ ಅನುದಾನ ನೀಡುವಂತಾಗಿದ್ದು ಉಳಿದ ಕುಟುಂಬಗಳ ಹೊಣೆಯನ್ನು ರಾಜ್ಯ ಸರ್ಕಾರ ಹೊರಬೇಕಾಗಿದೆ. ಆದರೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಕೇಂದ್ರ ಸರ್ಕಾರ 1.14 ಕುಟುಂಬಗಳನ್ನು ಫಲಾನುಭವಿಗಳೆಂದು ಗುರುತಿಸಿದೆ… ಈ ನಿಯಮಾವಳಿಗಳನ್ನು ಬದಲಾಯಿಸಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಫಲಾನುಭವಿಗಳಾಗಿರುವರೆಲ್ಲರಿಗೂ ಆರೋಗ್ಯ ಯೋಜನೆಯನ್ನು ವಿಸ್ತರಿಸಬೇಕು.
  7.  ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರ್ಕಾರದ ನಿಯಮಾವಳಿಗಳಿಗೆ ಅನುಗುಣವಾಗಿ ಕರ್ನಾಟಕ ಸರ್ಕಾರ ರೈತರಿಂದ ಉತ್ಪನ್ನಗಳನ್ನು ಖರೀದಿ ಮಾಡುತ್ತಿದೆ. ಈ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾಗಿರು ರೂ.2,461.49 ಕೋಟಿ ಹಣವನ್ನು ಬಾಕಿ ಇರಿಸಿರುವುದರಿಂದಾಗಿ ರಾಜ್ಯ ಸರ್ಕಾರ ತನ್ನ ಖಜಾನೆಯಿಂದ ಹಣ ಬಿಡುಗಡೆ ಮಾಡಬೇಕಾಗಿದೆ. ಈ ಬಾಕಿ ಹಣವನ್ನು ಶೀಘ್ರ ಬಿಡುಗಡೆಗೊಳಿಸಬೇಕು.
  8.  ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರ ಗೌರವಧನ ಮತ್ತು ಸಾಮಾಜಿಕ ಭದ್ರತಾ ಪಿಂಚಣಿಗಾಗಿ ಕೇಂದ್ರ ಸರ್ಕಾರ ನೀಡುತ್ತಿರುವ ಹಣ ಅತಿ ಕಡಿಮೆ ಮೊತ್ತದಾಗಿದ್ದು ಕಳೆದ ಕೆಲವು ವರ್ಷಗಳಿಂದ ಅದನ್ನು ಪರಿಷ್ಕರಿಸಿಲ್ಲ. ಈ ಪರಿಸ್ಥಿತಿಯಲ್ಲಿ ಕೇಂದ್ರದ ಪಾಲನ್ನು ರಾಜ್ಯ ಸರ್ಕಾರವೇ ನೀಡಬೇಕಾದ ಪರಿಸ್ಥಿತಿ ಇದೆ. ಇದರಿಂದ ರಾಜ್ಯದ ಖಜಾನೆ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ರಾಜ್ಯದ ಅಂಗನವಾಡಿ ಕಾರ್ಯಕರ್ತರರಿಗೆ ಮಾಸಿಕ ರೂ,10000 ಗೌರವಧನ ನೀಡಲಾಗುತ್ತಿದ್ದು ಇದರಲ್ಲಿ ಕೇಂದ್ರದ ಪಾಲು 2700 ರೂಪಾಯಿ ಮಾತ್ರ. ಆಶಾ ಕಾರ್ಯಕರ್ತರಿಗೆ ನೀಡುವ 7000 ರೂ. ಗೌರವ ಧನದಲ್ಲಿ ಕೇಂದ್ರ ಸರ್ಕಾರದ ಪಾಲು ರೂ. 