ಕರ್ನಾಟಕದಲ್ಲಿ ಕೈಗಾರಿಕಾ ಪಾರ್ಕ್ ಸ್ಥಾಪನೆಗೆ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಮನವಿ
ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಶ್ ಗೋಯೆಲ್ ಅವರನ್ನು ಭೇಟಿಯಾದ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಮಂಡ್ಯ, ಬೀದರ್, ರಾಯಚೂರು, ಹುಬ್ಬಳ್ಳಿ-ಧಾರವಾಡ, ಮೈಸೂರು, ಹಾಸನ, ಕೋಲಾರ, ಮಂಗಳೂರು ಮತ್ತು ಚಾಮರಾಜನಗರಗಳ ವಿರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು ಜಾರಿಗೆ ತರಬೇಕೆಂದು ಪ್ರಸ್ತಾವನೆ ಸಲ್ಲಿಸಿದ್ದಾರೆ. ಕರ್ನಾಟಕದಾದ್ಯಂತ ಸೂಕ್ತ ಕೈಗಾರಿಕಾ ಕಾರಿಡಾರ್ ಅಥವಾ NICDP ಚೌಕಟ್ಟಿನ ಅಡಿಯಲ್ಲಿ ಕೈಗಾರಿಕಾ ಉದ್ಯಾನವನಗಳನ್ನು ಸ್ಥಾಪಿಸುವುದು ಈ ಪ್ರಸ್ತಾವನೆಯಲ್ಲಿ ಸೇರಿದೆ.

ಬೆಂಗಳೂರು, ನವೆಂಬರ್ 13: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ (HD Kumaraswamy) ಅವರು ಇಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಮಂತ್ರಿಗಳಾದ ಪಿಯೂಶ್ ಗೋಯೆಲ್ ಅವರನ್ನು ದೆಹಲಿಯಲ್ಲಿ ಭೇಟಿಯಾಗಿದ್ದಾರೆ. ಈ ವೇಳೆ ಎಚ್.ಡಿ ಕುಮಾರಸ್ವಾಮಿ ಅವರು ಪಿಯೂಶ್ ಗೋಯೆಲ್ ಅವರಿಗೆ ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಹಾಸನ, ಮಂಗಳೂರು, ಹುಬ್ಬಳ್ಳಿ-ಧಾರವಾಡ, ರಾಯಚೂರು ಮತ್ತು ಬೀದರ್ ಜಿಲ್ಲೆಗಳನ್ನು ಒಳಗೊಂಡ ಸುವಿಶಾಲವಾದ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP) ಅನುಷ್ಠಾನ ಮಾಡಬೇಕೆಂದು ಕೋರಿ ಮನವಿಯನ್ನು ಸಲ್ಲಿಸಿದ್ದಾರೆ.
ಕೈಗಾರಿಕೆ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ರಾಜ್ಯಾದ್ಯಂತ ಸೂಕ್ತ ಕೈಗಾರಿಕಾ ಕಾರಿಡಾರ್ ಯೋಜನೆಯ ಚೌಕಟ್ಟಿನ ಅಡಿಯಲ್ಲಿ ಕೈಗಾರಿಕಾ ಪಾರ್ಕ್ಗಳನ್ನು ಸ್ಥಾಪಿಸುವ ಕುರಿತು ಕೇಂದ್ರ ಸಚಿವ ಪಿಯೂಶ್ ಗೋಯೆಲ್ ಅವರೊಂದಿಗೆ ಎಚ್.ಡಿ. ಕುಮಾರಸ್ವಾಮಿ ಸುದೀರ್ಘವಾಗಿ ಸಮಾಲೋಚನೆ ನಡೆಸಿದ್ದಾರೆ.
Today, I submitted a representation to Hon’ble Union Minister for Commerce & Industry Shri @PiyushGoyal avaru, outlining the vast industrial potential of Mandya, Bidar, Raichur, Hubli–Dharwad, Mysuru, Hassan, Kolar, Mangaluru, and Chamarajanagar.
The proposal includes the… pic.twitter.com/zWBZiYsPVj
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) November 13, 2025
ಇದನ್ನೂ ಓದಿ: ಜೆಡಿಎಸ್ 25ರ ಸಂಭ್ರಮದಲೇ ಜಿಟಿ ದೇವೇಗೌಡಗೆ ಶಾಕ್ ಕೊಟ್ಟ ಕುಮಾರಸ್ವಾಮಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಂಕಲ್ಪದಂತೆಯೇ ಪ್ರಾದೇಶಿಕ ಕೈಗಾರಿಕಾ ಬೆಳವಣಿಗೆಯನ್ನು ಬಲಪಡಿಸಿ ಉತ್ತೇಜಿಸಲು, ಸಾಗಾಣಿಕೆಯ ಮೂಲಸೌಕರ್ಯವನ್ನು ಅಧಿಕವಾಗಿ ಅಭಿವೃದ್ಧಿಪಡಿಸಲು ಹಾಗೂ ಕರ್ನಾಟಕದ ಉದ್ದಗಲಕ್ಕೂ ಬೃಹತ್ ಪ್ರಮಾಣದಲ್ಲಿ ಉದ್ಯೋಗಾವಕಾಶ ಸೃಷ್ಟಿಸಲು ಈ ಯೋಜನೆಯು ಬಹುದೊಡ್ಡ ಮಟ್ಟದಲ್ಲಿ ಕೊಡುಗೆ ನೀಡುತ್ತದೆ ಎಂಬ ಅಂಶವನ್ನು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಸಚಿವ ಪಿಯೂಶ್ ಗೋಯಲ್ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.