2000. ಅಂಗನವಾಡಿಯ ಅಡುಗೆ ಕೆಲಸಗಾರರು ಮತ್ತು ಸಹಾಯಕರಿಗೆ ರಾಜ್ಯ ಸರ್ಕಾರ ರೂ.3100 ವೇತನ ನೀಡುತ್ತಿದ್ದು ಇದರಲ್ಲಿ ಕೇಂದ್ರ ಸರ್ಕಾರ ಪಾಲು ರೂ.600 ಮಾತ್ರ. ಈ ಕಾರ್ಯಕರ್ತರ ವೇತನದ ಬಾಕಿಮೊತ್ತವನ್ನು ಭರಿಸುವುದು ರಾಜ್ಯ ಸರ್ಕಾರಕ್ಕೆ ಹೊರೆಯಾಗಿದೆ. ಅಂಗನವಾಡಿ ಮತ್ತು ಆಶಾಕಾರ್ಯಕರ್ತರ ಗೌರವ ಧನದಲ್ಲಿ ಕೇಂದ್ರ ಸರ್ಕಾರದ ಪಾಲನ್ನು ರೂ.5000ಕ್ಕೆ ಮತ್ತು ಅಡುಗೆ ಕೆಲಸಗಾರರು ಮತ್ತು ಕಾರ್ಯಕರ್ತರ ಗೌರವ ಧನದಲ್ಇ ಕೇಂದ್ರ ಸರ್ಕಾರದ ಪಾಲನ್ನು ಕನಿಷ್ಠ ರೂ.5000 ಹೆಚ್ಚಿಸಬೇಕು.
  9.  ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ)ಯಡಿ ಕೇಂದ್ರ ಸರ್ಕಾರ ಪ್ರತಿಯೊಂದು ಮನೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ರೂ.1.50 ಲಕ್ಷ ಮತ್ತು ರಾಜ್ಯ ಸರ್ಕಾರ 1.80 ಲಕ್ಷ ಸಹಾಯ ಧನ ನೀಡುತ್ತಿದೆ. ಆದರೆ ಮನೆನಿರ್ಮಾಣ ವೆಚ್ಚ ವಿಪರೀತ ಏರಿಕೆಯಾಗುವುದರಿಂದ ಕೇಂದ್ರ ಸರ್ಕಾರ ತನ್ನ ಪಾಲನ್ನು ಕನಿಷ್ಠ ಐದು ಲಕ್ಷ ರೂಪಾಯಿಗೆ ಹೆಚ್ಚಿಸಬೇಕು.
  10. ಪ್ರಧಾನ ಮಂತ್ರಿ ಆವಾಸ ಯೋಜನೆ (ಗ್ರಾಮೀಣ) ಪ್ರತಿ ಮನೆಗೆ ಕೇಂದ್ರ ಸರ್ಕಾರ 72 ಲಕ್ಷ ರೂಪಾಯಿ ಮತ್ತು ರಾಜ್ಯ ಸರ್ಕಾರ 42 ಲಕ್ಷ ರೂಪಾಯಿ ಸಹಾಯಧನ ನೀಡುತ್ತಿದೆ. ಬೆಲೆ ಏರಿಕೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ತನ್ನ ಪಾಲನ್ನು ಕನಿಷ‍್ಠ ಮೂರು ಲಕ್ಷ ರೂಪಾಯಿಗೆ ಹೆಚ್ಚಿಸಬೇಕು.
  11. 2023ರಲ್ಲಿ ಕರ್ನಾಟಕದ 236 ತಾಲೂಕುಗಳ ಪೈಕಿ 223 ತಾಲೂಕುಗಳಲ್ಲಿ ಬರ ಪರಿಸ್ಥಿತಿಯಿದ್ದ ಕಾರಣದಿಂದಾಗಿ 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿ ರೂ.35,162 ಕೋಟಿ ನಷ್ಟ ಉಂಟಾಗಿತ್ತು. ಇದಕ್ಕಾಗಿ ಕರ್ನಾಟಕ ರೂ.18,171 ಕೋಟಿ ಪರಿಹಾರ ಕೇಳಿದ್ದರೂ ಎನ್ ಡಿಆರ್ ಎಫ್ ನಿಂದ ಬಿಡುಗಡೆಯಾಗಿದ್ದು ಕೇವಲ ರೂ.3454 ಕೋಟಿ ಮಾತ್ರ. 2024ರಲ್ಲಿ ಅತಿವೃಷ್ಟಿಯಿಂದ ರಾಜ್ಯದಲ್ಲಿ ಮುಖ್ಯವಾಗಿ ಬೆಂಗಳೂರಿನಲ್ಲಿ ಆಗಿರುವ ಹಾನಿಗೆ ಎನ್ ಡಿಎಂಎಫ್ ನಿಂದ ಪರಿಹಾರ ಕೇಳಿದ್ದರೂ ಇಲ್ಲಿಯ ವರೆಗೆ ಚಿಕ್ಕಾಸು ಸಿಕ್ಕಿಲ್ಲ.
  12.  ರಾಷ್ಟ್ರೀಯ ವಿಕೋಪ ಪರಿಹಾರ ನಿಧಿ (ಎನ್ ಡಿಆರ್ ಎಫ್) ಮತ್ತು ಎಸ್ ಡಿಆರ್ ಎಫ್ ನಿಧಿಗಳಿಂದ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ನಷ್ಟಕ್ಕೆ ಸರಿಸಮನಾಗಿ ಪರಿಹಾರ ನೀಡಲು ಸಹಾಯವಾಗುವಂತೆ ಮತ್ತು ಪರಿಹಾರ ನೀಡುವ ಪ್ರಕ್ರಿಯೆ ಪಾರದರ್ಶಕವಾಗಿ ಹಾಗೂ ತ್ವರಿತಗತಿಯಲ್ಲಿ ನಡೆಯುವಂತೆ ಎನ್ ಡಿಆರ್ ಎಫ್ ಅನ್ನು ಸುಧಾರಣೆಗೊಳಪಡಿಸಬೇಕು. ಪರಿಹಾರ ನೀಡಿಕೆಯ ಮಾನದಂಡಗಳನ್ನು ಬರಪೀಡಿತ ರಾಜ್ಯಗಳಿಗೆ ನೆರವು.
  13.  ರೈಲ್ವೆ ಯೋಜನೆಗಳು ಸಂವಿಧಾನದ ಏಳನೇ ಶೆಡ್ಯೂಲ್ ಪ್ರಕಾರ ಕೇಂದ್ರ ಪಟ್ಟಿಯಲ್ಲಿದ್ದರೂ ಇವುಗಳ ಅನುಷ್ಠಾನದಲ್ಲಿ ರಾಜ್ಯ ಸರ್ಕಾರದ ಮೇಲೆ ಹೆಚ್ಚಿನ ಹೊರೆ ಬೀಳುತ್ತಿದೆ. ಪ್ರಸ್ತುತ ರೈಲ್ವೆ ಯೋಜನೆಗಳ ಸಂಬಂಧಿಸಿದ ಭೂಸ್ವಾಧೀನದ ಸಂಪೂರ್ಣ ವೆಚ್ಚ ಮತ್ತು ನಿರ್ಮಾಣ ವೆಚ್ಚದ ಅರ್ಧಭಾಗವನ್ನು ರಾಜ್ಯ ಸರ್ಕಾರವೇ ಭರಿಸುತ್ತಿದೆ. ಈ ಪಾಲುದಾರಿಕೆಯನ್ನು ಬದಲಾಯಿಸಿ ಭೂಸ್ವಾಧೀನ ವೆಚ್ಚದ ಅರ್ಧಪಾಲು ಮತ್ತು ನಿರ್ಮಾಣ ವೆಚ್ಚವನ್ನು ಪೂರ್ಣವಾಗಿ ಕೇಂದ್ರ ಸರ್ಕಾರವೇ ನೀಡಬೇಕು.