ಇದನ್ನೂ ಓದಿ: ವಿಧಾನಸೌಧದಲ್ಲೇ ಭಯೋತ್ಪಾದಕರನ್ನಿಟ್ಟುಕೊಂಡು ಪರಪ್ಪನ ಅಗ್ರಹಾರ ಜೈಲಿನ ಬಗ್ಗೆ ಮಾತನಾಡ್ತಾರೆ: ಹೆಚ್ಡಿ ಕುಮಾರಸ್ವಾಮಿ ವಾಗ್ದಾಳಿ
ಈ ಯೋಜನೆ ಅನುಷ್ಠಾನಕ್ಕೆ ಬಂದರೆ ಸಾಗಾಣಿಕೆ ಸುಲಭವಾಗಿ ಕೈಗಾರಿಕಾಭಿವೃದ್ಧಿ ವೇಗಗತಿಯಲ್ಲಿ ಸಾಗುತ್ತದೆ. ಉದ್ದೇಶಿತ ಜಿಲ್ಲೆಗಳಲ್ಲಿ ಯೋಜನೆ ಬಂದರೆ ಇಡೀ ರಾಜ್ಯಕ್ಕೆ ಸಮಗ್ರವಾಗಿ ಅನುಕೂಲ ಆಗುತ್ತದೆ. ಮುಖ್ಯವಾಗಿ ಈ ಪ್ರದೇಶಗಳು ಸಾಮೂಹಿಕವಾಗಿ ದೊಡ್ಡ ಮಟ್ಟದಲ್ಲಿ ಕೈಗಾರಿಕಾ ಅಭಿವೃದ್ಧಿ ಕಾಣುವುದಲ್ಲದೆ, ಸಮತೋಲಿತ ಪ್ರಾದೇಶಿಕ ಬೆಳವಣಿಗೆಗೆ ಕಾಣಿಕೆ ನೀಡುತ್ತವೆ ಎಂದು ಕುಮಾರಸ್ವಾಮಿ ಚರ್ಚೆಯ ವೇಳೆ ಒತ್ತಿ ಹೇಳಿದರು.
ಈ ಪ್ರಸ್ತಾವಿತ ಕೈಗಾರಿಕಾ ಪಾರ್ಕುಗಳನ್ನು ಸೂಕ್ತವಾದ ಕೈಗಾರಿಕಾ ಕಾರಿಡಾರ್ ಇಲ್ಲವೇ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP) ಚೌಕಟ್ಟಿನ ಅಡಿಯಲ್ಲಿ ಪರಿಗಣಿಸಬೇಕೆಂದು ವಿನಂತಿಸಿದ ಕುಮಾರಸ್ವಾಮಿ ಅವರು; ಈ ಜಿಲ್ಲೆಗಳನ್ನು ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ಗಳಿಗೆ ಸಂಯೋಜಿಸುವ ಮೂಲಕ ಕರ್ನಾಟಕವು ಉದ್ಯೋಗ ಸೃಷ್ಟಿಯಲ್ಲಿ ನಿರ್ಣಾಯಕ ಪಾತ್ರ ವಹಿಸಲು ಅನುಕೂಲವಾಗುತ್ತದೆ. ಅಲ್ಲದೆ, ಸಾಕಾಣಿಗೆ ಸುಲಭವಾಗಿ ಖಾಸಗಿ ಬಂಡವಾಳ ಹೂಡಿಕೆಯಲ್ಲೂ ಗಮನಾರ್ಹ ಪ್ರಗತಿ ಸಾಧಿಸಲಿದೆ ಎಂದು ಉಕ್ಕು ಸಚಿವರು ಗೋಯಲ್ ಅವರಿಗೆ ವಿವರಿಸಿದರು.
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಎಚ್ಡಿ ಕುಮಾರಸ್ವಾಮಿ ಸಲ್ಲಿಸಿದ ಪ್ರಸ್ತಾವನೆಯನ್ನು ಕೇಂದ್ರ ಸಚಿವ ಪಿಯೂಶ್ ಗೋಯಲ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಕರ್ನಾಟಕ ರಾಜ್ಯದ ಕೈಗಾರಿಕಾಭಿವೃದ್ಧಿಯಲ್ಲಿ ಕೈಜೋಡಿಸುವುದಾಗಿ ಭರವಸೆ ನೀಡಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:02 pm, Thu, 13 November 25