  14. ಮಹದಾಯಿ ಜಲಾನಯನ ಪ್ರದೇಶದ ಕಳಸಾ ನಾಲೆ ಯೋಜನೆಯ ರೂ.995.30 ಕೋಟಿ ವೆಚ್ಚದ ವಿಸ್ತೃತ ಯೋಜನಾ ವರದಿ (ಡಿಪಿಆರ್ )ಗೆ 2023ರ ಮಾರ್ಚ್ ನಲ್ಲಿಯೇ ಅನುಮೋದನೆ ನೀಡಲಾಗಿದೆ. ಈ ಯೋಜನೆಗೆ ಅಗತ್ಯವಿರುವ ಭೂಮಿಯಲ್ಲಿ 26,925 ಹೆಕ್ಟೇರ್ ಅರಣ್ಯಪ್ರದೇಶದ ಸ್ವಾಧೀನ ಪ್ರಕ್ರಿಯೆ ಗೋವಾ ರಾಜ್ಯದ ಆಕ್ಷೇಪದ ಕಾರಣದಿಂಧಾಗಿ ಕುಂಟುತ್ತಾ ಸಾಗಿದೆ. ಪ್ರಸ್ತುತ ಈ ಪ್ರಕ್ರಿಯೆ ರಾಷ್ಟ್ರೀಯ ವನ್ಯಜೀವಿ ಮಂಡಳಿ (ಎನ್ ಬಿಡಬ್ಯುಎಲ್ ) ಮತ್ತು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್ ಟಿಸಿಎ)ದ ಪರಿಶೀಲನೆಯಲ್ಲಿದೆ. ಈ ಯೋಜನೆಗೆ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರ ಅನುಮೋದನೆ ಪಡೆಯ ಬಹುದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟೀಕರಣ ನೀಡಿರುವ ಕಾರಣ ಶೀಘ್ರವಾಗಿ ಈ ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಬೇಕು. ಬಂಡೂರಿ ನಾಲೆ ತಿರುವು ಯೋಜನೆಗೆ ಅಗತ್ಯವಿರುವ 28 ಹೆಕ್ಟೇರ್ ಅರಣ‍್ಯ ಪ್ರದೇಶದ ಸ್ವಾಧೀನಕ್ಕಾಗಿ 2024ರ ಆಗಸ್ಟ್ ನಲ್ಲಿಯೇ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಈ ಬೇಡಿಕೆಗೆ ಸಂಬಂಧಿಸಿದ ಇತರ ಪ್ರಕ್ರಿಯೆಗಳನ್ನು ರಾಜ್ಯ ಸರ್ಕಾರ ಸಂಪೂರ್ಣಗೊಳಿಸಲಾಗಿದ್ದು ಕೇಂದ್ರ ಸರ್ಕಾರ ಶೀಘ್ರವಾಗಿ ಈ ನದಿ ತಿರುವು ಯೋಜನೆಗೆ ಅನುಮತಿ ನೀಡಬೇಕು.
  15.  ಕೃಷ್ಣಾ ಜಲವಿವಾದ ನ್ಯಾಯಮಂಡಳಿ ಕರ್ನಾಟಕಕ್ಕೆ 173 ಟಿಎಂಸಿ ನೀರಿನ ಪಾಲನ್ನು ನೀಡಿ 2010ರಲ್ಲಿಯೇ ಐತೀರ್ಪು ನೀಡಿದೆ. ಈ ನೀರಿನ ಪಾಲಿನಲ್ಲಿ 130 ಟಿಎಂಸಿಯನ್ನು ಬಳಸಿಕೊಂಡು ಉತ್ತರ ಕರ್ನಾಟಕದ ಏಳು ಜಿಲ್ಲೆಗಳಲಿಗೆ ನೀರುಣಿಸುವ ರೂ.51,148 ಸಾವಿರ ವೆಚ್ಚದ ಮೂರನೇ ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕೆ ಸಿದ್ದವಾಗಿದೆ. ಆದರೆ ಸುಪ್ರೀಮ್ ಕೋರ್ಟ್ ನಲ್ಲಿ ವಿಚಾರಣೆಯಲ್ಲಿರುವ ಪ್ರತಿವಾದಿ ರಾಜ್ಯಗಳ ಆಕ್ಷೇಪಣಾ ಅರ್ಜಿಗಳನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರ ನ್ಯಾಯಮಂಡಳಿಯ ಐತೀರ್ಪನ್ನು ಗೆಜೆಟ್ ನಲ್ಲಿ ಪ್ರಕಟಿಸಲು ನಿರಾಕರಿಸುತ್ತಾ ಬಂದಿದೆ. ಈ ಯೋಜನೆಯ ಅನಿವಾರ್ಯತೆಯನ್ನು ಸುಪ್ರೀಂಕೋರ್ಟ್ ಗೆ ಮನವರಿಕೆ ಮಾಡಿಕೊಟ್ಟು ಶೀಘ್ರವಾಗಿ ಐತೀರ್ಪನ್ನು ಗೆಜೆಟ್ ನಲ್ಲ ಪ್ರಕಟಿಸಿದರೆ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಬೇಕೆಂಬ ಪ್ರಸ್ತಾವವನ್ನು ಸಲ್ಲಿಸಲು ಅನುಕೂಲವಾಗುತ್ತದೆ.
  16.  ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಿದರೆ ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಮತ್ತು ದಾವಣಗೆರೆಯ ಬರಪೀಡಿತ ಪ್ರದೇಶಗಳಿಗೆ ವರದಾನವಾಗಲಿದೆ. ಈ ಘೋಷಣೆಯ ಪ್ರಸ್ತಾವಕ್ಕೆ ಗೆ ಸಾರ್ವಜನಿಕ ಹೂಡಿಕೆ ಸಮಿತಿ ಈಗಾಗಲೇ ಅಂಗೀಕಾರ ನೀಡಿದೆ. ಇದೇ ಬಜೆಟ್ ನಲ್ಲಿ ಈ ಘೋಷಣೆ ಮಾಡಬೇಕೆಂದು ಒತ್ತಾಯಿಸುತ್ತಿದ್ದೇವೆ.
  17. ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಪೂರೈಕೆ ಮತ್ತು 400 ಮೆಗಾವಾಟ್ ವಿದ್ಯುತ್ ಉತ್ಪಾದನೆಗಾಗಿಯೇ ಮೇಕೆದಾಟು ಯೋಜನೆಯನ್ನು ರೂಪಿಸಲಾಗಿದೆ. ಕೇಂದ್ರ ಸರ್ಕಾರ ಶೀಘ್ರವಾಗಿ ಈ ಯೋಜನೆಗೆ ಅನುಮತಿ ನೀಡಬೇಕು.
  18.  ಭೌಗೋಳಿಕ ವೈಶಿಷ್ಟ್ಯ ಮತ್ತು ಪರಿಸರ ಸಂಬಂಧಿ ಗುಣಲಕ್ಷಣಗಳಿಂದಾಗಿ ರಾಜ್ಯದ ಪಶ್ಚಿಮಘಟ್ಟ ಪ್ರದೇಶ ಹಲವಾರು ಬಗೆಯ ಸವಾಲುಗಳನ್ನು ಎದುರಿಸುತ್ತಿದೆ. ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಲಾಗಿರುವ ಪಶ್ಚಿಮಘಟ್ಟದ ಸಂರಕ್ಷಣೆಗಾಗಿ ಮಲೆನಾಡು ಪ್ರದೇಶದ ಸಮಗ್ರ ಅಭಿವೃದ್ದಿಗಾಗಿ ಐದು ವರ್ಷಗಳ ಅವಧಿಗೆ 10,000 ರೂಪಾಯಿಗಳ ವಿಶೇಷ ಅನುದಾನವನ್ನು ಘೋಷಿಸಬೇಕು.
  19.  ಕಲ್ಯಾಣ ಕರ್ನಾಟಕ ಎಂದು ಕರೆಯಲಾಗುವ ಹೈದರಾಬಾದ್ ಕರ್ನಾಟಕ ಪ್ರದೇಶ ಶಿಕ್ಷಣ, ಆರೋಗ್ಯ ಮತ್ತು ಮೂಲಸೌಕರ್ಯಗಳಿಗೆ ಸಂಬಂಧಿಸಿದಂತೆ ಪ್ರಾದೇಶಿಕ ಅಸಮತೋಲನದ ಸವಾಲನ್ನು ಎದುರಿಸುತ್ತಿದೆ. ಈ ಪ್ರದೇಶದ ಅಭಿವೃದ್ದಿಗೆ ರಾಜ್ಯ ಸರ್ಕಾರ ಪ್ರತಿವರ್ಷ 5,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತಿದೆ. ಇದಕ್ಕೆ ಪೂರಕವಾಗಿ ರೂ.5000 ಕೋಟಿ ರೂಪಾಯಿಗಳನ್ನು ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಘೋಷಿಸಬೇಕು.
  20.  ಕಳೆದ ಮೂರು ವರ್ಷಗಳಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರುತ್ತಿರುವ ಅನುದಾನದಲ್ಲಿಯೂ ಕಡಿತವಾಗಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಆರು ತಿಂಗಳಲ್ಲಿ 61 ಕೇಂದ್ರ ಪ್ರಾಯೋಜಿತ ಯೋಜನೆಗಳನ್ನು ಜಾರಿಗೆ ತರುತ್ತಿರುವ 23 ಇಲಾಖೆಗಳಿಗೆ ಅನುದಾನವನ್ನೇ ಬಿಡುಗಡೆ ಮಾಡಿಲ್ಲ.
  21.  ಕೇಂದ್ರ ಅನುದಾನಿತ ಯೋಜನೆಗಳ ಒಟ್ಟು ಸ್ವರೂಪವನ್ನೇ ಬದಲಾಯಿಸಬೇಕಾದ ಅಗತ್ಯ ಇದೆ. ಈ ಯೋಜನೆಗಳನ್ನು ರೂಪಿಸುವಾಗ ರಾಜ್ಯಗಳ ಜೊತೆ ಸಮಾಲೋಚನೆ ನಡೆಸುವ ಅಗತ್ಯ ಇದೆ. ಇದರಿಂದ ರಾಜ್ಯ ಸರ್ಕಾರ ನೀಡಬೇಕಾಗಿರುವ ಪಾಲಿನ ಬಗ್ಗೆ ನಮಗೂ ಸ್ಪಷ್ಟತೆ ಇರುತ್ತದೆ. ಈಗಿನ ವ್ಯವಸ್ಥೇಯಲ್ಲಿ ಬಹಳಷ್ಟು ಯೋಜನೆಗಳಿಗೆ ಮೂಲವೆಚ್ಚಕ್ಕಿಂತ ಕಡಿಮೆ ಮೊತ್ತದ ಹಣವನ್ನು ಕೇಂದ್ರ ಸರ್ಕಾರ ನೀಡುವುದರಿಂದ ರಾಜ್ಯ ಸರ್ಕಾರ ತನ್ನ ಸ್ವಂತಮೂಲದಿಂದ ಸಂಪನ್ಮೂಲವನ್ನು ಬಳಸಬೇಕಾಗುತ್ತದೆ. ಕೇಂದ್ರ ಸರ್ಕಾರ ಅನುದಾನಿತ ಯೋಜನೆಗಳಿಗೆ ಅನುಮತಿ ನೀಡಿದಾಗಲೇ ಅದಕ್ಕೆ ಸಂಬಂಧಿಸಿದ ಪೂರ್ಣ ವೆಚ್ಚವನ್ನು ಬಿಡುಗಡೆಗೊಳಿಸಿದರೆ ರಾಜ್ಯಗಳ ಮೇಲಿನ ಆರ್ಥಿಕ ಹೊರೆ ಕಡಿಮೆಯಾಗುತ್ತದೆ.
  22.  ಸಮಗ್ರ ಶಿಶು ರಕ್ಷಣಾ ಯೋಜನೆ( ವಾತ್ಸಲ್ಯ ಮಿಷನ್) ಸಮಗ್ರ ಶಿಕ್ಷಾ, ಅತ್ಯಾಚಾರ ಮತ್ತು ಪೋಕ್ಸೋ ಕಾಯ್ದೆ ಪ್ರಕರಣಗಳ ನಿರ್ವಹಣೆಗಾಗಿ ರಚಿಸಲಾಗಿರುವ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯ, ಉಣ್ಣೆ, ಹಾಲು, ಮಾಂಸ ಮೊದಲಾದ ವಸ್ತುಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿದ ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಹಣವನ್ನು ಮರುಪಾವತಿ ಪದ್ದತಿಯ ಬದಲಿಗೆ ಮುಂಗಡವಾಗಿ ಪಾವತಿಸಬೇಕು.
  23.  ರಾಷ್ಟ್ರೀಯ ಸಾಮಾಜಿಕ ನೆರವು ಯೋಜನೆಯಡಿ ಕೇಂದ್ರ ಸರ್ಕಾರ 14.41 ಲಕ್ಷ ಫಲಾನುಭವಿಗಳಿಗೆ ಪಿಂಚಣಿ ಮತ್ತಿತರ ರೂಪಗಳಲ್ಲಿ ಆರ್ಥಿಕ ನೆರವು ನೀಡುತ್ತಿದೆ. ರಾಜ್ಯ ಸರ್ಕಾರ ತನ್ನ ಸ್ವಂತ ಯೋಜನೆಗಳಡಿಯಲ್ಲಿ 68,66 ಲಕ್ಷ ಫಲಾನುಭವಿಗಳಿಗೆ ಆರ್ಥಿಕ ನೆರವು ನೀಡುತ್ತಿದೆ. ಈಗಿನ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಶೇಕಡಾ 17ರಷ್ಟು ಫಲಾನುಭವಿಗಳಿಗೆ ಮಾತ್ರ ನೆರವು ನೀಡುತ್ತಿದ್ದು ಇದನ್ನು ಬದಲಾಯಿಸಿ ರಾಷ್ಟ್ರೀಯ ಸಾಮಾಜಿಕ ನೆರವು ನೀಡುವ ಯೋಜನೆಯಡಿ ರಾಜ್ಯದ ಕನಿಷ್ಠ ಶೇಕಡಾ 50ರಷ್ಟು ಫಲಾನುಭವಿಗಳಿಗೆ ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡುವಂತೆ ಮಾಡಬೇಕು.
  24. 2023-24ರಲ್ಲಿ ಸಾಮಾಜಿಕ ಭದ್ರತಾ ಯೋಜನೆಳಿಗಾಗಿ ಖರ್ಚು ಮಾಡಲಾಗಿರುವ ಹಣ ರೂ.10,544 ಕೋಟಿ ಇದರಲ್ಲಿ ಕೇಂದ್ರ ಸರ್ಕಾರದ ಪಾಲು ರೂ.471 ಕೋಟಿ ಮಾತ್ರ ಇದು ಒಟ್ಟು ವೆಚ್ಚದ ಶೇಕಡಾ ನಾಲ್ಕರಷ್ಟಾಗುತ್ತದೆ. ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರದ ಅನುದಾನದ ಮೊತ್ತವನ್ನು ಪರಿಷ್ಕರಿಸಿಲ್ಲ. ಇದನ್ನು ಮಂದಿನ ಹಣಕಾಸು ವರ್ಷದಲ್ಲಿ ಬದಲಾಯಿಸಬೇಕು.

Published On - 5:24 pm, Fri, 31 January 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!